i
ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ- ನಾರಾಯಣಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹೆಚ್ಚಿನ ಗಮನಹರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದರಾದ ಎ. ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆಯ ದೂರುಗಳು ಬಂದಾಗ ಅಧಿಕಾರಿಗಳು ಚುನಾವಣೆ ಕೆಲಸ ಎಂದು ಹೇಳದೇ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಪೂರೈಕೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಬೇಸಿಗೆ ಗಂಭೀರವಾಗಿರುವುದರಿಂದ ಕುಡಿಯುವ ನೀರಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ 189 ಗ್ರಾಮ ಪಂಚಾಯಿತಿಗಳಿದ್ದು, 1069 ಗ್ರಾಮಗಳಿವೆ. 19 ಗ್ರಾಮ ಪಂಚಾಯಿತಿಗಳ 47 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈಗಾಗಲೇ 35 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ 364 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವೂ 13 ಅಡಿ ಕೆಳಗೆ ಹೋಗಿದೆ ಎಂದು ತಿಳಿಸಿದ ಅವರು, ಈಗಾಗಲೇ ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದ್ದು, 13 ಬೋರ್ವೆಲ್ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಖಾಸಗಿ ಬೋರ್ವೆಲ್ಗಳಲ್ಲಿ ನೀರು ಕಡಿಮೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಹಾಗೂ ಹೊಸ ಕೊಳವೆಬಾವಿ ಕೊರೆಸಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲ ತಾಲ್ಲೂಕಿಗೂ ಈಗಾಗಲೇ ಆರ್ಡಿಪಿಆರ್ ವತಿಯಿಂದ ರೂ.25 ಲಕ್ಷ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ರೂ.2.70 ಕೋಟಿ ಬಿಡುಗಡೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಂದ ತಕ್ಷಣ, ಸ್ಪಂದಿಸಿ ಪರಿಹರಿಸಲಾಗುವುದು. ಜಿಲ್ಲಾ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಕುಡಿಯುವ ನೀರು ಸಮಸ್ಯೆ ನಿವಾರಣೆಗಾಗಿ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳು ಒಳಗೊಂಡಂತೆ ಜೂನ್ ಮಾಹೆಯವರಗೂ ಕ್ರಿಯಾ ಯೋಜನೆ ರೂಪಿಸಬೇಕು. ಈ ಬಾರಿಯ ಬೇಸಿಗೆ ತುಂಬಾ ಗಂಭೀರವಾಗಿದೆ. ಜನ-ಜಾನುವಾರುಗಳಿಗೆ ನೀರು ಕೊಡಲು ಗಮನಹರಿಸಬೇಕು. ಜವಾಬ್ದಾರಿಯುತ ಅಧಿಕಾರಿಯನ್ನು ಗ್ರಾಮ ಪಂಚಾಯಿತಿಗೆ ನಿಯೋಜನೆ ಮಾಡಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯ ಯಾವುದೇ ನಗರ ಹಾಗೂ ಪಟ್ಟಣಗಳಲ್ಲಿ ನೀರು ಸಮಸ್ಯೆಯಾಗಿದೆ ಎಂಬ ದೂರು ಬರಬಾರದು. ಜಾತ್ರೆಗಳಲ್ಲಿ ಲಕ್ಷಾಂತರ ಜನರು ಸೇರುತ್ತಾರೆ. ಅಂತಹ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಬೇಕು. ನೀರಿನ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲೆಯ 9 ಸಾವಿರ ಜಲಮೂಲ ಸಂಗ್ರಹಾರಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಲು ಈಗಾಗಲೇ ಸಹಾಯವಾಣಿ ಪ್ರಾರಂಭಿಸಲಾಗಿದೆ. ಕುಡಿಯುವ ನೀರು ಪೂರೈಕೆಗೆ ಅನುದಾನವೂ ಇದೆ. ತಕ್ಷಣವೇ ಸಮಸ್ಯೆಗೆ ಸ್ಪಂದಿಸಲಾಗುವುದು. ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಾಗಿದ್ದು, ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ತಾಕೀತು ಮಾಡಲಾಗಿದೆ ಎಂದು ಹೇಳಿದರು.
ಹೆಚ್ಚಿನ ಸಿಜೇರಿಯನ್ ಹೆರಿಗೆಗೆ ಕಾರಣ ಪತ್ತೆ ಹಚ್ಚಲು ಸೂಚನೆ :
ಅತಿ ಹೆಚ್ಚಿನ ಸಿಜೇರಿಯನ್ ಹೆರಿಗೆ ಪ್ರಮಾಣ ಜರುಗುವ ಜಿಲ್ಲೆಗಳ ಪೈಕಿ, ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿ ಎರೆಡನೇ ಸ್ಥಾನದಲ್ಲಿದೆ. ಸಿಜೇರಿಯನ್ ಹೆರಿಗೆ ಪ್ರಮಾಣದ ರಾಷ್ಟ್ರೀಯ ಸರಾಸರಿ ಶೇ.20 ರಷ್ಟು ಮಾತ್ರ ಇದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಜರುಗುವ ಸಿಜೇರಿಯನ್ ಹೆರಿಗೆ ಪ್ರಮಾಣ ಶೇ.65ಕ್ಕಿಂತಲೂ ಹೆಚ್ಚಿರುವ ಬಗ್ಗೆ, ದಿಶಾ ಸಭೆಯಲ್ಲಿ ಕಳವಳ ವ್ಯಕ್ತ ಪಡಿಸಲಾಯಿತು.
ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಸಿಜೇರಿಯನ್ ಹೆರಿಗೆ ಪ್ರಮಾಣ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಾಸದ್ ಅವರನ್ನು ಪ್ರಶ್ನಿಸಿ, ಸಿಜೇರಿಯನ್ನಲ್ಲಿ ಚಿತ್ರದುರ್ಗ ರಾಜ್ಯದಲ್ಲಿಯೇ ಎರಡನೆ ಸ್ಥಾನ ಪಡೆದಿರುವುದು ಅವಮಾನಕರ ಸಂಗತಿಯಾಗಿದೆ. ಯಾವ ಕಾರಣಕ್ಕಾಗಿ ಸಿಜೇರಿಯನ್ ಹೆರಿಗೆ ಹೆಚ್ಚಾಗುತ್ತಿದೆ? ವೈದ್ಯರು ಹಣ ಪಡೆಯುವ ಇಚ್ಛೆಯಿಂದ ಸಿಜೇರಿಯನ್ ಮಾಡಲು ಮುಂದಾಗುತ್ತಿದ್ದಾರಾ?, ಎಂದು ಕೇಳಿದರು.
ಜಿಲ್ಲಾ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದಲ್ಲಿ ಚೀಟಿ ಮಾಡಲು ಗಂಟೆಗಟ್ಟಲೇ ಸರತಿಯಲ್ಲಿ ನಿಲ್ಲಬೇಕಿದೆ. ಆರೋಗ್ಯ ಸರಿ ಇರದ ರೋಗಿಗಳು ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆಯಲ್ಲ. ಬಿಸಿಲು ಧಗಧಗಿಸುತ್ತಿದ್ದರು ಫ್ಯಾನ್ ಅಳವಡಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚಿಗೆ ಜಿಲ್ಲೆಯಲ್ಲಿ ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆ ಬರುವ ರೋಗಿಗಳ ಸಂಖ್ಯೆ ಹೆಚ್ಚಿದೆ. ಇದರ ಬಗ್ಗೆ ಯಾವ ಲೆಕ್ಕವೂ ಇಲ್ಲ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳು ಎಷ್ಟು ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಕರ್ತವ್ಯ ನಿರ್ಲಕ್ಷ ತೋರಿದವರ ಮೇಲೆ ಕ್ರಮ ಕೈಗೊಂಡಿದ್ದೀರಿ, ಕಾರಣ ಕೇಳಿ ನೋಟಿನ್ ನೀಡಿದ್ದೀರಿ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಪ್ರಶ್ನಿಸಿದರು.
ಕೇಂದ್ರ ಸಚಿವರ ಮಾತಿ ಧ್ವನಿಗೂಡಿಸಿದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಚಿತ್ರದುರ್ಗ ಜಿಲ್ಲೆಯ ಹೆಣ್ಣು ಮಕ್ಕಳಿಗೆ ಸಾಮಾನ್ಯ ಹೆರಿಗೆ ಆಗುವುದಿಲ್ಲವೇ? ಎಲ್ಲರೂ ಸಿಜೇರಿಯನ್ಗೆ ಒಳಗಾಗಬೇಕೆ? ಎಂದು ಖಾರವಾಗಿ ಪ್ರಶ್ನಿಸಿ, ಕೂಡಲೇ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸಿಜೇರಿಯನ್ ಪ್ರಕರಣಗಳ ಕಾರಣ ಪತ್ತೆ ಹಚ್ಚುವಂತೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಾಸದ್ ಉತ್ತರಿಸಿ, ಅಧಿಕಾರ ವಹಿಸಿಕೊಂಡು ಐದು ತಿಂಗಳು ಆಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುತ್ತಿದೆ. ಇದುವರೆಗೂ ಕರ್ತವ್ಯ ಲೋಪ ಎಸಗಿದ ನಾಲ್ಕು ವೈದ್ಯಾಧಿಕಾರಿಗಳನ್ನು ಅನುಮಾನತು ಮಾಡಿ ಎಂಬುದಾಗಿ ಇಲಾಖೆ ಆಯುಕ್ತರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಜಿಲ್ಲೆಯ ಗರ್ಭಿಣಿ ಹೆಣ್ಣು ಮಕ್ಕಳಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ಹೆಚ್ಚಾಗಿ ಕಂಡುಬರುವುದರಿಂದ ಹೆರಿಗೆ ಸಂದರ್ಭದಲ್ಲಿ ಹೆಚ್ಚಿನ ಸಿಜೇರಿಯನ್ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ 78, ರಾಜ್ಯ ಹೆದ್ದಾರಿಗಳಲ್ಲಿ 67 ಅಪಘಾತ ವಲಯಗಳನ್ನಾಗಿ ಗುರುತಿಸಲಾಗಿದೆ. ರಸ್ತೆ ಅಪಘಾತಗಳಿಂದ ವರ್ಷಕ್ಕೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗುತ್ತಿದ್ದಾರೆ. ರಸ್ತೆಗಳಲ್ಲಿ ಸರಿಯಾದ ನಾಮಫಲಕ ಇಲ್ಲದಿರುವುದು, ವೈಟ್ ಮಾರ್ಕ್ ಇಲ್ಲದಿರುವುದು, ಅವೈಜ್ಞಾನಿಕ ರಚನೆ ಇತ್ಯಾದಿ ರಸ್ತೆ ಸುರಕ್ಷತಾ ಕ್ರಮಗಳು ಅನುಷ್ಠಾನ ಮಾಡದೇ ಇರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಸುರಕ್ಷತಾ ಕ್ರಮಗಳಿಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.