![](https://www.chandravallinews.com/wp-content/uploads/2024/05/WhatsApp-Image-2024-05-27-at-7.21.05-PM.jpeg)
i
ಮಳೆ ಹಾನಿ ಪರಿಹಾರ ಶೀಘ್ರ ಪಾವತಿ: ಜಿಲ್ಲಾಧಿಕಾರಿ
ಚಂದ್ರವಳ್ಳಿ ನ್ಯೂಸ್, ತುಮಕೂರು:
ಮಳೆಯಿಂದ ಆದ ಗೃಹ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ’ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಒಂದು ವಾರದಿಂದ ಜಿಲ್ಲಾದ್ಯಂತ ಆಗಿರುವ ಮುಂಗಾರು ಮಳೆಯ ಪ್ರಮಾಣ, ಮಳೆಯಿಂದ ಆದ ಗೃಹ ಹಾನಿ, ಜಾನುವಾರುಗಳ ಸಾವು, ಕುಡಿಯುವ ನೀರು ನಿರ್ವಹಣೆ, ಬರ ನಿರ್ವಹಣೆ ಹಾಗೂ ಕಳೆದ ವಾರ ಮುಖ್ಯಮಂತ್ರಿಗಳು ನೀಡಲಾದ ಸೂಚನೆಗಳನ್ವಯ ಜಿಲ್ಲೆಯಾದ್ಯಂತ ಕೈಗೊಂಡ ಕ್ರಮಗಳು ಸೇರಿದಂತೆ ಮೊದಲಾದ ವಿ?ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.
ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಾತನಾಡಿ, ಕಳೆದ ಶನಿವಾರ ಸುರಿದ ಮಳೆಗೆ ತಾಲ್ಲೂಕಿನಾದ್ಯಂತ ೪ ಮನೆಗಳು ಹಾನಿಗೊಳಗಾಗಿದ್ದು, ಪರಿಹಾರ ಪಾವತಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಶಿರಾ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ವಾಡಿಕೆಯಂತೆ ೭೦ ಮಿ.ಮೀ. ಮಳೆಯಾಗಬೇಕಿದ್ದು, ಪ್ರಸ್ತುತದವರೆಗೂ ೧೨೦ ಮಿ.ಮೀ. ಮಳೆಯಾದ ಕಾರಣ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ ಎಂದರು. ೬೩೦ ಕ್ವಿಂಟಾಲ್ ಶೇಂಗಾ ಬೀಜ ದಾಸ್ತಾನಿದ್ದು, ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಲಾಗುತ್ತಿದೆ ಎಂದರು.
ಮಳೆಯಿಂದ ಆದ ಹಾನಿಗೆ ಸಂಬಂಧಿಸಿದ ಹಾಗೂ ಬರ ಪರಿಹಾರಗಳು ರ್ಯೆತರಿಗೆ ಪಾವತಿಯಾಗಿರುವ ಬಗ್ಗೆ ಅಧಿಕಾರಿಗಳು ಖಚಿತಪಡಿಸಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪಿಎಂ ಕುಸುಮ್ ಯೋಜನೆಗಾಗಿ ೭೦ ಎಕರೆ ಭೂಮಿ ಸರ್ವೇ ಮಾಡಿ ವರದಿ ಕಳುಹಿಸುವಂತೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಅವರಿಗೆ ಸೂಚಿಸಿದರು.
ಸಮಗ್ರ ಆರೋಗ್ಯ ವರದಿಗೆ ಸೂಚನೆ : ಪ್ರಾಥಮಿಕ ಆರೋಗ್ಯ ಕೇಂದ್ರಗಳು ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಆಗುವಂತಹ ಹೆರಿಗೆಗಳು, ಮಕ್ಕಳ ಚಿಕಿತ್ಸೆಗಳು, ರೋಗಿಗಳ ವಿವರಗಳು, ಸಾವು, ಸಾಂಕ್ರಾಮಿಕ ರೋಗಗಳ ಕುರಿತ ನಿಖರವಾದ ವರದಿಯನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ: ಮಂಜುನಾಥ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ : ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಮಾತನಾಡಿ, ದೊಡ್ಡ ಎಣ್ಣಿಗೆರೆ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಘಟಕಗಳನ್ನು ಪರಿಶೀಲಿಸಿದ್ದು, ಪ್ರಸ್ತುತ ತಾಲ್ಲೂಕಿನ ೩೮೦ ಜಲ ಮೂಲಗಳ ಕುಡಿಯುವ ನೀರನ್ನು ಪರೀಕ್ಷಿಸಿ, ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದರು. ಕೊರಟಗೆರೆ ತಾಲ್ಲೂಕು ಆರೋಗ್ಯಾಧಿಕಾರಿ ಮಾತನಾಡಿ, ತಾಲ್ಲೂಕಿನಲ್ಲಿ ೧೨೫೫ ಕುಡಿಯುವ ನೀರಿನ ಮೂಲಗಳಿದ್ದು, ಪ್ರಸ್ತುತ ೪೫೨ ಜಲಮೂಲಗಳನ್ನು ಪರೀಕ್ಷಿಸಲಾಗಿದೆ ಎಂದರು. ಮಧುಗಿರಿ ತಾಲ್ಲೂಕಿನ ೬೫೨ ಜಲಮೂಲಗಳಲ್ಲಿ ೧೭೮ ಜಲಮೂಲಗಳನ್ನು ಪರೀಕ್ಷಿಸಲಾಗಿದ್ದು, ೫೫ ಜಲಮೂಲಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ೫ ಗ್ರಾಮಗಳ ಕುಡಿಯುವ ನೀರಿನಲ್ಲಿ ಹೆಚ್ಚಿನ ಕ್ಲೋರೈಡ್ ಮತ್ತು ನೈಟ್ರೆಡ್ ಅಂಶಗಳು ಕಂಡು ಬಂದಿದೆ ಎಂದು ತಹಸೀಲ್ದಾರ್ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಮಾತನಾಡಿ, ಕುಡಿಯುವ ನೀರಿನಲ್ಲಿ ಹೆಚ್ಚಿನ ಕ್ಲೋರೈಡ್ ಮತ್ತು ನೈಟ್ರೆಡ್ ಕಂಡುಬರುವಂತಹ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಸಂಸ್ಕರಿಸಿದ ನೀರನ್ನು ಸಾರ್ವಜನಿಕರಿಗೆ ಪೂರೈಸಬೇಕು, ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಘಟಕಗಳು, ಕೊಳವೆ ಬಾವಿಗಳು, ಕೆರೆಗಳು ಸೇರಿದಂತೆ ಮೊದಲಾದ ವಿವಿಧ ಜಲಮೂಲಗಳಿಂದ ಸಂಗ್ರಹಿಸಿದ ನೀರನ್ನು ಇಂದೇ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಪಡೆದು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಜಿಲ್ಲೆಯ ಎಲ್ಲಾ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ವಿತರಣೆ ಕೇಂದ್ರಗಳಿಗೆ ಭೇಟಿ ಕಡ್ಡಾಯ: ಚಿಕ್ಕನಾಯಕನಹಳ್ಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾತನಾಡಿ, ತಾಲ್ಲೂಕಿನ ೫ ರೈತ ಸಂಪರ್ಕ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸುಸೂತ್ರವಾಗಿ ವಿತರಣೆಯಾಗುತ್ತಿರುವ ಬಗ್ಗೆ ಪರಿಶೀಲಿಸಲಾಗಿದೆ. ತಾಲ್ಲೂಕಿನಲ್ಲಿ ಅಲಸಂದೆ, ಶೇಂಗಾ ಬಿತ್ತನೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಎನ್. ಮಾತನಾಡಿ, ಜಿಲ್ಲೆಯಾದ್ಯಂತ ಸಮರ್ಪಕವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿತರಣೆ ನಡೆಯುತ್ತಿದೆ. ರಾಗಿ ಬಿತ್ತನೆ ಜೂನ್ ೨ನೇ ವಾರದಿಂದ ನಡೆಯಲಿದೆ ಎಂದರು. ಕೃಷಿ ಅಧಿಕಾರಿಗಳು ನಿಯಮಿತವಾಗಿ ವಿತರಣಾ ಕೆಂದ್ರಗಳಿಗೆ ಭೇಟಿ ನೀಡಬೇಕು, ಜಿಲ್ಲೆಯ ಎಲ್ಲಾ ಎಪಿಎಂಸಿಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಿರು ಸಾಲಗಳ ಬಗ್ಗೆ ಅರಿವು ಮೂಡಿಸಿ :
ಜಿಲ್ಲೆಯ ರ್ಯೆತರು ಕಿರು ಸಾಲಗಳನ್ನು ಖಾಸಗಿ ಯಾಗಿ ಪಡೆದಿರುವ ಅಂಕಿ ಅಂಶಗಳನ್ನು ಸಂಗ್ರಹಿಸಿ, ಎಲ್ಲಾ ಗ್ರಾಮಪಂಚಾಯತಿ ಮಟ್ಟದಲ್ಲಿ ರೈತ ಸಂಪರ್ಕ ಸಭೆಗಳನ್ನು ಏರ್ಪಡಿಸಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯಗಳ ಹಾಗೂ ಯೋಜನೆಗಳ ಮಾಹಿತಿಯನ್ನು ಮುಖ್ಯವಾಗಿ ಸಾಲ ಪಡೆದಿರುವ ರ್ಯೆತರು ಸೇರಿದಂತೆ ಎಲ್ಲಾ ರ್ಯೆತರಿಗೆ ನೀಡಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಸ್ತ್ರಚಿಕಿತ್ಸಾ ಕೊಠಡಿಗಳ ಸ್ಚಚ್ಛತೆ ಪರಿಶೀಲಿಸಿ : ಡೆಂಗ್ಯೂ, ಚಿಕುಂಗುನ್ಯಾ, ಮಲೇರಿಯಾದಂತಹ ರೋಗಗಳು ಹರಡದಂತೆ ನಿಯಂತ್ರಣವಹಿಸಲು ಜಿಲ್ಲೆಯ ಎಲ್ಲಾ ಆರೋಗ್ಯಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಇರುವಂತಹ ಶಸ್ತ್ರಚಿಕಿತ್ಸೆ ಕೊಠಡಿಗಳಲ್ಲಿ ಶುದ್ಧತೆ ಕಾಯ್ದುಕೊಂಡಿರುವ ಬಗ್ಗೆ ಹಾಗೂ ಸಮರ್ಪಕ ವಿದ್ಯುತ್ ಪೂರೈಕೆ ಇರುವ ಬಗ್ಗೆ, ವಾರದಲ್ಲಿ ಎರಡು ಬಾರಿ ಎಲ್ಲಾ ತಾಲ್ಲೂಕು ಮಟ್ಟದ ತಾಲ್ಲೂಕು ಆರೋಗ್ಯಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕಳೆದ ವಾರ ಮಧುಗಿರಿ ತಾಲ್ಲೂಕಿನ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆ ಆವರಣದಲ್ಲಿ ಕಸದ ರಾಶಿ ಕಂಡು ಬಂದಿದ್ದು, ಇಂತಹ ಘಟನೆಗಳು ಮರು ಕಳಿಸದಂತೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಆವರಣದಲ್ಲಿ ಸ್ವಚ್ಛತೆಗೆ ಹೆಚ್ಚು ಗಮನ ನೀಡಬೇಕೆಂದು ಸೂಚಿಸಿದರು.
ಶಿಥಿಲಾವಸ್ಥೆ ಶಾಲೆಗಳನ್ನು ಗುರುತಿಸಿ: ಮೇ ೨೯ರಿಂದ ಶಾಲೆಗಳು ಪುನರಾರಂಭಗೊಳ್ಳಲಿದ್ದು, ಮಕ್ಕಳು ಶಾಲೆಗಳಿಗೆ ಕಲಿಯುವ ಉದ್ದೇಶದಿಂದ ಬರುತ್ತಾರೆ. ಮಕ್ಕಳಿಗೆ ಅಗತ್ಯ ಸೌಕರ್ಯ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳ ಸಮೀಕ್ಷೆಯನ್ನು ತಾಲ್ಲೂಕು ಬಿಇಓಗಳು ಹಾಗೂ ಪಿಆರ್ಇಡಿ ಕಾರ್ಯನಿರ್ವಾಹಣಾಧಿಕಾರಿಗಳು ಜಂಟಿಯಾಗಿ ಕೈಗೊಂಡು ಶಾಲೆಗಳ ಗೋಡೆ ಹಾಗೂ ಮೇಲ್ಛಾವಣಿ ಶಿಥಿಲಾವಸ್ಥೆ, ದುರಸ್ತಿ, ಅಡಿಗೆ ಕೋಣೆ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಬಗ್ಗೆ ಖಚಿತಪಡಿಸಿಕೊಂಡು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮಾತನಾಡಿ, ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧಿಸಿದಂತೆ ಯಾವುದೇ ಬಿಲ್ಲುಗಳನ್ನು ಬಾಕಿಯಿಟ್ಟುಕೊಳ್ಳದೆ, ತ್ವರಿತ ಪಾವತಿಗೆ ಕ್ರಮ ಕ್ಯೆಗೊಳ್ಳುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಪಿಆರ್ಇಡಿ ಕಾರ್ಯಪಾಲಕ ಅಭಿಯಂತರ ತಿಮ್ಮರಾಯಪ್ಪ, ಉಪವಿಭಾಗಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.