i
ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಸೂಕ್ತ ಕಾನೂನು ಕ್ರಮ– ಗೃಹ ಸಚಿವ ಪರಮೇಶ್ವರ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ ಸುವರ್ಣಸೌಧ:
ರಾಜ್ಯದಲ್ಲಿ ಈಗಾಗಲೇ ವಾಸಿಸುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರು ಮತ್ತು ವಿದೇಶಿ ವಲಸಿಗರನ್ನು ಪತ್ತೆ ಹಚ್ಚಿ ಅವರ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉಮಾಶ್ರೀ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿನ ಈಗಾಗಲೇ ವಾಸಿಸುತ್ತಿರುವ ಅಕ್ರಮ ಬಾಂಗ್ಲಾ ವಲಸಿಗರು ಮತ್ತು ವಿದೇಶಿ ವಲಸಿಗರನ್ನು ಪತ್ತೆ ಹಚ್ಚುವ ಸಲುವಾಗಿ ಗುಪ್ತಚರ ವಿಭಾಗದ ಸಿಬ್ಬಂದಿ, ಠಾಣ ಸಿಬ್ಬಂದಿಯು ಸೂಕ್ತ ಗಸ್ತು ಮಾಡುವ ಮೂಲಕ ಪತ್ತೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಅಂತಹ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳುವಂತೆ ಎಫ್.ಆರ್.ಆರ್.ಓ ಅವರ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರುಪಡಿಸಲಾಗುವುದು ಎಂದರು.
ರಾಜ್ಯದಲ್ಲಿ ಇದುವರೆಗೆ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ವಿರುದ್ಧ 764 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ದ 53 ಪ್ರಕರಣ ಹಾಗೂ ವಿದೇಶಿಯರ ವಿರುದ್ದ 711 ಪ್ರಕರಣಗಳು ದಾಖಲಾಗಿದ್ದು, 135 ಅಕ್ರಮ ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದರು.
ಈ ಅಕ್ರಮ ವಲಸಿಗರಿಗೆ ನಕಲಿ ಆಧಾರ್ ಕಾರ್ಡ್ ಹಾಗೂ ಇನ್ನಿತರ ದಾಖಲೆಗಳನ್ನು ಸೃಷ್ಠಿಸಿ ಕೊಡುತ್ತಿರುವ ಏಜೆಂಟ್ಗಳ ವಿರುದ್ದ 4 ಹಾಗೂ ಮಧ್ಯವರ್ತಿಗಳ ವಿರುದ್ದ 4 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.