i
ನರೇಗಾ ಕಾಮಗಾರಿ ವೀಕ್ಷಿಸಿ ಕೂಲಿಕಾರರೊಂದಿಗೆ ಸಂವಾದ ಮಾಡಿದ ಅಪರ ಮುಖ್ಯ ಕಾರ್ಯದರ್ಶಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿಗೆ ಗುರುವಾರ ಭೇಟಿ ನೀಡಿದರು.
ಲಕ್ಕಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವಂತಹ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನವಾಗುತ್ತಿರುವ ಕೆರೆ ಹೂಳು ತೆಗೆಯುವ ಕಾಮಗಾರಿ ವೀಕ್ಷಣೆ ಮಾಡಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಲಕ್ಕಿಹಳ್ಳಿ ಗ್ರಾಮದ ಕಲ್ಯಾಣಿ ಅಭಿವೃದ್ಧಿ ಕಾಮಗಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾಮಗಾರಿಗಳನ್ನೂ ಸಹ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಉಪಕಾರ್ಯದರ್ಶಿ ಟಿ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಹೊಸದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.