![](https://www.chandravallinews.com/wp-content/uploads/2024/05/WhatsApp-Image-2024-05-14-at-8.15.32-PM-1-1024x333.jpeg)
i
ಡಿಸಿಸಿ, ಪಿಎಲ್ ಡಿ ಬ್ಯಾಂಕ್ ಹಾಗೂ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನೀಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸ್ಥಳೀಯ ಸಂಸ್ಥೆಗಳಲ್ಲಿರುವಂತೆ ಡಿ.ಸಿ.ಸಿ. ಬ್ಯಾಂಕ್, ಪಿ.ಎಲ್.ಡಿ.ಬ್ಯಾಂಕ್ ಹಾಗೂ ಎ.ಪಿ.ಎಂ.ಸಿ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ನೀಡುವಂತೆ ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಪಂಚಾಯತ್ರಾಜ್ ಕಾಯ್ದೆ ೧೯೯೩ ರ ಅನುಗುಣವಾಗಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ ಸಹಕಾರ ಇಲಾಖೆಯ ಅಧೀನಕ್ಕೊಳಪಡುವ ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಬೀಜ ನಿಗಮಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನವನ್ನು ಎಸ್ಸಿ.ಎಸ್ಟಿ, ಓ.ಬಿ.ಸಿ ಹಾಗೂ ಮಹಿಳೆಯರಿಗೆ ಮೀಸಲಾತಿ ಏಕೆ ಇಲ್ಲ ಎನ್ನುವುದು ನಮ್ಮ ಪ್ರಶ್ನೆ? ಈ ವಿಚಾರವಾಗಿ ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇವೆ. ಒಂದು ವೇಳೆ ಮೀಸಲಾತಿಯನ್ನು ನೀಡದಿದ್ದರೆ ಹೋರಾಟಕ್ಕಿಳಿಯಬೇಕಾಗುತ್ತದೆಂದು ಎಚ್ಚರಿಸಿದರು.
ಸಾಮಾಜಿಕ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಡಿ.ದುರುಗೇಶಪ್ಪ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಸಂವಿಧಾನಬದ್ದವಾಗಿ ಡಿ.ಸಿ.ಸಿ. ಬ್ಯಾಂಕ್, ಪಿ.ಎಲ್.ಡಿ. ಬ್ಯಾಂಕ್, ಎ.ಪಿ.ಎಂ.ಸಿ.ಗಳಲ್ಲಿ ನಡೆಯುವ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಎಸ್ಸಿ, ಎಸ್ಟಿ, ಓ.ಬಿ.ಸಿ. ಮಹಿಳೆಗೆ ಅವಕಾಶವಿಲ್ಲದಿರುವುದು ಈ ಜನಾಂಗಕ್ಕೆ ಆಗುತ್ತಿರುವ ದೊಡ್ಡ ಅನ್ಯಾಯ. ರಾಜ್ಯದ ಮುಖ್ಯಮಂತ್ರಿ ಹಾಗೂ ಸಹಕಾರ ಸಚಿವರಿಗೆ ಈ ಸಂಬಂಧ ಮನವಿ ಸಲ್ಲಿಸುವ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಚಳುವಳಿ ನಡೆಸಬೇಕಾಗುತ್ತದೆಂದು ಹೇಳಿದರು.
ಸಾಮಾಜಿಕ ಸಂಘರ್ಷ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಕಾರ್ಯದರ್ಶಿ ಪ್ರಹ್ಲಾದ್, ಖಜಾಂಚಿ ರಾಮಲಿಂಗಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.