i
ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಫೆ.16 ರಂದು ಪ್ರತಿಭಟನೆ-
ಎಚ್ ಆರ್ ಬಸವರಾಜಪ್ಪ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ: Protest on February 16 demanding waiver of farmers’ loans-
HR Basavarajappa…
ಜನ ವಿರೋಧಿ, ರೈತ-ಕಾರ್ಮಿಕ ವಿರೋಧಿ ಕೇಂದ್ರ ಬಜೆಟ್ ವಿರೋಧಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ, ರಾಷ್ಟ್ರೀಯ ಬ್ಯಾಂಕ್ಗಳ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು, ದೆಹಲಿ ರೈತ ಹೋರಾಟದ ಲಿಖಿತ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಫೆ. ೧೬ರ ಶುಕ್ರವಾರ ಪ್ರತಿಭಟನೆಗೆ ಕರೆಕೊಡಲಾಗಿದೆ. ಇದರನ್ವಯ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಅಂದು ೧೧ ಗಂಟೆಗೆ ಬೃಹತ್ ಪ್ರತಿಭಟನಾ ಸಭೆ ಏರ್ಪಡಿಸಲಾಗಿದೆ.
ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್ ಬಸವರಾಜಪ್ಪ, ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ತಕ್ಷಣವೇ ಪರಿಹಾರ ಕೊಡುವುದು, ರಾಜ್ಯ ಸರ್ಕಾರ ೩ಕೃಷಿ ಕಾಯ್ದೆಗಳನ್ನು ಹಿಂಪಡೆಯವುದು, ಬರಗಾಲಕ್ಕೆ ಎಕರೆಗೆ ೨೦ ವಸಾವಿರ ಪರಿಹಾರ ಕೊಡುವುದು, ಸಹಕಾರಿ ಸಂಸ್ಥೆಗಳ ಸಂಪೂರ್ಣ ಸಾಲ ಮನ್ನಾ, ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ಈ ಪ್ರತಿಭಟನೆಗೆ ಕರೆ ಕೊಡಲಾಗಿದೆ ಎಂದರು.
೨೦೨೦ರ ಕೊರೊನಾ ಲಾಕ್ಡೌನ್ ಸಂಧರ್ಭದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ೩ಕೃಷಿ ಕಾಯ್ದೆಗಳನ್ನು ರೈತರು ದೆಹಲಿಯಲ್ಲಿ ೧೩ ತಿಂಗಳುಗಳ ಕಾಲ ಬೀಡು ಬಿಟ್ಟು ನಡೆಸಿದ ಐತಿಹಾಸಿಕ ಹೋರಾಟದ ಪರಿಣಾಮ ಈ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್ಸು ಪಡೆಯಿತು. ಇದಕ್ಕೆ ಪೂರಕವಾಗಿ ತಂದ ೩ಕೃಷಿ ಕಾಯ್ದೆಗಳನ್ನು ಹಿಂದಿನ ಬಿ.ಜೆ.ಪಿ ಸರ್ಕಾರ ಮತ್ತು ಈಗಿನ ಕಾಂಗ್ರೆಸ್ ಸರ್ಕಾರ ಸಹ ತಕ್ಷಣವೇ ಈ ಕಾಯ್ದೆಗಳನ್ನ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.
ದೆಹಲಿ ಹೋರಾಟದ ಸಂದರ್ಭದಲ್ಲಿ ಉಳಿದ ಹಕ್ಕೊತ್ತಾಯಗಳಾದ ಕನಿಷ್ಟ ಬೆಂಬಲ ಬೆಲೆ ಜಾರಿ, ವಿದ್ಯುತ್ ರಂಗದ ಸಂಪೂರ್ಣ ಖಾಸಗೀಕರಣ ವಿದ್ಯುತ್ ತಿದ್ದುಪಡಿ ಮಸೂದೆ ರದ್ದು ಪಡಿಸುವುದು, ರೈತರ ಸಾಲಮನ್ನಾ, ದೆಹಲಿಯ ರೈತ ಹೋರಾಟದ ಸಂದರ್ಭದಲ್ಲ್ಲಿ ರೈತರ ಮೇಲೆ ಹಾಕಲಾಗಿದ್ದ ಕೇಸುಗಳನ್ನು ವಾಪಸ್ ಪಡೆಯುವುದು ಸೇರಿದೆ ಎಂದರು.
ಜ. ೧೮ರಂದು ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನಲ್ಲಿ ಸಾಲ ಪಡೆದ ರೈತರು ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದು ಮತ್ತು ಬರಗಾಲದ ಹಿನ್ನಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್, ಹಣಕಾಸು ಸಂಸ್ಥೆಯವರ, ಸಹಕಾರಿ ಸೊಸೈಟಿಗಳ ಸಾಲ ವಸೂಲಾತಿ ಆದೇಶವನ್ನು ತಡೆಯುವುದು, ವಸೂಲಾತಿಗಾಗಿ ಕಿರುಕುಳ ಮಾಡಬಾರದೆಂದು ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ. ಬಗರ್ಹುಕುಂ ಸಾಗುವಾಳಿದಾರರಿಗೆ ಹಕ್ಕುಪತ್ರ ನೀಡುವುದು, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ಮಾಡಿಸುವುದು, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದ ತಕ್ಷಣ ರಾಜ್ಯದ ಬರಗಾಲದ ಸಬ್ಸಿಡಿ ಹಣವನ್ನು ನೀಡುವುದಾಗಿ ಮತ್ತು ಕೆಲವು ಕಾರ್ಮಿಕ ಸಮಸ್ಯೆಗಳನ್ನು ಸಹ ಬಗೆಹರಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇವುಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ ಬಡ್ಡಿ ಮನ್ನಾ ಹೊರತುಪಡಿಸಿ ಉಳಿದ ಯಾವ ಭರವಸೆಗಳು ಈಡೇರಿಸಿಲ್ಲ ಎಂದು ಅವರು ಬೇಸರಿಸಿದರು.
ತಕ್ಷಣವೇ ಈ ಮೇಲಿನ ಬೇಡಿಕೆಗಳನ್ನು ಈಡೇರಿಸಬೇಕು. ವಿದ್ಯುತ್ ಚಕ್ತಿ ಖಾಸಗೀಕರಣ ಮಾಡುವುದಿಲ್ಲವೆಂದು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಟಿಯಲ್ಲಿ ರೈತ ಮುಖಂಡರಾದ ಜಿಲ್ಲಾ ಕಾರ್ಯಾಧ್ಯಕ್ಷ ಪಿ ಡಿ ಮಂಜಪ್ಪ, ಕೆ ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಟಿ ಎಂ ಚಂದ್ರಪ್ಪ, ಹಿಟ್ಟೂರು ರಾಜು, ತಾಲೂಕು ಅಧ್ಯಕ್ಷ ಸಿ ಚಂದ್ರಪ್ಪ, ಗ್ರಾಮಾಂತರ ಅಧ್ಯಕ್ಷ ಕಸೆಟ್ಟಿ ರುದ್ರೇಶ್, ಹಸಿರು ಸೇನೆ ಜಿಲ್ಲಾ ಸಂಚಾಲಕ ಎಂ ಡಿ ನಾಗರಾಜ, ಎಚ್ ಇ ಗುರುಶಾಂತಪ್ಪ ಹಾಜರಿದ್ದರು.