i
ಬೆತ್ತಲೆ ಸೇವೆ ಇಲ್ಲದೆ ಅದ್ಧೂರಿಯಾಗಿ ನಡೆದ ಚಂದ್ರಗುತ್ತಿ ರೇಣುಕಾಂಬಾ ದೇವಿ ರಥೋತ್ಸವ…
ಚಂದ್ರವಳ್ಳಿ ನ್ಯೂಸ್, ಸೊರಬ:
ಚಂದ್ರಗುತ್ತಿಯ ರೇಣುಕಾಂಬಾ ದೇವಿಯ ಮಹಾರಥೋತ್ಸವವು ಉಧೋ… ಉಧೋ… ಎಂಬ ಘೋಷದೊಂದಿಗೆ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಬೆಟ್ಟದ ಮೇಲಿರುವ ದೇವಾಲಯದಲ್ಲಿ ರೇಣುಕಾಂಬಾ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಸಾಗರ ಉಪ ವಿಭಾಗಾಧಿಕಾರಿ ಆರ್. ಯತೀಶ್ ಚಾಲನೆ ನೀಡಿದರು. ಭಕ್ತರು ದೇವಿಯ ನಾಮ ಸ್ಮರಣೆಯೊಂದಿಗೆ ರಥ ಎಳೆದರು. ಭಕ್ತರು ರಥಕ್ಕೆ ಕಾಳು ಮೆಣಸು, ಉತ್ತತ್ತಿ, ಬಾಳೆ ಹಣ್ಣು ಬೀರುವ ಮೂಲಕ ಇಷ್ಟರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ರಾಜ್ಯ ಮತ್ತು ಹೊರ ರಾಜ್ಯದ ಲಕ್ಷಾಂತರ ಭಕ್ತರು ಮಹಾರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರೇಣುಕಾಂಬೆಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಹರಕೆ ಹೊತ್ತವರು ದೀಡ್ ನಮಸ್ಕಾರ ಸಲ್ಲಿಸುವುದು, ಪಡ್ಲಿಗೆ ತುಂಬಿಸುವುದು, ಚೌಲ, ಮಕ್ಕಳಿಗೆ ಕಿವಿ ಚುಚ್ಚಿಸುವುದು ಮುಂತಾದ ಕಾರ್ಯಗಳನ್ನು ಮಾಡುವ ಮೂಲಕ ದೇವಿ ಕೃಪೆಗೆ ಪಾತ್ರರಾದರು.
ರಥೋತ್ಸವದ ತಾಂತ್ರಿಕ ವಿಧಿ-ವಿಧಾನಗಳನ್ನು ಕೆಳದಿ ರಾಮ್ ಭಟ್ ವಹಿಸಿದ್ದರು. ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಇಲ್ಲಿನ ಪ್ರಧಾನ ಅರ್ಚಕ ಅರವಿಂದ ಭಟ್ ಅವರ ನೇತೃತ್ವದಲ್ಲಿ ಜರುಗಿತು.
ರೈತರು ತಾವು ಬೆಳೆದ ಅಡಿಕೆ, ಬಾಳೆ ಫಸಲನ್ನು ರಥಕ್ಕೆ ಸಮರ್ಪಿಸಿದರು. ಇನ್ನು ಭಕ್ತರು ಹೂವಿನ ಹಾರಗಳನ್ನು ಮೆರವಣಿಗೆ ಮೂಲಕ ತಂದು ರಥಕ್ಕೆ ಅರ್ಪಿಸುವುದು ವಿಶೇಷವಾಗಿತ್ತು. ಶ್ರೀ ರೇಣುಕಾಂಬ ದೇವಿ ಮಹಾ ರಥೋತ್ಸವನ್ನು ಕಣ್ತುಂಬಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಂದ್ರಗುತ್ತಿ ಗ್ರಾಮಕ್ಕೆ ಆಗಮಿಸಿದ್ದರು. ಹಾವೇರಿ, ದಾವಣಗೆರೆ, ಬಳ್ಳಾರಿ, ಹುಬ್ಬಳ್ಳಿ ಶಿವಮೊಗ್ಗ, ಬ್ಯಾಡಗಿ, ರಾಣೆಬೆನ್ನೂರು, ರಾಯಚೂರು, ಚಿತ್ರದುರ್ಗ ಸೇರಿದಂತೆ ಉತ್ತರ ಕರ್ನಾಟಕ ಮತ್ತು ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥೋತ್ಸವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ತಾಲೂಕಿನ ವಿವಿಧ ಸಂಘ ಸಂಸ್ಥೆಯವರು ಬಂದಂತಹ ಭಕ್ತರಿಗೆ ಕುಡಿಯಲು ನೀರು-ಬೆಲ್ಲ ಸೇವೆ ನೀಡಿದರು.
ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ, ತ್ರಿಶೂಲದ ಭೈರಪ್ಪ, ದೇವರಿಗೆ ಜಾತ್ರೆಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.