i
ಜೆಡಿಎಸ್-ಬಿಜೆಪಿ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ-ಕಾಂತರಾಜ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳರವರನ್ನು ಅತಿ ಹೆಚ್ಚು ಮತಗಳ ಅಂತರಿಂದ ಗೆಲ್ಲಿಸುವುದು ನಮ್ಮ ಗುರಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ತಿಳಿಸಿದ್ದಾರೆ. ಚಿತ್ರದುರ್ಗ ನಗರದ ಕೋಟೆ ರಸ್ತೆಯಲ್ಲಿನ ಕಾಳಮ್ಮ ದೇವಾಲಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿ ನಂತರ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರಾದ ದೇವೇಗೌಡರು ಮತ್ತು ರಾಜ್ಯ ನಾಯಕರಾದ ಕುಮಾರಸ್ವಾಮಿಯವರು ಬಿಜೆಪಿಯ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರ ಪರವಾಗಿ ಪ್ರಚಾರ ಮಾಡುವುದಲ್ಲದೆ ಅವರ ಗೆಲುವಿಗಾಗಿ ಶ್ರಮ ಹಾಕಲಿದ್ದೇವೆ ಎಂದರು.ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ 8 ಕ್ಷೇತ್ರಗಳಿದ್ದು ಇದರಲ್ಲಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರು ಸಹಾ ಬಿಜೆಪಿಯೊಂದಿಗೆ ನಮ್ಮ ಪಕ್ಷ ಸಾಥ್ ನೀಡಲಿದೆ ಎಂಟು ಕ್ಷೇತ್ರದಲ್ಲಿಯೂ ಸಹಾ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಗೆಲುವಿಗೆ ಶ್ರಮ ಹಾಕಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಚಿತ್ರದುರ್ಗದ ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ ಎಂದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ಸಹಾ ಕೇಂದ್ರದಲ್ಲಿ ಮೋದಿಯವರೇ ಇರಬೇಕು ಎಂದು ಮತದಾರರು ಆಸೆ ಪಟ್ಟಿದ್ದಾರೆ. ಕಳೆದ ಎರಡು ಬಾರಿ ಮೋದಿಯವರು ಪ್ರಧಾನ ಮಂತ್ರಿಯಾಗಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಮುಂದೆ ಇವರೇ ಪ್ರಧಾನ ಮಂತ್ರಿಯಾದರೆ ದೇಶ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ. ಈ ಹಿನ್ನೆಲೆಯಲ್ಲಿ ಮತದಾರ ಕೇಂದ್ರದಲ್ಲಿ ಮೋದಿಯನ್ನು ಪ್ರಧಾನ ಮಂತ್ರಿಯಾಗಿ ನೋಡಲು ಬಯಸಿದ್ದರಿಂದ ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧ್ಯವಾಗಲಿದೆ ಎಂದು ಕಾಂತರಾಜ್ ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ವೆಂಕಟೇಶ್, ತಿಪ್ಪಮ್ಮ ವೆಂಕಟೇಶ್, ಶಶಿಧರ್, ಭಾಸ್ಕರ್, ಹರೀಶ್, ತಾರಕೇಶ್ವರಿ, ಭಾಗ್ಯಮ್ಮ, ವಿರೇಶ್, ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯ್ಕ್, ತಾಲ್ಲೂಕು ಅಧ್ಯಕ್ಷ ತಿಮ್ಮಣ್ಣ, ಮಂಜುನಾಥ್, ಬಿಜೆಪಿ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯ ಲಿಂಗರಾಜು ಸೇರಿದಂತೆ ಇತರರು ಭಾಗವಹಿಸಿದ್ದರು.ಚಿತ್ರದುರ್ಗ ನಗರಸಭೆ 1 ರಿಂದ 5ನೇ ವಾರ್ಡವರೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ರವರ ಪರವಾಗಿ ಮತಯಾಚನೆ ಮಾಡಿದರು.