i
ಕುಡಿವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ನೀರು ಪೂರೈಕೆ ಮಾಡಿ- ಸಚಿವ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಬರುವ ಬೇಸಿಗೆಯಲ್ಲಿ ಅಂದಾಜು 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ ಸಾಧ್ಯತಗಳಿದ್ದು, ಇಂತಹ ಸಮಸ್ಯಾತ್ಮಕ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸನಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಹೊಸದುರ್ಗ ತಾಲ್ಲೂಕಿನಲ್ಲಿ 36, ಚಳ್ಳಕೆರೆ-32, ಚಿತ್ರದುರ್ಗ-43, ಮೊಳಕಾಲ್ಮೂರು-67, ಹಿರಿಯೂರು-57 ಹಾಗೂ ಹೊಳಲ್ಕೆರೆ-43 ಸೇರಿದಂತೆ ಒಟ್ಟು 278 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಂಭವವಿದೆ. ಹೀಗಾಗಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೆ ಯೋಜನೆಗಳನ್ನು ರೂಪಿಸಲಾಗಿದೆ ಎಂದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಮಾತನಾಡಿ, ಬರ ಪರಿಸ್ಥಿತಿಯ ತುರ್ತು ನಿರ್ವಹಣೆಗಾಗಿ ಜಿಲ್ಲೆಗೆ ಈಗಾಗಲೆ 09 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ ಮೇವು ಪೂರೈಕೆ, ಟ್ಯಾಂಕರ್ ಮೂಲಕ ನೀರು ಸರಬರಾಜು, ಖಾಸಗಿ ಬೋರ್ವೆಲ್ ಬಾಡಿಗೆಗೆ ಪಡೆಯುವುದು ಹಾಗೂ ತುರ್ತು ಪೈಪ್ಲೈನ್ ಕಾಮಗಾರಿಗಳಿಗೆ ಹಾಗೂ ತಾತ್ಕಾಲಿಕ ಪರಿಹಾರ ಕಾರ್ಯಗಳಿಗೆ ವಿನಿಯೋಗಿಸಿ, ಬರ ಪರಿಸ್ಥಿತಿ ನಿರ್ವಹಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಇರುವ ಕಡೆಗಳಲ್ಲಿ ಬೋರ್ವೆಲ್ ಕೊರೆಯಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹ ಧನ-ಶೀಘ್ರ ಅನುಮೋದನೆ ನಿರೀಕ್ಷೆ:
ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಪ್ರೋತ್ಸಾಹಧನಕ್ಕೆ ಸಂಬಂಧಪಟ್ಟಂತೆ ಯಾವ ಕ್ರಮವಹಿಸಲಾಗಿದೆ ಎಂಬ ಶಾಸಕ ಟಿ.ರಘುಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಅವರು, ಪ್ರಸ್ತುತ ಅಡಿಕೆ ಬೆಳೆಯನ್ನು ಬೆಳೆಯುತ್ತಿರುವ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದ್ದು, ಇತರೆ ಪ್ರದೇಶಗಳಲ್ಲಿ ಅಡಿಕೆ ಬೆಳೆಯುವ ರೈತರಿಗೆ ಹನಿ ನೀರಾವರಿ ಅಡಿ ಸಹಾಯಧನ ಪಡೆಯಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಿರುವುದಿಲ್ಲ. ಹೀಗಾಗಿ ಜಿಲ್ಲೆಯ ಜನಪ್ರತಿನಿಧಿಗಳ ಸೂಚನೆಯಂತೆ, ಜಿಲ್ಲೆಯ ಅಡಿಕೆ ಬೆಳೆಗಾರರಿಗೂ ಸರ್ಕಾರದಿಂದ ಪ್ರೋತ್ಸಾಹಧನ ಲಭ್ಯವಾಗುವಂತಾಗಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕಳೆದ ನ. 29 ರಂದು ತೋಟಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಸಚಿವರು ಒಪ್ಪಿಗೆ ನೀಡಿದ್ದಾರೆ. ಶೀಘ್ರವೇ ಸರ್ಕಾರ ಇದಕ್ಕೆ ಅನುಮೋದನೆ ನೀಡುವ ನಿರೀಕ್ಷೆ ಇದೆ ಎಂದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು, ಹನಿ ನೀರಾವರಿ ಹಾಗೂ ನರೇಗಾ ಯೋಜನೆಯಡಿ ಸಿಗುವ ಸಹಾಯಧನದಂತೆ ಜಿಲ್ಲೆಯ ಅಡಿಕೆ ಬೆಳೆಗೂ ಒದಗಿಸಬೇಕು ಎಂಬ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯಾಗುವ ನಿರೀಕ್ಷೆ ಇದೆ ಎಂದು ಸಭೆಗೆ ತಿಳಿಸಿದರು.
ಹೊಸ ಟೆಂಡರ್ ಕರೆಯಲು ಸೂಚನೆ:
ಜಿಲ್ಲೆಯ ವಸತಿ ನಿಲಯಗಳಿಗೆ ಗುಣಮಟ್ಟದ ಆಹಾರ ಸಾಮಗ್ರಿ ಸರಬರಾಜು, ಪ್ರತಿ ದಿನ ತಾಜಾ ಸೊಪ್ಪು, ತರಕಾರಿ ಖರೀದಿಸುವ ವ್ಯವಸ್ಥೆಯಾಗಬೇಕು. ಇದು ಸಮರ್ಪಕವಾಗಿ ಅನುಷ್ಠಾನವಾಗಬೇಕು. ಈ ಹಿನ್ನಲೆಯಲ್ಲಿ ಹೊಸದಾಗಿ ಟೆಂಡರ್ ಕರೆಯುವಂತೆ ಸಚಿವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗೆ ಸೂಚನೆ ನೀಡಿದರು.
ಅಧಿಕಾರಿಗಳು ಹಾಸ್ಟೆಲ್ಗೆ ತೆರಳಿ ಪರಿಶೀಲಿಸಿ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿ, ಅವರ ಸಮಸ್ಯೆಗಳು, ದೂರುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.
ಮಕ್ಕಳ ಊಟದಲ್ಲಿ ರಾಜಕೀಯ ಮಾಡುವಂತಹ ಟೆಂಡರ್ದಾರರು ನಮಗೆ ಬೇಡ. ಹೈಕೋರ್ಟ್ ಹೊಸ ಟೆಂಡರ್ ಕರೆಯಲು ತಿಳಿಸಿದೆ. ಹೀಗಾಗಿ ಹೊಸ ಟೆಂಡರ್ ಕರೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು. ಹಾಸ್ಟೆಲ್ಗೆ ಖುದ್ದು ಭೇಟಿ ನೀಡಲಾಗಿದ್ದು, ತಾಜಾ ತರಕಾರಿ, ಉತ್ತಮ ಆಹಾರ, ಪರಿಕರ ವಿತರಣೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.
ಅನಾವಶ್ಯಕ ಡಿವೈಡರ್ ತೆರವಿಗೆ ತಾಕೀತು:
ಚಿತ್ರದುರ್ಗ ನಗರದಲ್ಲಿ ನಿರ್ಮಿಸಲಾಗಿರುವ ಡಿವೈಡರ್ಗಳು ನಿಯಮಾನುಸಾರ ಇದೆಯೋ ಇಲ್ಲವೋ ಎಂದು ತನಿಖಾ ತಂಡ ಪರಿಶೀಲಿಸಿದ್ದು, ವರದಿ ಸಲ್ಲಿಸಬೇಕಿದೆ. ವರದಿ ಪರಿಶೀಲನೆ ಬಳಿಕ ಕ್ರಮ ವಹಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಚಿತ್ರದುರ್ಗ ನಗರದ ದಾವಣಗೆರೆ ರಸ್ತೆ ಮಾರ್ಗದ ಒನ್ವೇ ರಸ್ತೆಯಲ್ಲೂ ಡಿವೈಡರ್ ಹಾಕಿದ್ದೀರಾ. ನಗರದಲ್ಲಿ ನಿರ್ಮಿಸಿರುವ ಡಿವೈಡರ್ಗಳನ್ನು ತೆರವುಗೊಳಿಸುವ ಬಗ್ಗೆ ವಿಚಕ್ಷಣದಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಪರಿವೀಕ್ಷಣಾ ವರದಿ ನಂತರ ವರದಿಯಲ್ಲಿ ಸೂಚಿಸಿರುವಂತೆ ಡಿವೈಡರ್ ತೆರವುಗೊಳಿಸಬೇಕು. ಅನಾವಶ್ಯಕ ಡಿವೈಡರ್ಗಳ ತೆರವುಗೊಳಿಸಬೇಕು ಎಂಬುದು ಜನರ ಬೇಡಿಕೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಬರುವ ಮೊದಲೇ ತೆರವುಕಾರ್ಯ ಆಗಬೇಕು. ಎಲ್ಲೆಲ್ಲಿ ಅವಶ್ಯ ಇದೆಯೋ ಆ ಕಡೆ ಡಿವೈಡರ್ಗಳನ್ನು ಉಳಿಸಿಕೊಂಡು, ಅವಶ್ಯ ಇಲ್ಲದಿರುವ ಕಡೆ ಡಿವೈಡರ್ ತೆರವುಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈತರಿಗೆ ಬರ ಪರಿಹಾರ ಶೀಘ್ರ :
ಮಳೆಯ ಕೊರತೆಯಿಂದಾಗಿ ಜಿಲ್ಲೆಯ 06 ತಾಲ್ಲೂಕುಗಳನ್ನು ಈಗಾಗಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ 2.35 ಲಕ್ಷ ಹೆ. ನಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ನಿಯಮಾನುಸಾರ ಇನ್ಪುಟ್ ಸಬ್ಸಿಡಿ ನೀಡುವಂತೆ ಜಿಲ್ಲೆಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಬೆಳೆ ಪರಿಹಾರ ಪಾವತಿಯಲ್ಲಿ ದುರುಪಯೋಗ ತಡೆಯಲು ಈ ಬಾರಿ ಫ್ರುಟ್ಸ್ ತಂತ್ರಾಂಶ ಹಾಗೂ ಬೆಳೆ ಕಟಾವು ಸಮೀಕ್ಷೆ ಆಧಾರದಲ್ಲಿ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ರಾಜ್ಯ ಸರ್ಕಾರದಿಂದಲೇ ರೈತರಿಗೆ ಗರಿಷ್ಟ 2 ಸಾವಿರ ಪರಿಹಾರವನ್ನು ಪಾವತಿಸಲು ಅಗತ್ಯ ದತ್ತಾಂಶವನ್ನು ಈಗಾಗಲೆ ಸಲ್ಲಿಸಲಾಗಿದ್ದು, ಶೀಘ್ರವೇ ಪರಿಹಾರ ಮೊತ್ತ ರೈತರಿಗೆ ಪಾವತಿಯಾಗಲಿದೆ ಎಂದು ಜಂಟಿಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಫ್ರುಟ್ಸ್ ತಂತ್ರಾಂಶದಲ್ಲಿ ಮಾಹಿತಿ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೆ ಶೇ. 81 ರಷ್ಟು ಪೂರ್ಣಗೊಂಡಿದ್ದು, ರೈತ ಸಮುದಾಯದಲ್ಲಿ ಈ ಬಗ್ಗೆ ವ್ಯಾಪಕ ತಿಳುವಳಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದರು.
ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ತಿಮ್ಮಯ್ಯ, ಕೆ.ಸಿ.ನಾಗರಾಜು, ಖಲೀಮುಲ್ಲಾ, ರಂಗಸ್ವಾಮಿ, ದೀಪಿಕಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.