i
- ಸಮಾಜವಾದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಅವರು ಸೋಮವಾರ ತಡ ರಾತ್ರಿ ನಿಧನರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಮ್ಮೂರು ದಾರದಹಳ್ಳಿಯಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯಲ್ಲಿರುವ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.ಕಾಂಗ್ರೆಸ್ ಸೇರಿ ರಾಜಕೀಯ ಕ್ಷೇತ್ರ ಕಾಲಿಟ್ಟ ಅವರು 1971ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977ರಲ್ಲಿ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಸೋಲು ಕಂಡಿದ್ದರಿಂದಾಗಿ 1978ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದ ಖ್ಯಾತಿ ಇವರಿಗೆ ಸಲ್ಲುತ್ತದೆ.ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಆನಂತರ ಅರಸು ಅವರ ಕ್ರಾಂತಿರಂಗ ಸೇರ್ಪಡೆಯಾಗಿದ್ದರು. ಇದಾದ ನಂತರ ಕ್ರಾಂತಿರಂಗ ತೊರೆದು ಜನತಾಪಕ್ಷ ಸೇರಿದ ಅವರು, 1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ವಿಧಾನಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದರು.1999ರಲ್ಲಿ ಮತ್ತೆ ಕಾಂಗ್ರೆಸ್ ಸೇರಿ ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. 2009ರಲ್ಲಿ ಬಿಜೆಪಿ ಸೇರಿದ ಅವರು ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜಕೀಯ, ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 2014ರಿಂದ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದು ಹುಟ್ಟೂರು ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಸೋಮವಾರ ತಡ ರಾತ್ರಿ ಅವರು ನಿಧನರಾಗಿದ್ದಾರೆ.
ಸಂತಾಪ- ಮಾಜಿ ಸಚಿವರು ಮತ್ತು ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಮಾಜವಾದಿ ಹಿನ್ನೆಲೆಯ ಚಂದ್ರೇಗೌಡರು ನನಗೆ ಆತ್ಮೀಯರಾಗಿದ್ದವರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿಕಾರ್ಯನಿರ್ವಹಿಸಿದ್ದು ಅವರ ಹೆಗ್ಗಳಿಕೆ. ನುರಿತ ಆಡಳಿತಗಾರ ಮತ್ತು ಉತ್ತಮ ಸಂಸದೀಯ ಪಟುವಾಗಿದ್ದ ಚಂದ್ರೇಗೌಡರು ಇಂದಿರಾಗಾಂಧಿಯವರಿಗೆ ಲೋಕಸಭಾ ಸ್ಥಾನವನ್ನು ಬಿಟ್ಟುಕೊಟ್ಟು ಅವರ ರಾಜಕೀಯ ಮರುಜನ್ಮಕ್ಕೆ ಕಾರಣರಾಗಿದ್ದವರು.ಹಿರಿಯ ನಾಯಕನ ಅಗಲಿಕೆಯಿಂದ ರಾಜಕೀಯ ಕ್ಷೇತ್ರ ಬಡವಾಗಿದೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿ,ಕರ್ನಾಟಕದ ಶ್ರೇಷ್ಠ ಸಂಸದೀಯಪಟುಗಳಲ್ಲಿ ಒಬ್ಬರು, ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಜನತಾ ಪರಿವಾರದ ಕೊಂಡಿ ಆಗಿದ್ದ ಡಿ.ಬಿ.ಚಂದ್ರೇಗೌಡರು ನಿಧನರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿ ಡಿಬಿಚಂದ್ರೇಗೌಡಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1978ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಆಪ್ತ ವರ್ಗದವರ ನೋವಿನಲ್ಲಿ ನಾನೂ ಕೂಡ ಭಾಗಿ ಆಗುತ್ತೇನೆಂದು ಡಿಸಿಎಂ ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದ ಸಂತಾಪ-ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪಿಲಾಜನಹಳ್ಳಿ ಎಂ.ಜಯಣ್ಣ, ಜೆಡಿಎಸ್ ಮುಖಂಡರಾದ ಕೆ.ಶಂಕರಮೂರ್ತಿ, ಗಿರಿ, ರಘುನಾಥ್, ಹಿರಿಯೂರು ಹೆಚ್.ನಾಗರಾಜ್ ಸೇರಿದಂತೆ ಮತ್ತಿತರ ಗಣ್ಯರು ಡಿ.ಬಿ.ಚಂದ್ರೇಗೌಡರ ನಿಧನಕ್ಕೆ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಕ್ಕೆ ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.