i
ಕರ್ತವ್ಯ ಲೋಪ ಎಸಗಿದ ತಹಶೀಲ್ದಾರ್ ಅರುಂಧತಿ ಅಮಾನತು…
ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ನೆಲಮಂಗಲ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಅರುಂಧತಿ ಅವರನ್ನು ಅಧಿಕಾರ ದುರುಪಯೋಗ ಕರ್ತವ್ಯ ಲೋಪದ ಆಧಾರದ ಮೇಲೆ ಅಮಾನತ್ತುಗೊಳಿಸಿ ಸರ್ಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷಾ ಆದೇಶ ಹೊರಡಿಸಿದ್ದಾರೆ. ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 94(ಸಿ) ಅಡಿಯಲ್ಲಿ ಅನರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಶಾಸಕ ಎನ್.ಶ್ರೀನಿವಾಸ್ ಅವರು ತಹಶೀಲ್ದಾರ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಂಚಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಸಂಬಂಧಪಟ್ಟವರು ತಹಶೀಲ್ದಾರ್ ಅರುಂಧತಿ ವಿರುದ್ಧ ತನಿಖೆ ಮಾಡುವಂತೆ ಅಪರ ಪ್ರಾದೇಶಿಕ ಆಯುಕ್ತರಿಗೆ ತನಿಖಾಧಿಕಾರಿಯನ್ನಾಗಿ ನೇಮಿಸಿ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶಿಸಿತ್ತು. ತಹಶೀಲ್ದಾರ್ ಕೆ. ಅರುಂಧತಿ ಅವರ ಕರ್ತವ್ಯ ಲೋಪದ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಆ ವರದಿಯನ್ನಾಧರಿಸಿ ಸರ್ಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷಾ ಅವರು ತಹಶೀಲ್ದಾರ್ ಕೆ.ಅರುಂದತಿ ಅವರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.