i
ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ನಡೆದ ಏಕನಾಥೇಶ್ವರಿ ಅಮ್ಮನ ಮೆರವಣಿಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಕೋಟೆ ರಸ್ತೆಯಲ್ಲಿರುವ ಪಾದಗುಡಿಯಿಂದ ಹೊರಟ ಏಕನಾಥೇಶ್ವರಿ ಆನೆಬಾಗಿಲು, ಬುರುಜಿನಹಟ್ಟಿ, ಹೊಳಲ್ಕೆರೆ ರಸ್ತೆ, ಎಸ್.ಬಿ.ಎಂ.ರಸ್ತೆ, ಧರ್ಮಶಾಲಾ ರಸ್ತೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಕರುವಿನಕಟ್ಟೆ ವೃತ್ತದ ಮೂಲಕ ಸಾಗಿತು. ಮಲ್ಲಿಗೆ, ಕನಕಾಂಬರ, ಸುಗಂಧರಾಜ, ಗುಲಾಬಿ, ಸೇವಂತಿಗೆ, ದ್ರಾಕ್ಷಿ, ಬಾದಾಮಿ, ದೊಡ್ಡ ದೊಡ್ಡ ಗಾತ್ರದ ಹಾರಗಳಿಂದ ಅಲಂಕರಿಸಲಾಗಿದ್ದ ಏಕನಾಥೇಶ್ವರಿ ಎತ್ತಿನಗಾಡಿಯಲ್ಲಿ ವಿರಾಜಮಾನಳಾಗಿದ್ದ ಮೆರವಣಿಗೆಯನ್ನು ರಸ್ತೆಯ ಎರಡು ಬದಿಗಳಲ್ಲಿ ನಿಂತಿದ್ದ ಭಕ್ತರು ವೀಕ್ಷಿಸಿ ಸಂಭ್ರಮಿಸಿದರು.ಅಲ್ಲಲ್ಲಿ ಮನೆಯ ಮುಂದೆ ಮಹಿಳೆಯರು ನೀರು ಹಾಕಿ ರಂಗೋಲಿ ಬಿಡಿಸಿ ಏಕನಾಥೇಶ್ವರಿ ಅಮ್ಮನಿಗೆ ಭಕ್ತಿ ಸಮರ್ಪಿಸಿದರು.ಡೊಳ್ಳು, ತಮಟೆ, ಉರುಮೆ ಸದ್ದಿಗೆ ಮೆರವಣಿಗೆಯಲ್ಲಿ ಸೇರಿದ್ದ ನೂರಾರು ಯುವಕರು ಕುಣಿದು ಕುಪ್ಪಳಿಸಿದರು.ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ, ನಿರ್ದೇಶಕ ರಾಮಜ್ಜ, ಮಲ್ಲಿಕಾರ್ಜುನ್, ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಓಂಕಾರ್, ಶಾರದ ಬ್ರಾಸ್ ಬ್ಯಾಂಡ್ನ ಗುರುಮೂರ್ತಿ ಹಾಗೂ ಉತ್ಸವ ಸಮಿತಿಯ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.