i
ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು 1 ಜುಲೈ 1947ರಲ್ಲಿ ಜನಿಸಿದ್ದರು. 29 ಏಪ್ರಿಲ್ 2024 ರಂದು ಅವರು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮೈಸೂರಿನ ಅಶೋಕಪುರಂ ನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರ ಕೇಂದ್ರ ಸರ್ಕಾರದಲ್ಲಿ 1999 ಮತ್ತು 2004ರ ನಡುವೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು. ನಂತರ 2013 ಮತ್ತು 2016 ರ ನಡುವೆ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಅವರು 1980 ರಿಂದ ಆರು ಬಾರಿ ಚಾಮರಾಜನಗರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ತಿಂಗಳು ಮಾರ್ಚ್ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದನ್ನು ಸ್ಮರಿಸಬಹುದಾಗಿದೆ. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರ ಬೆಂಬಲ ಪಡೆಯಲು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದು ಇತಿಹಾಸ. ಮೈಸೂರು ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡ, ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದವರು.
ಶ್ರೀನಿವಾಸ್ ಪ್ರಸಾದ್ ಅವರು 1974 ರಲ್ಲಿ ಕರ್ನಾಟಕ ವಿಧಾನಸಭೆಗೆ ಸ್ವತಂತ್ರವಾಗಿ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವ ಮೂಲಕ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ್ದರು. 1976 ರಲ್ಲಿ ಜನತಾ ಪಕ್ಷ ಸೇರಿದ್ದರು. ನಂತರ 1979ರಲ್ಲಿ ಜನತಾ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದಾದ ನಂತರ ಮತ್ತೆ ಜೆಡಿಎಸ್ ಹೋಗಿದ್ದರು. ಕೊನೆಗೆ ಬಿಜೆಪಿ ಪಕ್ಷದಲ್ಲಿ ನೆಲೆಯೂರಿ ರಾಜಕಾರಣ ಮಾಡಿದ್ದರು.
ಜೀವನದ ಹಾದಿ: ಶ್ರೀನಿವಾಸಪ್ರಸಾದ್ ಅವರು ರಾಜ್ಯಶಾಸ್ತ್ರದಲ್ಲಿ ಎಂಎ ಪದವೀಧರರು. 1974ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿ 1974ಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಉಪಚುನಾವಣೆ ಹಾಗೂ 1978ರಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ 1980ರಲ್ಲಿ ಚಾಮರಾಜನಗರ ಲೋಕಸಭ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1984, 1989, 1991 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಾಗೂ 1999ರಲ್ಲಿ ಜೆ.ಡಿ.ಯು ಅಭ್ಯರ್ಥಿಯಾಗಿ ಹಾಗೂ 2019 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಆರು ಬಾರಿ ಆಯ್ಕೆಯಾದ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
2017 ರಲ್ಲಿ ನಂಜನಗೂಡು (ಮೀಸಲು) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸೋಲಿನ ನಂತರ 2019 ರಲ್ಲಿ ಚಾಮರಾಜನಗರ (ಮೀಸಲು) ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಮತ್ತೆ ಸಂಸದರಾಗಿ ಆಯ್ಕೆಯಾಗಿ ಬಂದರು.
ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವಿವಾಹಿತ ಮಹಿಳೆಯರಿಗೆ ಮಾಶಾಸನ ನೀಡುವ ಮಹತ್ವದ ಮನಸ್ವಿನಿ ಯೋಜನೆ ಜಾರಿಗೆ ತಂದಿದ್ದರು. 2017ರಲ್ಲಿ ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಅನಾರೋಗ್ಯ ನೆಪದಲ್ಲಿ ಕೈಬಿಟ್ಟಿದ್ದರಿಂದ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಬೇಸಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾದರು. ಬಳಿಕ 2018 ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.