i
ಬಿಜೆಪಿ-ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ-ವಿಪ ಶಾಸಕ ತಿಪ್ಪೇಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಇದು ಕೇವಲ ಲೋಕಸಭಾ ಚುನಾವಣೆ ಮಾತ್ರವಾಗಿದ್ದು ಯಾರೊಬ್ಬರೂ ಭಾವನಾತ್ಮಕ ವಿಚಾರಗಳನ್ನು ಕೆದಕಬಾರದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಉಸ್ತುವಾರಿ ಹಾಗೂ ವಿಧಾನ ಪರಿಷತ್ ಶಾಸಕ ತಿಪ್ಪೇಸ್ವಾಮಿ ಕಿವಿ ಮಾತು ಹೇಳಿದರು.
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜೆಡಿಎಸ್ ವತಿಯಿಂದ ನಗರದ ನೀಲಕಂಠೇಶ್ವರ ದೇವಾಲಯದ ಪಕ್ಕದಲ್ಲಿನ ಜಿಲ್ಲಾ ಜಾತ್ಯಾತೀತ ಜನತಾದಳ ಕಚೇರಿಯಲ್ಲಿ ಶನಿವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಕಾರಣ. ಆದರೆ ಇಂದು ರಾಜಕೀಯ ಪರಿಸ್ಥಿತಿ ಬದಲಾಗಿದೆ. ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಬಲಿ ಕೊಟ್ಟು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಮಾಡುವುದಿಲ್ಲ, ಆದರೆ ಪಕ್ಷದ ತತ್ವ, ಸಿದ್ಧಾಂತ ಹಾಗೂ ತನ್ನ ತನವನ್ನು ಉಳಿಸಿಕೊಂಡು ಮೈತ್ರಿ ಮಾಡಿಕೊಂಡಿದ್ದೇವೆ. ಬಿಜೆಪಿ ಅಥವಾ ಜೆಡಿಎಸ್ ಪಕ್ಷಗಳು ಚಿತ್ರದುರ್ಗ ಸೇರಿದಂತೆ ರಾಜ್ಯ 28 ಕ್ಷೇತ್ರಗಳಲ್ಲಿ ಯಾವ ಪಕ್ಷ ಅಭ್ಯರ್ಥಿಯನ್ನು ಹಾಕುತ್ತದೆಯೂ ಆ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಮುಖಂಡರು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ತಿಳಿಸಿದರು.
ರಾಷ್ಟ್ರ ನಾಯಕರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ದೇಶವನ್ನು ಉಳಿಸಬೇಕೆಂಬ ದೃಷ್ಟಿಯಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ದೇಶ ಮತ್ತು ರಾಜ್ಯ ರಾಜಕಾರಣಕ್ಕೆ ಉತ್ತಮ ಸಂದೇಶ ರವಾನೆ ಮಾಡಬೇಕು ಎಂದು ಅವರು ತಿಳಿಸಿದರು.
ಲೋಕಸಭಾ ಚುನಾವಣೆ ಸಮೀಪವಿದೆ. ಕೂಡಲೇ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಪ್ರತಿಯೊಂದು ಬೂತ್ನಲ್ಲಿ ತಂಡ ರಚಿಸಿಕೊಂಡು ಪ್ರತಿಯೊಂದು ಜಾತಿ ಜನಾಂಗಕ್ಕೂ ಆ ಸಮಿತಿಗಳಲ್ಲಿ ಸೇರಿಸಿಕೊಂಡು ಜೆಡಿಎಸ್ ಪಕ್ಷ ಸಂಘಟಿಸುವ ಮೂಲಕ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಗೆಲುವಿಗೆ ಲೀಡ್ ಕೊಡಬೇಕು ಎಂದು ಕರೆ ನೀಡಿದರು. ಮುಂದಿನ ಸಭೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳ ಪದಾಧಿಕಾರಿಗಳು, ವರಿಷ್ಠರು ಬರುವ ನೀರಿಕ್ಷೆ ಇದೆ. ಚಿತ್ರದುರ್ಗ ಜಿಲ್ಲೆಯಿಂದ ಪಕ್ಷದ ಚುನಾವಣಾ ಕಾರ್ಯ ಪ್ರಾರಂಭವಾಗುತ್ತಿದೆ ಎಂದು ತಿಳಿಸಿದರು.
ಚಿತ್ರದುರ್ಗ ಲೋಕಸಭಾ ಉಸ್ತುವಾರಿ ಹಾಗೂ ಮಾಜಿ ಶಾಸಕ ತಿಮ್ಮರಾಯಪ್ಪ ಮಾತನಾಡಿ, ಜೆಡಿಎಸ್ ಪಕ್ಷದ ಉಳಿವು ಮತ್ತು ಅಸ್ಮಿತೆಗಾಗಿ ನಾವು ಪಕ್ಷ ಭೇದ ತೊರೆದು ಹೋರಾಟ ಮಾಡಬೇಕು. ನಮ್ಮ ವರಿಷ್ಠರು ಮೈತ್ರಿ ಮಾಡಿಕೊಂಡಿರುವುದರ ಹಿಂದೆ ಬಹುದೊಡ್ಡ ಕಾರಣ ಇದ್ದೇ ಇರುತ್ತದೆ. ಹಾಗಾಗಿ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಅಭ್ಯರ್ಥಿ ಗೆಲುವಿಗೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ತುಮಕೂರು ಜಿಲ್ಲೆಯ ಶಿರಾ, ಪಾವಗಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳು ಬರಲಿದ್ದು ಪಕ್ಷದ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ. ರಾಜ್ಯದ ಹಲವು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ಸಹಕಾರಿಯಾಗಬೇಕಿದೆ ಅದೇ ರೀತಿ ಕೆಲವಡೆಯಲ್ಲಿ ಜೆಡಿಎಸ್ ಗೆಲುವಿಗೆ ಬಿಜೆಪಿ ಸಹಕಾರಿಯಾಗಬೇಕಿದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರ ಸಭೆ ಕರೆದು ಕಷ್ಟ, ನೋವುಗಳನ್ನು ಕೇಳಬೇಕಿದೆ. ಎರಡು ಪಕ್ಷಗಳ ಕಾರ್ಯಕರ್ತರಲ್ಲಿ, ಮುಖಂಡರುಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಮುಖಂಡರು ನಡೆದುಕೊಳ್ಳಬೇಕಾಗಿದೆ. ಒಂದು ವೇಳೆ ಬಿಜೆಪಿ ಮುಖಂಡರು, ಅಭ್ಯರ್ಥಿಗಳು ಜೆಡಿಎಸ್ ಕಾರ್ಯಕರ್ತರು, ಪದಾಧಿಕಾರಿಗಳನ್ನು ನಿರ್ಲಕ್ಷ್ಯ ಮಾಡಿದರೆ ನನ್ನ ಗಮನಕ್ಕೆ ತನ್ನಿ, ನಾನು ಕುಮಾರಣ್ಣನವರಿಗೆ ಮಾಹಿತಿ ತಿಳಿಸುತ್ತೇವೆ. ದಯವಿಟ್ಟು ಪಕ್ಷದ ಅಭ್ಯರ್ಥಿಗೆ ದ್ರೋಹ ಬಗೆಯುವ ಕಾರ್ಯ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.
ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಯಾವುದೇ ಸಮಯದಲ್ಲಾದರೂ ಗೊಂದಲಗಳು ಸೃಷ್ಠಿಯಾದರೆ ಜೆಡಿಎಸ್ ಪಕ್ಷದ ಮರ್ಯಾದೆ ಹೋಗುವಂತ ಕೆಲಸವನ್ನು ಯಾರೊಬ್ಬರೂ ಮಾಡಕೂಡದು, ಭವಿಷ್ಯದಲ್ಲಿ ಸಾಕಷ್ಟು ಅನುಕೂಲ ಆಗಲಿದೆ ಎಂದು ಅವರು ತಿಳಿಸಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮತ್ತು ಪಕ್ಷದ ವರಿಷ್ಠರು ನೀಡುವ ಸಲಹೆ ಸೂಚನೆ, ಆದೇಶಗಳನ್ನು ತಪ್ಪದೇ ಪಾಲಿಸುತ್ತೇವೆ. ಪಕ್ಷ ಆದೇಶಗಳನ್ನು ತಲೆಭಾಗಿ ಸ್ವೀಕರಿಸಿ ಕೆಲಸ ಮಾಡುತ್ತೇವೆ. ಅದೇ ರೀತಿ ನಮ್ಮನ್ನೂ ಬಿಜೆಪಿ ಮುಖಂಡರು ಸರಿಯಾಗಿ ನಡೆಸಿಕೊಳ್ಳಬೇಕಾಗಿದೆ. ಇದೇ ಬಿಜೆಪಿ ಮುಖಂಡರಿಂದ ನಾವು ಸಾಕಷ್ಟು ನೋವು ಅನುಭವಿಸಿದ್ದೇವೆ. ಬಿಜೆಪಿ ಮುಖಂಡರು, ಜೆಡಿಎಸ್ ಕಾರ್ಯಕರನ್ನ ಯಾವ ರೀತಿ ನಡೆಸಿಕೊಳ್ಳುತ್ತಾರೊ ಆ ರೀತಿ ನಾವು ಕೆಲಸ ಮಾಡುತ್ತೇವೆ. ಆದರೆ ನಾವು ಎಷ್ಟೇ ಪ್ರಮಾಣಿಕವಾಗಿ ಕೆಲಸ ಮಾಡಿದರೂ ಆರೋಪಗಳನ್ನು ಮಾಡುತ್ತಾರೆ, ಪಕ್ಷದ ಮರ್ಯಾದೆ ಹೋಗುವ ಕೆಲಸವನ್ನ ಎಂದಿಗೂ ಮಾಡುವುದಿಲ್ಲ ಎಂದು ಕಾಂತರಾಜ್ ಭಾವುಕರಾಗಿ ಹೇಳಿದರು.
ಜಿಲ್ಲಾ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ಪಿಲಾಜನಹಳ್ಳಿ ಎಂ.ಜಯಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮರ್ಥವಾಗಿ ಲೋಕಸಭಾ ಚುನಾವಣೆ ಎದುರಿಸಲು ಕಾರ್ಯಕರ್ತರು, ಮುಖಂಡರು ಸಿದ್ಧರಿದ್ದಾರೆ. ಪಕ್ಷದ ತತ್ವ, ಸಿದ್ಧಾಂತಗಳನ್ನು ಉಳಿಸಿಕೊಂಡು ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರಗಳನ್ನು ರೂಪಿಸಬೇಕಾಗಿದೆ. ಅದೇ ರೀತಿ ಕಾರ್ಯಕರ್ತರಿಗೆ ನಾವು ಅಷ್ಟೇ ಪ್ರಮಾಣದಲ್ಲಿ ಆದ್ಯತೆ ನೀಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ವ್ಯಂಗ್ಯ ಮಾಡುತ್ತಿರುವ ವಿರೋಧಿಗಳಿಗೆ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಸೂಕ್ತ ಉತ್ತರ ನೀಡಬೇಕಾಗಿದೆ. ಇದಕ್ಕಾಗಿ ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ಗೆಲುವಿಗೆ ದುಡಿಯಬೇಕಾಗಿದೆ ಎಂದು ಅವರು ಕರೆ ನೀಡಿದರು.
ಚಿತ್ರದುರ್ಗ ಲೋಕಸಭಾ ಉಸ್ತುವಾರಿ ಹಿರಿಯೂರು ವಿಧಾನಸಭೆ ಪರಾಜಿತ ಅಭ್ಯರ್ಥಿ ಎಂ.ರವೀಂದ್ರಪ್ಪ ಮಾತನಾಡಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಉತ್ತಮ ಸಂದೇಶ ಹೊರ ಬೀಳಬೇಕಾದರೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ನವರಿಗೆ ಸೂಕ್ತ ಉತ್ತರ ನೀಡಬೇಕಾಗಿದೆ. ಜೆಡಿಎಸ್ ಪಕ್ಷ ತಾಯಿಗೆ ಸಮ, ಎದುರಾಳಿ ಪಕ್ಷದ ಅಭ್ಯರ್ಥಿಯನ್ನ ಯಾವ ರೀತಿ ಸೋಲಿಸಬೇಕು ಎನ್ನುವ ತಂತ್ರಗಾರಿಕೆಯನ್ನು ಮಾಡಬೇಕು ಎಂದು ತಿಳಿಸಿದರು.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತ ನಡೆಸುತ್ತಿವೆ. ಅನಿವಾರ್ಯ ಕಾರಣದಿಂದ ಜೆಡಿಎಸ್ ಸೋತಿರಬಹುದು. ಆದರೆ ಭವಿಷ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಉತ್ತಮ ಅವಕಾಶಗಳು ದೊರೆಯಲಿವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹನುಮಂತರಾಯ ಮಾತನಾಡಿ ಪಕ್ಷ ತತ್ವ, ಸಿದ್ಧಾಂತಗಳಿಗಿಂತ ದೇಶ ಮುಖ್ಯವಾಗಿರುವುದರಿಂದ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಇಂದು ನಮಗೆ ದೇಶ ಮುಖ್ಯವಾಗಿದೆ. ಹಾಗಾಗಿ ಎನ್ ಡಿಎ ಮೈತ್ರಿ ಕೂಟವನ್ನು ಗೆಲ್ಲಿಸಬೇಕಾಗಿದೆ ಎಂದು ಕರೆ ನೀಡಿದರು.
ತುಮಕೂರು ಮತ್ತು ಚಿತ್ರದುರ್ಗ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ. ಈ ಎರಡು ಕ್ಷೇತ್ರಗಳನ್ನು ಗೆಲ್ಲಿಸಿಕೊಡುವುದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನ ಮೈತ್ರಿಕೂಟ ಗೆಲ್ಲಬೇಕಾಗಿದ್ದು ಅದಕ್ಕಾಗಿ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಠದಹಟ್ಟಿ ಈರಣ್ಣ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಹಿರಿಯೂರು ಹೆಚ್.ನಾಗರಾಜ್, ಪ್ರತಾಪ್ ಜೋಗಿ, ಪರಮೇಶ್ವರಪ್ಪ, ತಿಮ್ಮಣ್ಣ, ದೀಪು, ತಿಪ್ಪೇಸ್ವಾಮಿ, ವೀರಭದ್ರಪ್ಪ, ಗಣೇಶ್, ಸೂರ್ಯ ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯ ತಿಮ್ಮಾರೆಡ್ಡಿ, ತುಮಕೂರು ಅಧ್ಯಕ್ಷ ಹನುಮಂತಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ಚಿತ್ರದುರ್ಗ, ಚಳ್ಳಕೆರೆ ತುಮಕೂರು ಜಿಲ್ಲೆಯ ಶಿರಾ ಪಾವಗಡ ತಾಲ್ಲೂಕುಗಳಿಂದ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು, ಜೆಡಿಎಸ್ನ ತಾಲ್ಲೂಕು ಮತ್ತು ವಿವಿಧ ಘಟಕದ ಆಧ್ಯಕ್ಷರು ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.