i
ಚುನಾವಣೆ ನೆಪ ಹೇಳದೆ ಸಾರ್ವಜನಿಕರ ಎಲ್ಲ ಕೆಲಸ ಕಾರ್ಯಗಳನ್ನು ಮಾಡಬೇಕು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಆದರೆ ಸಾರ್ವಜನಿಕರರಿಗೆ, ಮದುವೆ ಮುಂಜಿ ಮಾಡಿಕೊಳ್ಳುವ, ಸಾಂಸ್ಕೃತಿಕ, ಧಾರ್ಮಿಕ ಕೆಲಸ ಕಾರ್ಯಗಳಿಗೆ ಯಾವುದೇ ನಿರ್ಬಂಧವಿಲ್ಲ. ಮಾದರಿ ನೀತಿ ಸಂಹಿತೆ ಕೂಡಾ ಅನ್ವಯ ಆಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸ್ಪಷ್ಟಪಡಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದಿಂದ ಲೋಕಸಭಾ ಚುನಾವಣೆ ನೀತಿ ಸಂಹಿತೆ ಕುರಿತು ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ ಮಾಧ್ಯಮ ಸಂವಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮದುವೆ ಸೇರಿದಂತೆ ಯಾವುದೇ ಕೌಟುಂಬಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಚುನಾವಣಾಧಿಕಾರಿಗಳ ಅನುಮತಿ ಬೇಕಿಲ್ಲ. ಪ್ರತಿಯೊಬ್ಬ ಅರ್ಹ ಮತದಾರ ಯಾವುದೇ ಆಪೇಕ್ಷೆಯಿಲ್ಲದೇ ಯಾವುದೇ ಆಮಿಷ, ಭಯಭೀತರಾಗದೇ ನಿರ್ಭಿತಿಯಿಂದ ತಮ್ಮ ಹಕ್ಕನ್ನು ಚಲಾವಣೆ ಮಾಡಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವಂತಹ ಅವಕಾಶ ಕಲ್ಪಿಸುವ ಉದ್ದೇಶವೇ ಮಾದರಿ ನೀತಿ ಸಂಹಿತೆಯಾಗಿದೆ. ಇದರಿಂದ ಸಾರ್ವಜನಿಕರ ದೈನಂದಿನ ಜೀವನದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಚುನಾವಣೆ ನೆಪ ಹೇಳಿ ಸಾರ್ವಜನಿಕರನ್ನು ಅಲೆದಾಡಿಸದೇ ಚುನಾವಣಾ ಕಾರ್ಯದ ಜತೆ ಜತೆಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನೂ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೊಸ ಘೋಷಣೆ, ಹೊಸ ಟೆಂಡರ್, ಹೊಸ ಕೆಲಸ ಕಾರ್ಯಕ್ರಮಗಳನ್ನು ಪ್ರಾರಂಭ ಮಾಡುವುದನ್ನು ಹೊರತುಪಡಿಸಿ, ಈಗಾಗಲೇ ಚಾಲ್ತಿಯಲ್ಲಿರುವ ಕೆಲಸ ಕಾರ್ಯಗಳು, ಯೋಜನೆಗಳಿಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದರು.
ಯಾವುದೇ ಧಾರ್ಮಿಕ ಆಚಾರ-ವಿಚಾರ, ಸಂಪ್ರದಾಯಗಳಿಗೆ ಮಾದರಿ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಇದಕ್ಕೆ ಅನುಮತಿ ಪಡೆಯುವ ಅಗತ್ಯವೂ ಇಲ್ಲ. ಆದರೆ ಧಾರ್ಮಿಕ ಆಚರಣೆಗಳು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತನೆಯಾಗಬಾರದು. ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತನೆಯಾದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಹೇಳಿದರು.
ಚುನಾವಣಾ ಕಾರ್ಯ ಜೊತೆಗೆ ಚುನಾವಣಾ ನೀತಿ ನಿಯಮಗಳಿಗೆ ಬದ್ಧವಾಗಿ ಸಾರ್ವಜನಿಕರಿಗೆ ಅನುಕೂಲವಾಗು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಹಾಗೂ ಜಿಲ್ಲೆಯ ಬರ ಪರಿಹಾರ ಕಾರ್ಯವನ್ನೂ ನಿರ್ವಹಿಸಬೇಕಿದೆ ಎಂದರು.
ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಪಟ್ಟಂತೆ ಈಗಾಗಲೇ ಮಾರ್ಚ್ ೧೬ ರಿಂದಲೇ ಪ್ರಚಾರಕ್ಕೆ ಬಳಸಿದಂತಹ ಪೋಸ್ಟರ್ಸ್, ಬ್ಯಾನರ್ಸ್, ಬಂಟಿಂಗ್ಸ್ಗಳನ್ನು ಇತ್ಯಾದಿಗಳನ್ನು ತೆರವುಗೊಳಿಸಲಾಗಿದೆ. ಇದಕ್ಕಾಗಿ ಎಫ್ಎಸ್ಟಿ, ಎಸ್ಎಸ್ಟಿ, ವಿವಿಟಿ ಸೇರಿದಂತೆ ಬೇರೆ ಬೇರೆ ತಂಡಗಳನ್ನು ರಚನೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿ ತಾಲ್ಲೂಕಿಗೆ ತಾ.ಪಂ ಇಒ ಹಂತದಲ್ಲಿ ನೋಡಲ್ ಅಧಿಕಾರಿಗಳಾಗಿ, ನಗರ ವ್ಯಾಪ್ತಿಯಲ್ಲಿ ನಗರಸಭೆ, ಮುಖ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರ ಜೊತೆಗೆ ಜಿಲ್ಲೆಯಾದ್ಯಂತ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ ಅವರು, ಮಾದರಿ ನೀತಿ ಸಂಹಿತೆ ಜಾರಿ ಜತೆ ಜತೆಗೆ ಚುನಾವಣಾ ಕಾರ್ಯವನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಕರಣ ದಾಖಲು:
ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ 87 ಪ್ರಕರಣಗಳನ್ನು ದಾಖಲಿಸಲಾಗಿದೆ. ಉಚಿತ ಕೊಡುಗೆ, ಮಾದರಿ ನೀತಿ ಸಂಹಿತೆ ಉಲಂಘನೆ, ಹಣ ಜಪ್ತಿಯ ತಲಾ ಒಂದು ಪ್ರಕರಣ ಹೊರತು ಪಡಿಸಿದರೆ ಹೆಚ್ಚಿನ ಪ್ರಕರಣಗಳು ಅಬಕಾರಿ ಇಲಾಖೆಗೆ ಸಂಬಂಧಿಸಿವೆ. ಬುಧವಾರ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ರೂ.೧.೬೦ ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ದಾಖಲಾತಿ ಇಲ್ಲದೆ ಹಣವನ್ನು ಮಾತ್ರ ವಶಪಡಿಸಿಕೊಳ್ಳಲಾಗುವುದು. ಈ ರೀತಿ ವಶಪಡಿಸಿಕೊಂಡ ಹಣವನ್ನು ಜಿ.ಪಂ.ಸಿಇಓ ಅಧ್ಯಕ್ಷತೆಯಲ್ಲಿನ ಹಣ ಜಪ್ತಿ ಸಮಿತಿ ಸುಪರ್ಧಿಗೆ ನೀಡಲಾಗುವುದು. ಹಣದ ಮೂಲದ ಬಗ್ಗೆ ಸೂಕ್ತ ದಾಖಲೆಯನ್ನು ಪ್ರಸ್ತುತ ಪಡಿಸಿದರೆ ಹಣವನ್ನು ಹಿಂದಿರುಗಿಸಲಾಗುವುದು. ಯಾವುದೇ ದಾಖಲೆ ನೀಡಲು ವಿಫಲವಾದರೆ ಸರ್ಕಾರಕ್ಕೆ ಹಣ ಹೋಗುತ್ತದೆ ಎಂದು ತಿಳಿಸಿದರು.
ಮತದಾನ ಬಹಿಷ್ಕರಿಸದೆ, ಹಕ್ಕು ಚಲಾಯಿಸಲು ಮನವಿ: ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಯಾರು ಕೂಡ ಮತದಾನ ಬಹಿಷ್ಕಾರ ಮಾಡಬಾರದು. ಮತದಾನ ಬಹಿಷ್ಕರಿಸದೇ, ಹಕ್ಕು ಚಲಾಯಿಸಬೇಕು. ಮತದಾನ ಬಹಿಷ್ಕಾರ ಮಾಡಿ, ತಮ್ಮ ಹಕ್ಕನ್ನು ಮೊಟಕುಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಜಿಲ್ಲೆಯ ಜನತೆಗೆ ಮನವಿ ಮಾಡಿದರು.
ಸಮರ್ಥ ಜನನಾಯಕನನ್ನು ಆಯ್ಕೆ ಮಾಡುವ ಮಹತ್ವದ ಕಾರ್ಯದಲ್ಲಿ ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಹಾಗೂ ಇತರರನ್ನು ಪ್ರೇರೇಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದರು.
ಸಾಮಾಜಿಕ ವ್ಯವಸ್ಥೆಯಲ್ಲಿರುವ ನಾವು ಸಂವಿಧಾನ ಆಶಯಗಳಂತೆ ಹಕ್ಕು ಮತ್ತು ಕರ್ತವ್ಯಗಳನ್ನು ಹೊಂದಿದ್ದೇವೆ. ಅಂತೆಯೇ ಪ್ರತಿಯೊಬ್ಬರೂ ಸಕಾಲದಲ್ಲಿ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಹಾಗೂ ಇನ್ನಷ್ಟು ಗಟ್ಟಿಗೊಳಿಸಲು ಮತದಾನ ಉತ್ತಮ ವಿಧಾನವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಮತದಾನದಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೋ ಸಲ್ಲದ ಕಾರಣಕ್ಕಾಗಿ ಮತದಾನ ಬಹಿಷ್ಕರಿಸುವುದು ಅಥವಾ ಮತದಾನದಿಂದ ಹೊರಗುಳಿಯುವುದು ಕೂಡ ಸರಿಯಲ್ಲ ಎಂದರು.
ನಗರದ ಪ್ರದೇಶಗಳಲ್ಲಿರುವ ಬುದ್ದಿವಂತರು, ವಿದ್ಯಾವಂತರು ಮತದಾನದಿಂದ ಹೊರಗುಳಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಪ್ರದೇಶದ ಮತದಾರರೆಲ್ಲರೂ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಅವರು ಮನವಿ ಮಾಡಿದರು.
ನಗರ ಪ್ರದೇಶ ಸೇರಿದಂತೆ ಹಿಂದಿನ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಅಲ್ಲದೇ ನಗರ ನಿವಾಸಿಗಳ ಪ್ರತಿ ಮತದಾರರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿಕೊಳ್ಳುವುದಾಗಿ ಅವರು ನುಡಿದರು.
ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವ ಚುನಾವಣೆ ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅಕ್ರಮ ಚಟುವಟಿಕೆಗಳ ವಿರುದ್ಧ ಹದ್ದಿನಕಣ್ಣಿಡಲಾಗಿದೆ. ವ್ಯವಸ್ಥಿತ ನಿರ್ವಹಣೆಗಾಗಿ ಪ್ರತಿ ತಾಲೂಕುಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಹಲವು ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ರಚಿಸಲಾಗಿದ್ದು, ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ ಎಂದವರು ನುಡಿದರು.
೫೦,೦೦೦ಕ್ಕಿಂತ ಹೆಚ್ಚಿನ ಹಣದೊಂದಿಗೆ ಊರಿಂದೂರಿಗೆ ಪ್ರಯಾಣ ಮಾಡುವವರು ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಅಲ್ಲದೇ ೨ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ಅಥವಾ ಸಾಗಾಟ ಪತ್ತೆಯಾದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಯಾವುದೇ ಗ್ರಾಮದಲ್ಲಿಯೂ ಸಹ ಮತದಾನ ಬಹಿಷ್ಕಾರ ಕಾರ್ಯಕ್ಕೆ ಮುಂದಾಗಬಾರದು. ಮತದಾನದಿಂದ ಯಾರೂ ವಂಚಿತರಾಗಬಾರದು. ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ತಮ್ಮ ಹಕ್ಕನ್ನು ಚಲಾವಣೆ ಮಾಡುವುದರ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕು ಎಂದು ಹೇಳಿದರು.
ತುರ್ತ ಸ್ಪಂದನೆ ಸಹಾಯವಾಣಿ 112 ಕರೆ ಮಾಡಿ: ಗ್ರಾಮೀಣ ಭಾಗದಲ್ಲಿ ಬೀಟ್ ಪೊಲೀಸ್ ಕಾನ್ಸೆಟೇಬಲ್ಗಳು ವಾರದಲ್ಲಿ ಎರೆಡು ದಿನ ಬೀಟ್ ಸದಸ್ಯರ ಸಭೆ ಮಾಡುತ್ತಾರೆ. ಇದರ ಹೊರತಾಗಿಯೂ ಯಾವುದೇ ತುರ್ತ ಸಂದರ್ಭದಲ್ಲಿ ಸಹಾಯವಾಣಿ ೧೧೨ ಕರೆ ಮಾಡಬಹುದು. ೧೨ ನಿಮಿಷದ ಅವಧಿಯಲ್ಲಿ ಪೊಲೀಸರು ನೆರವಿಗೆ ಧಾವಿಸುತ್ತಾರೆ. ಜಿಲ್ಲೆಯ ಎಲ್ಲಾ ಚೆಕ್ ಪೊಸ್ಟ್ಗಳಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ ತಪಾಸಣೆ ಕಾರ್ಯ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ತಪಾಸಣೆ ಮಾಡುವುದನ್ನು ಅವಮಾನ ಎಂದು ಕೊಳ್ಳಬಾರದು. ಸಿಬ್ಬಂದಿಯೊಂದಿಗೆ ಸಹನೆಯಿಂದ ವರ್ತಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿ ಆರ್.ಮಾರುತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ ಗೌಡಗೆರೆ, ಪ್ರಧಾನ ಕಾರ್ಯದರ್ಶಿ ಎಸ್.ಸಿದ್ದರಾಜು, ಪತ್ರಕರ್ತರು ಇದ್ದರು.