i
ಮಕ್ಕಳು, ಮಹಿಳೆಯರು, ಬಡವರು ಅಭಿವೃದ್ಧಿಯಾದರೆ ಸಮಸಮಾಜ ನಿರ್ಮಾಣ ಸಾಧ್ಯ-ಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಕ್ಕಳು, ಮಹಿಳೆಯರು, ಬಡವರು ಎಲ್ಲರ ಬೆಳವಣಿಗೆಯಾದರೆ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23ನೆ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ನಾವು ಕಾರ್ಮಿಕರ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
2022-23ನೇ ಸಾಲಿಗೆ ಸಂಬಂಧಿಸಿದಂತೆ 9.6ಲಕ್ಷ ಫಲಾನುಭವಿಗಳಿಗೆ ರೂ.225.98/- ಕೋಟಿಗಳನ್ನು ಡಿ.ಬಿ.ಟಿ ಮೂಲಕ ಪಾವತಿಸಲಾಗುತ್ತಿದೆ. ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು. ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಿ ಮುಖ್ಯವಾಹಿನಿಗೆ ಬರಬೇಕು ಎಂದರು.
ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಶೂದ್ರ ಮತ್ತು ಮಹಿಳೆಯರನ್ನು ಶತ-ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು ಎಂದರು.
ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ 83 ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ ಆಗಿದೆ ಎಂದರು. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.
ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಎಸ್. ಹೊರಟ್ಟಿ ಮಾತನಾಡಿ ಸರ್ಕಾರದ ಯೋಜನೆಯು ಬಡವರಿಗೆ, ಕಾರ್ಮಿಕರಿಗೆ, ಮಕ್ಕಳಿಗೆ ಸದುಪಯೋಗವಾಗಬೇಕು. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಕರ್ನಾಟಕ ಬಾಲ ಕಾರ್ಮಿಕರ ನಿರ್ಮೂಲ ಸೊಸೈಟಿ ತಂದಿರುವುದು ಸಾಧನೆ. ಸರ್ಕಾರವು ಮಕ್ಕಳ ಸರ್ವಾಂಗೀಯ ಅಭಿವೃದ್ಧಿಗೆ ಕಾರಣವಾಗಿರುವುದು ಅತ್ಯಂತ ಶ್ಲಾಘನೀಯ. ಮಕ್ಕಳ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆ ತಂದಿದೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಮನೆ, ಕಟ್ಟಡಗಳು ಸುಂದರವಾಗಿ ಕಾಣಲು ನೂರಾರು ಕಾರ್ಮಿಕರ ಬೆವರು ಮತ್ತು ಶ್ರಮವಿರುತ್ತದೆ. ಪ್ರಜಾಪ್ರಭುತ್ವದ ನಮ್ಮ ದೇಶದಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ, ಪತ್ರಿಕಾರಂಗ ಮುಖ್ಯ. ಸಮಾಜದ ಸುಭದ್ರತೆಗೆ ಕೃಷಿಕ, ಸೈನಿಕ, ಶಿಕ್ಷಕ, ಕಾರ್ಮಿಣ ಬಹಳ ಮುಖ್ಯ ಎಂದರು. ಕಟ್ಟಡ ಕಾರ್ಮಿಕರ ಮಕ್ಕಳ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಈ ಕಾರ್ಮಿಕ ಇಲಾಖೆ ಸಮರ್ಥವಾಗಿ ಸಾಗಲಿದೆ. ನಾವೂ ಕೂಡ ಈ ಇಲಾಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.
ಕಾರ್ಮಿಕ ಸಚಿವರು ಮತ್ತು ಮಂಡಳಿಯ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಮಾತನಾಡಿ ಸರ್ಕಾರವು ಕಟ್ಟಡ ಕಾರ್ಮಿಕರಿಗೆ ವಿಶೇಷ ಅನುದಾನ ನೀಡಿ ಸಾಮಾಜಿಕ ಭದ್ರತೆ ನೀಡುವ ಕೆಲಸವನ್ನು ಮಾಡಿದೆ. ಅಸಂಘಟಿತ ಕಾರ್ಮಿಕರು, ಬಡವರಿಗೆ ಸಾಮಾಜಿಕ ಭದ್ರತೆ ನೀಡುವ ದಿಸೆಯಲ್ಲಿ ನಾವು ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಕೆಲಸ ಮಂಡಳಿಯು ಸೆಸ್ಮುಖಾಂತರ ಅನುದಾನದವನ್ನು ಸಂಗ್ರಹಿಸುತ್ತದೆ ಎಂದರು.
ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಮಾತನಾಡಿ ಸರ್ಕಾರವು ಬಡವರ ಪರವಾಗಿಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು 5 ಗ್ಯಾರಂಟಿಗಳನ್ನು ಚಾಣಾಕ್ಯತನದಿಂದ ಸಂಪನ್ಮೂಲವನ್ನು ಕ್ರೋಢೀಕರಿಸಿ 4 ಯೋಜನೆ ಜಾರಿಗೆ ತಂದಿದ್ದಾರೆ ಮತ್ತೊಂದು ಯೋಜನೆ ಜಾರಿಗೆ ಬರಲಿದೆ ಎಂದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನಕಾರ್ಯದರ್ಶಿ ಡಾ. ಮೊಹಮ್ಮದ್ ಮೊಹಿಸಿನ್, ಕಾರ್ಮಿಕ ಇಲಾಖೆ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಡಾ. ಭಾರತಿ ಡಿ, ಸೇರಿದಂತೆ ಹಿರಿಯ ಗಣ್ಯರು ಉಪಸ್ಥಿತರಿದ್ದರು.