i
ಶ್ರೀರಾಮ ದೇವರಿಗೆ ಅವಹೇಳನ ಮಾಡಿದ ಶಿಕ್ಷಕಿ ಅಮಾನತು…
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.
ಹಿಂದೂಗಳ ಅಸ್ಮಿತೆ ಶ್ರೀರಾಮನ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ ಸದಸ್ಯರು, ತನಿಖೆ ಪೂರ್ಣಗೊಳ್ಳುವವರೆಗೂ ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.
ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಪೋಷಕರು, ಹಿಂದೂ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಈ ವೇಳೆ ಪೊಲೀಸರು ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ತಡೆದಿದ್ದರು.
ಆಡಳಿತ ಮಂಡಳಿಯ ಸದಸ್ಯರು ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್ ನಲ್ಲಿ ಶಿಕ್ಷಕಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದರು. ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.