i
ಬಳ್ಳಾರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ– ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ ಸುವರ್ಣಸೌಧ:
ಕೆ.ಎಂ.ಇ.ಆರ್.ಸಿ ಅಡಿ ರೂ.300 ಕೋಟಿಗಳನ್ನು ಬಳ್ಳಾರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸರ್ಕಾರದಿಂದ ಮುಂದಿನ ಆಯವ್ಯಯದಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಆರ್ ಪಾಟೀಲ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಕಂಪ್ಲಿ ಶಾಸಕ ಗಣೇಶ್.ಜೆ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಬಳ್ಳಾರಿ ಸುತ್ತಮುತ್ತ 300 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕ್ಯಾನ್ಸರ್ ಆಸ್ಪತ್ರೆಯಿಲ್ಲ. ಅಗತ್ಯವಾಗಿ ಬಳ್ಳಾರಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ತೆರೆಯಬೇಕಿದೆ. ಸದ್ಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ದಾಖಲೆಗಳ ಪ್ರಕಾರ 2020ರಲ್ಲಿ 3783, 2021 ರಲ್ಲಿ 3859 ಹಾಗೂ 2022ರಲ್ಲಿ 3951 ಕ್ಯಾನ್ಸರ್ ರೋಗಿಗಳು ವಾರ್ಷಿಕವಾಗಿ ದಾಖಲಾಗುತ್ತಿದಾರೆ. ಇಲ್ಲಿ ಕ್ಯಾನ್ಸರ್ ಖಾಯಿಲೆಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಕಿರಣ ಉಪಕರಣ ಹಾಗೂ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ನುರಿತ ತಜ್ಞ ವೈದ್ಯರು ಕಾರ್ಯನಿರ್ವಹಿಸುತ್ತಿದಾರೆ. ವಿಮ್ಸ್ನ ರೆಡಿಯೋಥೆರಪಿ ವಿಭಾಗದಲ್ಲಿ ಕೋಬಾಲ್ಟ್, ಬ್ರೇಕಿ, ಕೀಮೋ, ಇನ್ಪ್ಯೂಜನ್ ತೆರಪಿಗಳು ಹಾಗೂ ರೇಡಿಯೇಷನ್ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಗೆ ಶಿಫಾರಸ್ಸು ಮಾಡಲಾಗುತ್ತಿದೆ ಎಂದರು.
37 ಮೈನಿಂಗ್, 38 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬಳ್ಳಾರಿ ಜಿಲ್ಲೆಯಲ್ಲಿವೆ. ಇವುಗಳ ಮಾಲಿನ್ಯದಿಂದ ಸ್ಥಳೀಯ ಜನರಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿದೆ. ಬಡ ಜನರು ದೂರದ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುವುದು ದುಸ್ತರವಾಗಿದೆ. ದಯಮಾಡಿ ಜಿಲ್ಲೆಯಲ್ಲಿ ಕೆ.ಎಂ.ಇ.ಆರ್.ಸಿ ಅನುದಾನದಲ್ಲಿ ಕಿದ್ವಾಯಿ ಮಾದರಿಯಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಪ್ರತ್ಯೇಕ ಆಸ್ಪತ್ರೆ ನಿರ್ಮಿಸುವಂತೆ ಸಚಿವರಲ್ಲಿ ಶಾಸಕ ಗಣೇಶ್.ಜೆ.ಎನ್.ಕೋರಿದರು.