i
ಲೋಕಸಭಾ ಚುನಾವಣೆಗೆ ಕೆ ಆರ್ ಎಸ್ ಪಕ್ಷ ಸಜ್ಜು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
2024ರ ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಪ್ರಮುಖ ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷಗಳ ಸ್ಪರ್ಧಾ ಕಾಂಕ್ಷಿಗಳ ಹುಡುಕಾಟದಲ್ಲಿದ್ದಾರೆ. ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದು ಚುನಾವಣೆಗೆ ಸಂಪೂರ್ಣ ಸಜ್ಜಾಗಿದೆ.
ಈ ಕುರಿತು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ವೆಂಕಟೇಶ್ ಮೂರ್ತಿರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಅದಕ್ಕೆ ಪೂರ್ವಭಾವಿಯಾಗಿ ಸ್ಪರ್ದಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಸಂದರ್ಶನವು 2024ರ ಜನವರಿ 6 ಮತ್ತು 7 ನೇ ತಾರೀಖಿನಂದು ಪಕ್ಷದ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ನೆಡೆಯಲಿದೆ. ಇದಕ್ಕೆ ಸಂಭಂದಿಸಿದಂತೆ ಈಗಾಗಲೇ ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು.
ಅಭ್ಯರ್ಥಿ ಆಕಾಂಕ್ಷಿಗಳು ಹಾಲಿ ಸದಸ್ಯರಾಗಿದ್ದರೆ 5000 ಹಾಗೂ ಹೊಸದಾಗಿ ಸೇರ್ಪಡೆಯಾಗಿ ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾಗುವ ಆಕಾಂಕ್ಷಿಗಳು ಹತ್ತು ಸಾವಿರ ಶುಲ್ಕ ಕಟ್ಟಬೇಕಾಗುತ್ತದೆ. ಸಂದರ್ಶನದ ನಂತರ ಸಂಭಾವ್ಯ ಅಭ್ಯರ್ಥಿಗಳನ್ನು ಪಕ್ಷ ಘೋಷಣೆ ಮಾಡಲಿದೆ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ 9611720802 ನಂಬರಿಗೆ ಕರೆ ಮಾಡಬಹುದು ಎಂದು ಹೇಳಿದರು.
ಜಿಲ್ಲಾ ಕೆ.ಆರ್ ಎಸ್ ಪಕ್ಷದ ಘಟಕದ ಉಪಾಧ್ಯಕ್ಷ ಶಿವಶಂಕರ್ ಮಾತನಾಡಿ ಕೆಆರ್ಎಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆಯಲ್ಲಿ 195 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಅದರಂತೆ ಮುಂದಿನ ಲೋಕಸಭಾ ಚುನಾವಣೆಗೆ ಕರ್ನಾಟಕದ 28 ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಮ್ಮ ಪಕ್ಷ ಆರಂಭದಿಂದಲೂ ನಾಡಿನ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುತ್ತ ವ್ಯವಸ್ಥೆಗಳಲ್ಲಿನ ಅಕ್ರಮ, ಅನ್ಯಾಯ,ದುರಾಡಳಿತ, ಭ್ರಷ್ಟಾಚಾರದ ವಿರುದ್ದವಾಗಿ ಹೋರಾಡುತ್ತಾ ಬಂದಿದೆ. ಅದರಲ್ಲೂ ಮುಖ್ಯವಾಗಿ ನಾಡಿನ ನೆಲ, ಜಲ,ಭಾಷೆ ಸಂರಕ್ಷಣೆಯ ಗುರಿ ನಮ್ಮದು. ಆದ್ದರಿಂದ ಭ್ರಷ್ಟಾಚಾರ ವಿರೋಧಿಗಳಿಗೆ ನಮ್ಮ ಪಕ್ಷ ಉತ್ತಮ ವೇದಿಕೆಯಾಗಿದೆ. ಬದಲಾದ ಕಾಲಘಟ್ಟದಲ್ಲಿ ದ್ಯೇಯ, ಸಿದ್ಧಾಂತಕ್ಕೆ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ಬದ್ಧವಾಗಿದೆ. ಹಾಗಾಗಿ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇರುವ ಕನ್ನಡಪರ ಕಾಳಜಿ ಹೊಂದಿರುವ ರಾಜ್ಯದ ಅಭಿವೃದ್ಧಿ ಬಗ್ಗೆ ನೈಜ ಕಾಳಜಿ ಹೊಂದಿರುವವರೆಲ್ಲರೂ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷ ಸೇರಲು ಮುಕ್ತ ಅವಕಾಶವಿದೆ. ಹಾಗಾಗಿ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು ನಮ್ಮ ಪಕ್ಷ ಸೇರಿ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಶಿವಶಂಕರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್, ತಾಲೂಕು ಅಧ್ಯಕ್ಷ ವೇಣುಗೋಪಾಲ್, ಸಾಸಲು ನಾಗರಾಜ್, ವಿಜಯಕುಮಾರ್ ಮುಂತಾದವರು ಹಾಜರಿದ್ದರು.