i
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು…
ಚಂದ್ರವಳ್ಳಿ ನ್ಯೂಸ್, ಹಾಸನ:
ಸಂಸದ, 2024ರ ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಈ ಪ್ರಕರಣದಿಂದ ದೇವೇಗೌಡರ ಕುಟುಂಬ ಮುಜುಗರ ಅನುಭವಿಸುತ್ತಿದ್ದು, ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯೊಬ್ಬರು ಮಹಿಳಾ ಆಯೋಗಕ್ಕೆ ಮೊದಲ ದೂರು ನೀಡಿದ್ದಾರೆ.
ಸಂತ್ರಸ್ತೆಯೊಬ್ಬರು ಪೋನ್ ಕಾಲ್ ಮೂಲಕ ಶನಿವಾರ ಆಯೋಗಕ್ಕೆ ದೂರು ನೀಡಿದ್ದರು; ಭಾನುವಾರ ಮತ್ತೋರ್ವ ಮಹಿಳೆ ವಾಟ್ಸಾಪ್ ಮೂಲಕ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ, ಪ್ರಜ್ವಲ್ ಚಿಕ್ಕಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ‘ಉಪ್ಪು ತಿಂದವರು ನೀರು ಕುಡಿಯಲೇಬೇಕು, ತನಿಖೆಯಾಗಲಿ ಎಂದು ಹೇಳುವ ಮೂಲಕ ತಮ್ಮ ಅಣ್ಣನ ಪುತ್ರನಿಂದ ಅಂತರ ಕಾಯ್ದುಕೊಂಡಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ದೌರ್ಜನ್ಯ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ತಂಡದ ಮೂಲಕ ಪ್ರಕರಣದ ತನಿಖೆಗೆ ನಡೆಸುವಂತೆ ಮನವಿ ಮಾಡಿದ್ದರು. ಈ ಪತ್ರದ ಮೇರೆಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ತಂಡ ರಚನೆಗೆ ತೀರ್ಮಾನಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಬಿಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತಂಡ ರಚನೆಯಾಗಿದೆ. ಈಗಾಗಲೇ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದ್ದು, ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಎಸ್ಐಟಿ ರಚನೆಯಾಗುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಂಧನದ ಭೀತಿಯಿಂದಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನ್ದೇಶಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಇದೇ ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್ಗೆ ಸಂಬಂಧಿಸಿದಂತೆ ಚುನಾವಣಾ ಜೆಡಿಎಸ್ ಏಜೆಂಟ್ ಹಾಸನದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.