i
ಕಾಂಗ್ರೆಸ್ ಪಕ್ಷಕ್ಕೆ ಮಗ್ಗಲು ಮುಳ್ಳಾಗುತ್ತಿರುವ ಸಚಿವರು…ಶಾಸಕರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಅನೇಕರ ಹೇಳಿಕೆಗಳು ಪಕ್ಷದಲ್ಲಿನ ಭಿನ್ನಮತವನ್ನು ಬಹಿರಂಗಪಡಿಸುತ್ತಿದ್ದು ಜೆಡಿಎಸ್-ಬಿಜೆಪಿ ಮೈತ್ರಿ ಕೂಟಕ್ಕೆ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಲಾಭ ಮಾಡಿಕೊಡುವ ಸಾಧ್ಯತೆಗಳಿವೆ.
ಕಾಂಗ್ರೆಸ್ ಹಿರಿಯ ನಾಯಕರುಗಳೇ ಶಿಸ್ತು-ಸಂಯಮ ಉಲ್ಲಂಘಿಸಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುತ್ತಿರುವುದು ತೀವ್ರ ಮುಜುಗರವನ್ನುಂಟು ಮಾಡುತ್ತಿದ್ದು, ಹೆಚ್ಚು ಸ್ಥಾನ ಗೆಲ್ಲುವ ಕೈಪಡೆ ಕಾಂಗ್ರೆಸ್ ಗುರಿಗೆ ಇವರು ಮಗ್ಗಲ ಮುಳ್ಳಾಗುತ್ತಿದ್ದಾರೆ.
ಸದಾ ವಿವಾದಗಳನ್ನು ಸೃಷ್ಠಿಸುತ್ತಿರುವ, ಮುಖ್ಯಮಂತ್ರಿ ಸಿದ್ದರಾಮಯ್ಯ ಇವರನ್ನು ಮೆಚ್ಚಿಸಲು ಹೊರಟಿರುವ ಸಚಿವ ಕೆ.ಎನ್.ರಾಜಣ್ಣ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ ಆದ ಕೂಡಲೇ ಪ್ರತಿಕ್ರಿಯೆ ನೀಡಿ ಹೈಕಮಾಂಡ್ನಿಂದ ಹೇರಲ್ಪಡುವ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯನ್ನು ಒಪ್ಪಿಕೊಳ್ಳಲು ನಾವೇನು ಗುಲಾಮರಲ್ಲ ಎಂದು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಹಲವು ಹೇಳಿಕೆಗಳನ್ನು ನೀಡುತ್ತಿರುವ ಕೆ.ಎನ್.ರಾಜಣ್ಣ ಅವರಿಗೆ ಹೈಕಮಾಂಡ್ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಕೂಡ ಲೆಕ್ಕಿಸದೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಪದೇಪದೇ ಹೇಳಿಕೆ ನೀಡುವುದನ್ನ ಮುಂದುವರೆಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಿಂದಿನ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿವಾದಕ್ಕೆ ಗುರಿಯಾಗಿದ್ದರು. ಇತ್ತೀಚೆಗೆ ಪರಮೇಶ್ವರ್ರವರ ಜೊತೆ ಹೊಂದಾಣಿಕೆ ಮಾಡಿಕೊಂಡಂತೆ ಕಂಡುಬರುವ ರಾಜಣ್ಣ, ಸಿದ್ದರಾಮಯ್ಯ ಪರವಾಗಿ ಮಾತನಾಡುವ ಬರದಲ್ಲಿ ಪಕ್ಷದ ಹೈಕಮಾಂಡ್ ನಾಯಕತ್ವವನ್ನು ಪ್ರಶ್ನಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೆಪಿಸಿಸಿಯಲ್ಲಿ ದೀರ್ಘಕಾಲ ಖಜಾಂಚಿಯಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ನೀಡಿದ್ದ ಹೇಳಿಕೆ ಸಿಎಂ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದರು.
ಶಿವಮೊಗ್ಗದಲ್ಲಿ ಶಾಮನೂರು ಶಿವಶಂಕರಪ್ಪ ಇತ್ತೀಚೆಗೆ ಹೇಳಿಕೆ ನೀಡಿ ಯಡಿಯೂರಪ್ಪ ಅವರ ಪುತ್ರ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಉತ್ತಮವಾಗಿ ಕೆಲಸ ಮಾಡಿದ್ದು ಅವರನ್ನೇ ಮತದಾರರು ಪುನರ್ ಆಯ್ಕೆ ಮಾಡುವಂತೆ ಕರೆ ನೀಡಿದ್ದು ಪಕ್ಷದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಕಾಂಗ್ರೆಸ್ ವಿರುದ್ಧವೇ ಹೇಳಿಕೆ ನೀಡುವ ಮೂಲಕ ಪಕ್ಷದ ಸೋಲಿಗೆ ಮುನ್ನುಡಿ ಬರೆಯಲಾರಂಭಿಸಿದ್ದಾರೆ.ಈ ಹಿಂದೆ ಬಸವರಾಯರೆಡ್ಡಿ, ಬಿ.ಆರ್.ಪಾಟೀಲ್ ಸೇರಿದಂತೆ ಅನೇಕ ಹಿರಿಯ ಶಾಸಕರುಗಳು ಪಕ್ಷದ ವಿರುದ್ಧ ಮುಜುಗರದ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದನ್ನು ಸ್ಮರಿಸಬಹುದಾಗಿದೆ.