i
ಬಿಜೆಪಿ-ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರ ಮಹತ್ವದ ಸಭೆ, ಬೆಂಗಳೂರು ಶಿಕ್ಷಕರ ಕ್ಷೇತ್ರ ಜೆಡಿಎಸ್ ನೀಡಲು ಒಪ್ಪಿದ ಬಿಜೆಪಿ ನಾಯಕರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಫೆಬ್ರವರಿ 16 ರಂದು ನಡೆಯಲಿರುವ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಭಾನುವಾರ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪ್ರಮುಖರೊಂದಿಗೆ ಮಾತುಕತೆ ನಡೆಸಲಾಯಿತು.ಈ ನಿಟ್ಟಿನಲ್ಲಿ ಕಾರ್ಯಕರ್ತರಲ್ಲಿ ಗೊಂದಲಕ್ಕೆ ಆಸ್ಪದ ಉಂಟಾಗದಂತೆ ಪರಿಷತ್ ಚುನಾವಣೆಗಳಲ್ಲಿ ಪರಸ್ಪರ ಒಮ್ಮತ ಹಾಗೂ ವಿಶ್ವಾಸದ ವಾತಾವರಣದಲ್ಲಿ ಚುನಾವಣೆ ಎದುರಿಸಲು ಆರೋಗ್ಯಕರ ಚರ್ಚೆ ನಡೆಸಲಾಯಿತು.
ಲೋಕಸಭೆ ಚುನಾವಣೆಗೆ ಎನ್ಡಿಎ ಜತೆ ಮೈತ್ರಿ ಮಾಡಿಕೊಂಡ ಬಳಿಕ ಕೇಂದ್ರದ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ಪೂರ್ಣಗೊಳಿಸಿದ್ದ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಇದೇ ಮೊದಲ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿನ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೊದಲ ಮೈತ್ರಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಉಪ ಚುನಾವಣೆ ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠರ ಭೇಟಿ ನಂತರ ಅಂತಿಮ ಘೋಷಣೆಯಾಗಲಿದೆ ಎನ್ನಲಾಗಿದೆ.
ಕಳೆದ ಬಾರಿ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಇದೀಗ ಉಪಚುನಾವಣೆ ನಡೆಯುತ್ತಿರುವುದರಿಂದ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯ ಬಿಜೆಪಿ ನಾಯಕರು ಈ ಕ್ಷೇತ್ರ ಬಿಟ್ಟುಕೊಡಲು ಸಮ್ಮಸಿದ್ದು ಹೈಕಮಾಂಡ್ ಗಮನಕ್ಕೆ ತಂದು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಎನ್ ಡಿಎ ಮೈತ್ರಿಕೂಟದ ಮೊದಲ ಮೈತ್ರಿ ಸಭೆಯಲ್ಲಿ ಸದ್ಯದ ರಾಜ್ಯ ರಾಜಕೀಯಯದ ಬಗ್ಗೆ ಮಹತ್ವದ ಚರ್ಚೆಗಳು ಆಗಿವೆ. ಮುಂಬರುವ ವಿಧಾನಪರಿಷತ್ ಹಾಗೂ ಲೋಕಸಭಾ ಚುನಾವಣೆ ಕುರಿತು ಮಾತುಕತೆಗಳು ನಡೆದಿವೆ. ಆದರೆ ಲೋಕಸಭಾ ಚುನಾವಣೆಗೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು, ಜೆಡಿಎಸ್ ಪಕ್ಷ ಕೇಳುತ್ತಿರುವ ಯಾವ ಯಾವ ಕ್ಷೇತ್ರಗಳ ಹಂಚಿಕೆ ಕುರಿತು ಯಾವುದೇ ಮಾತುಕತೆಗಳು ನಡೆದಿಲ್ಲ ಎನ್ನವ ಮಾಹಿತಿಗಳು ಅಧಿಕೃತ ಮೂಲಗಳಿಂದ ಲಭ್ಯವಾಗಿದೆ.ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೈತ್ರಿ ಪಕ್ಷಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಪಕ್ಷಗಳ ನಾಯಕರು ಸಭೆ ಮಾಡಿದ್ದೇವೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಮುಂಬರುವ ಪರಿಷತ್ ಚುನಾವಣೆಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಸಭೆಯ ಮಾಹಿತಿಗಳನ್ನು ಬಿಜೆಪಿ ಹೈಕಮಾಂಡ್ ಗೆ ತಿಳಿಸಲಾಗುವುದು. ವಿಧಾನ ಪರಿಷತ್ ಉಪ ಚುನಾವಣೆಯಿಂದಲೇ ಎರಡು ಪಕ್ಷಗಳು ಒಟ್ಟಾಗಿ ಹೋಗುವ ಸಂದೇಶ ಕೊಟ್ಟಿದ್ದೇವೆ ಎಂದು ತಿಳಿಸಿದರು.ಎರಡೂ ಪಕ್ಷಗಳೂ ಲೋಕಸಭೆಯಲ್ಲಿ ಜತೆಗೂಡಿ ಈ ಕೆಟ್ಟ ಸರ್ಕಾರದ ವಿರುದ್ಧ ಕೆಲಸ ಮಾಡಲು ತೀರ್ಮಾನಿಸಿದ್ದೇವೆ. ಜ.22 ರಂದು ಸೋಮವಾರ ರಾಮನ ಪ್ರಾಣ ಪ್ರತಿಷ್ಠಾಪನೆ ದಿನ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾವು ಕುಟುಂಬ ಸಮೇತ ಹೋಗುತ್ತಿದ್ದೇವೆ. ಹಲವು ರಾಜ್ಯಗಳು ನಾಳೆ ರಜೆ ಘೋಷಿಸಿವೆ. ಇದು ದೇಶದ ಹಬ್ಬ, ಪ್ರತೀ ಕುಟುಂಬದ ಹಬ್ಬ. ರಾಮನ ಕಾರ್ಯಕ್ರಮವನ್ನು ಮನೆಯಲ್ಲಿದ್ದುಖುದ್ದು ನೋಡಲು ಸಿದ್ದರಾಮಯ್ಯ ರಜೆ ಘೋಷಿಸಬೇಕೆಂದು ಆಗ್ರಹಿಸಿದರು.ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಮೊನ್ನೇ ದೇಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಆದರೆ ಜೆಡಿಎಸ್ ಕೆಲ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿರುವುದರಿಂದ ಬಿಜೆಪಿ ಹೈಕಮಾಂಡ್ ಇನ್ನೂ ಯಾವುದೇ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ರಾಜ್ಯ ಬಿಜೆಪಿ ನಾಯಕರ ಜೊತೆ ಜೆಡಿಎಸ್ ಕೇಳಿರುವ ಕ್ಷೇತ್ರಗಳ ಬಗ್ಗೆ ಚರ್ಚಿಸಿ ಬಳಿಕ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.ಮೈತ್ರಿ ಪಕ್ಷಗಳ ಸಭೆಯಲ್ಲಿ ಬಿಜೆಪಿ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಸಿಎಂಗಳಾದ ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಜೆಡಿಎಸ್ ಪಕ್ಷದ ಎಚ್ಡಿ ಕುಮಾರಸ್ವಾಮಿ, ಭೋಜೇಗೌಡ, ಬಂಡೆಪ್ಪ ಕಾಶಂಪೂರ್, ನಿಖಿಲ್ ಕುಮಾರಸ್ವಾಮಿ, ಜೆಟಿ ದೇವೇಗೌಡ, ಕೆ.ಎ ತಿಪ್ಪೇಸ್ವಾಮಿ ಸೇರಿದಂತೆ ಹಲವು ಮುಖಂಡರುಗಳು ಭಾಗವಹಿಸಿದ್ದರು.