i
ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು 2024ರ ಹೊಸ ವರ್ಷಾಚರಣೆ ಪ್ರಯುಕ್ತ ಡಿಸೆಂಬರ್ 31 ಸಂಜೆ 5 ಗಂಟೆಯಿಂದ ಜನವರಿ 01 ರ 5 ಗಂಟೆಯವರೆಗೆ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಒಪೇರ ಜಂಕ್ಷನ್, ಯು.ಬಿ.ಸಿಟಿ, ಗರುಡಾ ಮಾಲ್, ಫೀನಿಕ್ಸ್ ಮಾಲ್, ಇಂದಿರಾನಗರ 100 ಅಡಿ ರಸ್ತೆ, ಫೋರಂ ಮಾಲ್ ಕೋರಮಂಗಲ, ಮಾಲ್ ಆಫ್ ಏಶಿಯಾ, ಒರಾಯನ್ ಮಾಲ್ ಮತ್ತು ಇನ್ನಿತರೆ 20 ಸೂಕ್ಷ್ಮ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಹಾಗೂ ವಿಪತ್ತುಗಳು ಸಂಭವಿಸದಂತೆ ತಡೆಯಲು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ವಿವಿಧ 20 ಅಗ್ನಿಶಾಮಕ ವಾಹನಗಳು, ಅಧಿಕಾರಿ ಸಿಬ್ಬಂದಿಗಳನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.
ರಾಜ್ಯದ ಪ್ರಮುಖ ನಗರಗಳಾದ ಮೈಸೂರು, ಮಂಗಳೂರು, ಮಣಿಪಾಲ್(ಉಡುಪಿ), ಶಿವಮೊಗ್ಗ, ಕಾರವಾರ, ಹುಬ್ಬಳ್ಳಿ, ಕಲಬುರಗಿ ಹಾಗೂ ಬಳ್ಳಾರಿ ನಗರಗಳ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಅಗ್ನಿಶಾಮಕ ವಾಹನದೊಂದಿಗೆ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ. ಇನ್ನುಳಿದ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಯಾವುದೇ ತುರ್ತು ಪರಿಸ್ಥಿತಿ ನಿರ್ವಹಿಸಲು ಅಗ್ನಿಶಾಮಕ ಸೇವೆಯನ್ನು ಸನ್ನದ್ದ ಸ್ಥಿತಿಯಲ್ಲಿ ಇರುವಂತೆ ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.