i
ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಅವರ ಪತಿ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಸಿ ವಿರೇಂದ್ರ ಪಪ್ಪಿ ಅವರು ಪೂರ್ಣಿಮಾ ಮತ್ತು ಶ್ರೀನಿವಾಸ್ ಅವರನ್ನು ಸ್ವಾಗತಿಸಿ ಗೌರವಿಸಿದರು.
ಕಳೆದ ವಿಧಾನಸಭೆ ಅವಧಿಯಲ್ಲಿ ಹಿರಿಯೂರು ವಿಧಾನಸಭೆ ಕ್ಷೇತ್ರದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಶಾಸಕರಾಗಿ ಉತ್ತಮ ಕಾರ್ಯನಿರ್ವಹಿಸಿ ದ್ದರು. ಪೂರ್ಣಿಮಾ ಅವರ ತಂದೆ ಎ.ಕೃಷ್ಣಪ್ಪ ಅವರು ಮೂಲತಃ ಕಾಂಗ್ರೆಸ್ ಪಕ್ಷದವರಾಗಿದ್ದು ಶಾಸಕರಾಗಿ ಸಮಾಜ ಕಲ್ಯಾಣ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ನಗರದ ಉಸ್ತುವಾರಿ ಸಚಿವರಾಗಿದ್ದರು. 2013ರಲ್ಲಿ ಕೆಲವು ಕಾರಣಗಳಿಂದ ಕಾಂಗ್ರೆಸ್ ಪಕ್ಷ ತೊರೆದಿದ್ದ ಕೃಷ್ಣಪ್ಪ ಅವರು ನಂತರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಕೃಷ್ಣಪ್ಪ ಅವರ ರಾಜಕೀಯ ನಾಯಕತ್ವ ಅರಿತಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೃಷ್ಣಪ್ಪ ಅವರ ಪುತ್ರಿ ಮಾಜಿ ಶಾಸಕಿ ಪೂರ್ಣಿಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿ ಪಕ್ಷಕ್ಕೆ ಸೇರಿಸಿಕೊಂಡರು. ಚಿತ್ರದುರ್ಗ ನಗರದ ಕಾಂಗ್ರೆಸ್ ಭವನಕ್ಕೆ ಪ್ರಥಮವಾಗಿ ಬಂದಂತ ಪೂರ್ಣಿಮಾ ಅವರನ್ನು ಜಿಲ್ಲಾ ಮಟ್ಟದ ಕಾಂಗ್ರೆಸ್ ಮುಖಂಡರು ಸ್ವಾಗತಿಸಿ ಅಭಿನಂದಿಸಿದರು ಎಂದು ಕಾಂಗ್ರೆಸ್ ಮುಖಂಡ ರಘು ಗೌಡ ತಿಳಿಸಿದ್ದಾರೆ.