i
ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಿಗೆ ಸಚಿವರು, ಶಾಸಕರ ಸನ್ಮಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮಾನವಹಕ್ಕುಗಳ ಆಯೋಗದ ಅಧ್ಯಕ್ಷ, ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿಯವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಸಣ್ಣ ಕೈಗಾರಿಕೆ ಮಂಡಳಿ ಅಧ್ಯಕ್ಷ, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಟಿ.ರಘುಮೂರ್ತಿ ನ್ಯಾಯಮೂರ್ತಿಗಳಾದ ಎಲ್.ನಾರಾಯಣಸ್ವಾಮಿ ದಕ್ಷ, ಪ್ರಾಮಾಣಿಕ ಕಾರ್ಯದ ಮೂಲಕ ನ್ಯಾಯಾಂಗದ ಗೌರವ, ಘನತೆ ಕಾಪಾಡಿದ್ದಾರೆ. ಸರ್ಕಾರ ಮಾನವಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಎಲ್ಲಿಯೂ ಸಹ ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಆಯೋಗ ಸಕಾಲಿಕ ಕ್ರಮ ಕೈಗೊಳ್ಳಲಿದೆ. ಕ್ಷೇತ್ರದ ಮತದಾರರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಆಹಾರ ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದರಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.