i
ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಮಾಡಿದ ಕಿರಾತಕ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಒಂದೇ ಕುಟುಂಬದ ಐವರ ಮೇಲೆ ದಾಳಿ ಮಾಡಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ.
ನಾಲ್ವರ ಹತ್ಯೆ ಮಾಡಿರುವ ಪ್ರಕರಣವು ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸುವಂತೆ ಮಾಡಿದ್ದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಹತ್ಯೆಯಲ್ಲಿ ಮೃತಪಟ್ಟವರನ್ನು ಹಸೀನಾ(46) ಇವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಡಿವೈಎಸ್ಪಿ ದಿನಕರ ಸೇರಿದಂತೆ ಮತ್ತಿತರ ಪೊಲೀಸ್ ಅಧಿಕಾರಿಗಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಅಲ್ಲದೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲಿಸುತ್ತಿದ್ದಾರೆ.
ಚೂರಿ ಇರಿತದಿಂದ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಬೋಳು ತಲೆಯ ಅಪರಿಚಿತ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೃತ್ಯ ಎಸಗಿದ ಸಂದರ್ಭದಲ್ಲಿ ದುಷ್ಕರ್ಮಿ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿದ್ದನು ಎನ್ನಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಮಾಧ್ಯಮಗಳೊಂದಿಗೆ ಮಾತನಾಡಿ ದುಷ್ಕರ್ಮಿಯೊಬ್ಬ ಹರಿತವಾದ ಆಯುಧ ಬಳಸಿ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳ ಮೇಲೆ ದಾಳಿ ಹತ್ಯೆ ಮಾಡಿದ್ದು ಕೊಲೆಗಾರನಿಗೆ ಕಳ್ಳತನ ಮಾಡುವ ಉದ್ದೇಶ ಇದ್ದಂತೆ ಕಾಣುತ್ತಿಲ್ಲ. ಮನೆಯಿಂದ ಚಿನ್ನಾಭರಣ ಸೇರಿದಂತೆ ಯಾವುದೇ ರೀತಿಯ ಬೆಲೆ ಬಾಳುವ ವಸ್ತುಗಳು ಕಳವಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.ಮೃತ ಹಸೀನಾರ ಅತ್ತೆ ಮೇಲೂ ದುಷ್ಕರ್ಮಿ ದಾಳಿ ಮಾಡಿ ಹರಿತವಾದ ಆಯುಧದಿಂದ ದಾಳಿ ಮಾಡಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕತ್ಯವನ್ನು ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಲಾಗುತ್ತದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.