i
ಕನ್ನಡ ಭಾಷೆಯ ಬೆನ್ನಿಗೆ ನಿಂತ ಸಿಎಂ, ಕನ್ನಡ ನಾಡಿನಲ್ಲಿ ನಾಮಫಲಕ ಕನ್ನಡವಿರಲೇಬೇಕು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ನಾಡಿನಲ್ಲಿ ಪ್ರತಿಯೊಬ್ಬರು ತಮ್ಮ ಅಂಗಡಿ ಮುಂಗಟ್ಟುಗಳ ಮುಂಭಾಗದ ನಾಮಫಲಕಗಳಲ್ಲಿ ಕನ್ನಡವಿರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಕನ್ನಡಪರ ಸಂಘಟೆಗಳ ಕನ್ನಡ ನಾಮಫಲಕ ಹಾಕಬೇಕೆನ್ನುವ ಬಗ್ಗೆ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಕ್ಕೂ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಎಚ್ಚರಿಸಿದರು.
ಇಂದು ಬಿಬಿಎಂಪಿ, ಪೊಲೀಸ್ ಇಲಾಖೆಗಳ ಜೊತೆ ಈ ವಿಷಯದ ಬಗ್ಗೆ ಸಭೆ ನಡೆಸಲಾಗುತ್ತದೆ. ಬೇರೆ ಭಾಷೆಯ ಬಗ್ಗೆ ವಿರೋಧವಿಲ್ಲವಾದರೂ, ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದರು.
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ಸುಗ್ರೀವಾಜ್ಞೆ ಹೊರಡಿಸಿ 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು ಎಂದು ಸಿಎಂ ಹೇಳಿದರು.ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ ಎಂದು ಅವರು ತಿಳಿಸಿದರು.ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು. ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ.ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದರು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದುಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಸಿಎಂ ಸೂಚನೆ ನೀಡಿದರು.