i
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಶಿವಮೊಗ್ಗದಲ್ಲಿ ಈಶ್ವರಪ್ಪಗೆ ಬೆಂಬಲ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ನಾನು ಈಗ ಯಾವುದೇ ಪಕ್ಷದಲ್ಲಿ ಇಲ್ಲ. ನನಗೆ ಯಾವುದೇ ಬಂಧನವೂ ಇಲ್ಲ. ನಾನು ಸ್ವತಂತ್ರ. ಹೀಗಾಗಿ ನಾನು ಯಾರ ಪರವಾಗಿ, ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಇದರಂತೆ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಹಾಗೂ ದುರ್ಗದಲ್ಲಿ ಗೋವಿಂದ ಕಾರಜೋಳ ಅವರನ್ನು ಬೆಂಬಲಿಸಿ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸ್ಪಷ್ಟನೆ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲವರು ಈ ಕುರಿತು ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಿಬಿಡಲಾಗುತ್ತಿದೆ. ಮಾಧ್ಯಮವದವರು ಈ ಕುರಿತು ಗಮನಿಸಬೇಕೆಂದರು.
ಈಶ್ವರಪ್ಪ ಮತ್ತು ಗೋವಿಂದ ಕಾರಜೋಳ ಸಾಹೇಬರು ನನ್ನ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇವರ ಮೇಲೆ ನನ್ನ ಋಣವಿದೆ. ಹೀಗಾಗಿ ನಾನು ಸ್ವಯಂ ಇಚ್ಚೆಯಿಂದ ಇವರಿಬ್ಬರ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಲು ಆಗಮಿಸಿದ್ದೇನೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಗೆಲುವಿನ ನಾಗಾಲೋಟದಲ್ಲಿ ಮುನ್ನಡೆದಿದ್ದಾರೆ. ಎಲ್ಲ ಕಡೆಯಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ನಾನು ಬೈಂದೂರು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಓಡಾಡಿದ್ದೇನೆ. ಶಿಕಾರಿಪುರ, ಶಿವಮೊಗ್ಗ ಗ್ರಾಮಾಂತರ, ಸೊರಬ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಸುಮಾರು ೧.೩೦ ಲಕ್ಷ ಭೋವಿ ಜನಾಂಗದವರಿದ್ದು, ಇವರೆಲ್ಲರೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಾಭ ಪಡೆದವರೆಲ್ಲರೂ ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಈಶ್ವರಪ್ಪ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ಮತ್ತಿತರ ನಾಯಕರು ಉಪಸ್ಥಿತರಿದ್ದರು.