![](https://www.chandravallinews.com/wp-content/uploads/2023/11/WhatsApp-Image-2023-11-19-at-9.31.20-PM-1024x576.jpeg)
i
17 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮ ಅಭಿಯಾನದಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಾಲ್ಲೂಕಿನ ವಿವಿಧ ಮತಗಟ್ಟೆಗಳಿಗೆ ಆಕಸ್ಮಿಕ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಕಾರ್ಯವೈಖರಿಯನ್ನು ಪರಿಶೀಲಿಸಿದರು, ಅಲ್ಲದೆ 17 ವರ್ಷ ತುಂಬಿದವರಿಂದಲೂ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭಗೊಂಡಿದ್ದು, 18 ವರ್ಷ ವಯಸ್ಸು ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಈಗಾಗಲೆ ಪಟ್ಟಿಯಲ್ಲಿರುವವರ ಹೆಸರು ಮತ್ತಿತರ ತಿದ್ದುಪಡಿ, ಸ್ಥಳಾಂತರ, ಹೀಗೆ ವಿವಿಧ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲು ಅವಕಾಶ ನೀಡಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳು ದೊಡ್ಡಸಿದ್ದವ್ವನಹಳ್ಳಿ, ಜೆ.ಎನ್. ಕೋಟೆ, ಕುಂಚಿಗನಾಳ್, ಗೊಲ್ಲರಹಟ್ಟಿ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು, ಅಲ್ಲದೆ ಬಿಎಲ್ಒ ಅವರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಗತ್ಯ ಮಾಹಿತಿ ಪಡೆದುಕೊಂಡರು. ಈಗಾಗಲೆ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ, ಅಥವಾ ಏನಾದರೂ ತಪ್ಪಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಜನಸಂಖ್ಯೆ ಆಧಾರದಲ್ಲಿ ಅಂದಾಜು ಶೆ. 70 ರಷ್ಟು ಜನರು 18 ವರ್ಷಕ್ಕೂ ಮೇಲ್ಪಟ್ಟವರು ಇರುತ್ತಾರೆ, ಇವರೆಲ್ಲರೂ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು, ಅರ್ಹತಾ ದಿನವನ್ನು ಇದೀಗ ವರ್ಷಕ್ಕೆ 04 ನಿಗದಿಪಡಿಸಿದ್ದು, ಹೀಗಾಗಿ 17 ವರ್ಷ ವಯಸ್ಸು ಆದವರ ಅರ್ಜಿಯನ್ನೂ ಕೂಡ ಪಡೆಯಬಹುದಾಗಿದ್ದು, ಅಂತಹವರ ಅರ್ಜಿಯನ್ನು ಪಡೆದು, ಅವರಿಗೆ 18 ವರ್ಷ ಪೂರ್ಣಗೊಂಡ ಬಳಿಕ ಅಂತಹವರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಬೇಕು, ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿ, ಅಕ್ಕಪಕ್ಕದ ಮನೆಗಳ ಯುವ ಮತದಾರರ ನೊಂದಣಿಗೆ ಕರೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಬೇಕು, ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನೂ ಕೂಡ ಉತ್ತಮ ಸ್ಥಿತಿಗತಿಯಲ್ಲಿ ಇರಿಸಿಕೊಳ್ಳಬೇಕು, ಯಾವುದೇ ಸಮಸ್ಯೆಗಳಿದ್ದಲ್ಲಿ ಉನ್ನತ ಅಧಿಕಾರಿಗಳಿಗೆ ತಿಳಿಸಿ, ಸರಿಪಡಿಸುವ ಕಾರ್ಯ ಆಗಬೇಕು ಎಂದು ತಾಕೀತು ಮಾಡಿದರು.
ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಇದೇ ಸಂದರ್ಭದಲ್ಲಿ 18 ವರ್ಷ ಹಾಗೂ 17 ವರ್ಷ ಪೂರ್ಣಗೊಂಡವರಿಂದ ನಮೂನೆ-06 ಅನ್ನು ಪಡೆದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೆ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದ ಅವರು, ಗ್ರಾಮದಲ್ಲಿ ಯಾರೂ ಕೂಡ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು, ಮತದಾರರು, ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಮತದಾರರ ಗುರುತಿನ ಕಾರ್ಡ್ಗಳನ್ನು ನೇರವಾಗಿ ಆಯಾ ಮತದಾರರ ಮನೆಯ ವಿಳಾಸಕ್ಕೆ ಪೋಸ್ಟ್ ಮೂಲಕವೇ ತಲುಪಿಸಲಾಗುವುದು. ಯಾವುದೇ ಸಮಸ್ಯೆ ಅಥವಾ ಗೊಂದಲಗಳಿದ್ದಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ತಹಸಿಲ್ದಾರ್ ನಾಗವೇಣಿ ಸೇರಿದಂತೆ ಆಯಾ ಬೂತ್ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.