i
ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಿರಿಸಿದ ಹಣ ಬಳಕೆಯಾಗಬೇಕು- ದಿವ್ಯಪ್ರಭು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಧಿಕಾರಿಗಳು ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ನೆರವು ನೀಡುವುದರ ಜೊತೆಗೆ, ಯಾವುದೇ ಒತ್ತಡ ಹಾಗೂ ರಾಜಿಗೆ ಒಳಗಾಗದೆ, ಅಪರಾಧಿಗಳಿಗೆ ಶಿಕ್ಷೆ ದೊರಕುವವರೆಗೂ ಕಾನೂನು ರೀತ್ಯಾ ನೈತಿಕವಾಗಿಯೂ ಬೆಂಬಲ ನೀಡಿ, ಮನೋಸ್ಥೈರ್ಯ ತುಂಬಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಜರುಗಿದ 2023ನೇ ಸಾಲಿನ 4ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಅನುಸಾರ ದೌರ್ಜನ್ಯಕ್ಕೆ ಒಳಗಾದವರಿಗೆ ರಕ್ಷಣೆ ಒದಗಿಸಿ ಪರಿಹಾರ ನೀಡಲಾಗುತ್ತಿದೆ. ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾದರೆ ದಿನಭತ್ಯೆಯನ್ನು ಸಹ ನೀಡಲಾಗುತ್ತಿದೆ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿದರೂ ಶೇ.1 ರಿಂದ 2 ರಷ್ಟು ಪಕ್ರರಣಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿರುವುದು ಕಳವಳದ ಸಂಗತಿ. ಖುಲಾಸೆ ಪ್ರಕರಣಗಳು ದೌರ್ಜನ್ಯಗಳ ಹೆಚ್ಚಳಕ್ಕೆ ಪರೋಕ್ಷವಾಗಿ ಕಾರಣವಾಗುತ್ತವೆ. ಇದಕ್ಕೆ ಅನುವು ಮಾಡಿಕೊಡದೆ ಆರೋಪಿಗಳಿಗೆ ಶಿಕ್ಷೆ ಆಗುವಂತಾಗಲು ನೆರವಾಗಬೇಕು ಎಂದರು.
ಜಾಗೃತಿ ಕಾರ್ಯಕ್ರಮಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ:
ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲಿನ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಿ ವ್ಯಾಪಕ ಪ್ರಚಾರ ನೀಡಬೇಕು. ಜಾಗೃತಿ ಕಾರ್ಯಕ್ರಮಗಳನ್ನು ಕೇವಲ ಪರಿಶಿಷ್ಟ ಜಾತಿ ಹಾಗೂ ಪಂಗಡ ಕಾಲೋನಿಗಳಲ್ಲಿ ಆಯೋಜಿಸದೇ, ಎಲ್ಲಾ ವರ್ಗಗದ ಜನರು ಸೇರುವ ಸಾರ್ವಜನಿಕ ಸ್ಥಳ, ಜನನಿಬಿಡ ಪ್ರದೇಶಗಳಲ್ಲಿ ನಡೆಸಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳು ತಪ್ಪದೇ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 62,252 ಪರಿಶಿಷ್ಟ ಜಾತಿ ಮಕ್ಕಳು ಹಾಗೂ 49,441 ಪರಿಶಿಷ್ಟ ಪಂಗಡದ ಮಕ್ಕಳು 1 ರಿಂದ 10 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮಂಜೂರಿಗೆ ಅರ್ಜಿ ಸಲ್ಲಿಸಿಲ್ಲ ಎಂಬುದು ಅತ್ಯಂತ ಗಂಭೀರ ವಿಷಯವಾಗಿದೆ. ಶಿಕ್ಷಣ ಇಲಾಖೆಯಿಂದ ಜಿಲ್ಲೆಯಾದ್ಯಂತ ಆಂದೋಲನ ಮಾದರಿಯಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಹಾಕಿಸಬೇಕು. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಬೇಕು. ಒರ್ವ ಅರ್ಹ ಫಲಾನುಭವಿ ವಿದ್ಯಾರ್ಥಿ ವೇತನ ಪಡೆಯುವುದರಿಂದ ವಂಚಿತರಾದರೆ ಸಂಬಂಧ ಪಟ್ಟವರನ್ನು ನೇರವಾಗಿ ಹೊಣೆ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು.
ಅನುದಾನ ಕೈ ತಪ್ಪಿದರೆ ಕ್ರಮ:
ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಲ್ಯಾಣಕ್ಕೆ ಮೀಸಲಿರಿಸಿದ ಹಣವು ಸದ್ಬಳಕೆಯಾಗಬೇಕು. ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು. ಅನುದಾನ ಕೈ ತಪ್ಪಿದರೆ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ. ಹೀಗಾಗಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಎಚ್ಚರಿಕೆ ನೀಡಿದರು.
ನಾಯಕನಹಟ್ಟಿ ಭಾಗದಲ್ಲಿ ಅಡಿಕೆ ಹಾಗೂ ಕೃಷಿ ಕಾರ್ಮಿಕರಾಗಿ ಚಿಕ್ಕಮಕ್ಕಳು ಕಾರ್ಯನಿರ್ವಹಿಸುತ್ತಿರುವ ಕುರಿತು ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಚಿತ್ರದುರ್ಗ ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಕಾರ್ಯ ನಿರ್ವಹಿಸಿ, ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹಗಳನ್ನು ತಡೆಗಟ್ಟಬೇಕು. ನೇರವಾಗಿ ದೂರು ಕೇಳಿ ಬಂದ ಕಡೆ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ನೇರವಾಗಿ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆಹಚ್ಚಿದರೆ, ಯಾವುದೇ ಮುಲಾಜಿಗೂ ಒಳಗಾಗದೆ, ಸಂಬಂಧಪಟ್ಟ ಪ್ರದೇಶದ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಅನುಮಾತು ಮಾಡುವುದಾಗಿ ಎಚ್ಚರಿಸಿದರು.
ಕಾರ್ಮಿಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಾಹಿತಿ ಶಿಕ್ಷಣ ಹಾಗೂ ಸಂವಹನ(ಐ.ಇ.ಸಿ) ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಜಾಗೃತಿ ವಿಡಿಯೋ ತುಣಕುಗಳನ್ನು ತಯಾರಿಸಿ ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸಬೇಕು. ಈಗಾಗಲೇ ಮಕ್ಕಳ ಸಹಾಯವಾಣಿ 1098 ಕುರಿತು ಶಾಲೆಗಳ ಆವರಣದಲ್ಲಿ ಫಲಕಗಳನ್ನು ಬರೆಯುವ ಕಾರ್ಯ ನಡೆಯುತ್ತಿದೆ. ಶೀಘ್ರವಾಗಿ ಕಾರ್ಯ ಪೂರ್ಣಗೊಳ್ಳುವಂತೆ ಅಧಿಕಾರಿಗಳು ಮೇಲ್ವಚಾರಣೆ ನಡೆಸಬೇಕು ಎಂದರು.
ಪೊಲೀಸ್ ಠಾಣೆಗಳಲ್ಲಿ ದೌರ್ಜನ್ಯ ತಡೆ ಸಭೆ :
ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ದೌರ್ಜನ್ಯ ತಡೆ ಸಭೆಯನ್ನು ನಡೆಸಲಾಗಿದೆ. ಈ ಸಭೆಯ ಆಯೋಜನೆಯ ಕುರಿತು ಮುಂಚಿತವಾಗಿ ಪ್ರತಿಕೆಗಳಲ್ಲಿ ಪ್ರಕಟಣೆ ನೀಡಿ, ಸಾರ್ವಜನಿಕರನ್ನು ಸಭೆ ಆಹ್ವಾನಿಸಲಾಗಿತ್ತು. ಇದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿಯೂ ದೌರ್ಜನ್ಯ ತಡೆ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಸಭೆಯ ಕುರಿತು ಪತ್ರಿಕೆ ಪ್ರಕಟಣೆ ನೀಡುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಸಭೆಯಲ್ಲಿ ಸ್ಪಷ್ಟಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಾಗೃತಿ ಕಾರ್ಯಕ್ರಮಗಳಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಂತದ ಅಧಿಕಾರಿ ಪಾಲ್ಗೊಳ್ಳಲು ನಿರ್ದೇಶನ ನೀಡಲಾಗುವುದು. ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರಿಗೆ ಪ್ರಕರಣ ಹಿಂಪಡೆಯುವಂತೆ ಅಥವಾ ರಾಜಿಗೆ ಒಳಗಾಗುವಂತೆ ಯಾವುದೇ ಪೊಲೀಸ್ ಸಿಬ್ಬಂದಿ ಒತ್ತಡ ಹೇರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣ ಕಂಡುಬಂದರೆ ಜಾಗೃತಿ ಸಮಿತಿ ಸದಸ್ಯರು ನೇರವಾಗಿ ಸಂಪರ್ಕಿಸುವಂತೆ ಹೇಳಿದರು.
ಜಿಲ್ಲೆಯಾದ್ಯಂತ ಈ ವರ್ಷ 24 ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಂದಿನ ಫೆಬ್ರವರಿ ವರೆಗೂ ಕಾರ್ಯಕ್ರಮಗಳ ಪಟ್ಟಿ ಸಿದ್ದವಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 23 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 01 ಪೋಕ್ಸೋ ಪ್ರಕರಣದಲ್ಲಿ 50 ಸಾವಿರ ರೂ., 22 ಜಾತಿ ನಿಂದನೆ ಪ್ರಕರಣದಲ್ಲಿ ಸಂತ್ರಸ್ತರಿಗೆ ಒಟ್ಟು 49 ಲಕ್ಷ ರೂ. ಪರಿಹಾರ ನೀಡಲಾಗಿದೆ. ನವೆಂಬರ್ ಅಂತ್ಯಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ 88 ದೌರ್ಜನ್ಯ ಪ್ರಕರಣಗಳು ಬಾಕಿಯಿದ್ದು, ಒಂದು ಪ್ರಕರಣದಲ್ಲಿ ಆರೋಪಿಗಳು ಬಿಡುಗಡೆಯಾಗಿದ್ದಾರೆ. ಯಾವುದೇ ಪ್ರಕರಣದಲ್ಲಿ ಶಿಕ್ಷೆಯಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ, ಓ.ಚಿನ್ನಪ್ಪ, ಬೋರಸ್ವಾಮಿ, ರಂಗಸ್ವಾಮಿ, ಜಿ.ಪಂ.ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪರಮೇಶ್ವರಪ್ಪ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, 2ನೇ ಜಿಲ್ಲಾ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ನಾಗವೇಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.