i
ಜೆಡಿಎಸ್ ಅಭ್ಯರ್ಥಿಗೆ ಭರ್ಜರಿ ಸ್ವಾಗತ ಕೋರಿದ ಜನತೆ…
ಚಂದ್ರವಳ್ಳಿ ನ್ಯೂಸ್, ಹೊಸದುರ್ಗ:
ಹೊಸದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಎಂ. ತಿಪ್ಪೇಸ್ವಾಮಿ ಘೋಷಣೆಯಾದ ನಂತರ ಮೊದಲ ಬಾರಿಗೆ ಹೊಸದುರ್ಗಕ್ಕೆ ಆಗಮಿಸಿದ್ದ ಅವರನ್ನು ಪಕ್ಷದ ಕಾರ್ಯಕರ್ತರು ಹಾರ ತೂರಾಯಿಗಳ ಹಾಕಿ ಅದ್ಧೂರಿಯಾಗಿ ಸ್ವಾಗತ ಕೋರಿ ಬರಮಾಡಿಕೊಂಡರು.
ಹೊಸದುರ್ಗ ಪಟ್ಟಣದ ಟಿಬಿ ವೃತ್ತದಲ್ಲಿ ತಾಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮುಖಂಡರು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಎಚ್.ಡಿ. ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿ ಎಂ. ತಿಪ್ಪೇಸ್ವಾಮಿ ಅವರಿಗೆ ಜೈಕಾರ ಹಾಕಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ತಿಪ್ಪೇಸ್ವಾಮಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಿಗಿಂತಲೂ ನಮ್ಮ ರಾಜ್ಯಕ್ಕೆ ಪ್ರಾದೇಶಿಕ ಪಕ್ಷ ಅನಿವಾರ್ಯವಾಗಿದೆ. ಎಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಎರಡು ತಿಂಗಳಿಂದ ಪಕ್ಷ ಸಂಘಟನೆ ಮಾಡಿರುವೆ. ಇವತ್ತಿನಿಂದ ಮತ್ತಷ್ಟು ಚುರುಕಾಗಿ ಪಕ್ಷದ ಸಂಘಟನೆ ಮಾಡುತ್ತೇವೆ. ನಾನು ಉದ್ಯಮಿಯಾಗಿ 2 ಸಾವಿರಕ್ಕೂ ಹೆಚ್ಚಿನ ಜನರಿಗೆ ಉದ್ಯೋಗ ನೀಡಿರುವೆ. ಹೊಸದುರ್ಗ ಕ್ಷೇತ್ರದ ನಿರುದ್ಯೋಗಿ ಜನರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತನಾಗುತ್ತೇನೆ ಎಂದು ಹೇಳಿದರು.
ಈ ರಾಜ್ಯ ಅಥವಾ ದೇಶದಲ್ಲಿ ರೈತ ಪರವಾದ ಸರ್ಕಾರ ಮಾಡಿದ್ದರೆ ಅದು ಕುಮಾರಸ್ವಾಮಿ ಮಾತ್ರ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರೈತ ಪರ ಆಡಳಿತ ನೀಡಿದ್ದಾರೆ. ತೆಂಗು ತಾಲೂಕಿನ ಪ್ರಮುಖ ಬೆಳೆ. ಕೊಬ್ಬರಿ ಮತ್ತು ಅಡಕೆಗೆ ಸೂಕ್ತವಾದ ಬೆಂಬಲ ಬೆಲೆ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾನು ಸಹ ರೈತರ ಪರವಾಗಿ ಇರುತ್ತೇನೆ. ಈ ತಾಲೂಕಿನ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ. ತಾಲೂಕಿನ ಜನ ನನಗೆ ಆಶೀರ್ವಾದಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಜಿ. ಗಣೇಶಮೂರ್ತಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳ ಧೋರಣೆಯಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ತಾಲೂಕಿನ 15 ಸಾವಿರ ರೈತ ಕುಟುಂಬಗಳ ಸಾಲಮನ್ನಾ ಮಾಡಿದ್ದಾರೆ. ಆ ರೈತ ಕುಟುಂಬಗಳನ್ನು ನೇರವಾಗಿ ಭೇಟಿ ಮಾಡಿ ಜೆಡಿಎಸ್ಗೆ ಮತ ನೀಡುವಂತೆ ಮನವಿ ಮಾಡಲಿದ್ದೇವೆ. ನಮಗೆ ಬೇಕಿರುವುದು ರೈತ ಪರವಾದ ಸರ್ಕಾರ, ಯಾವುದೇ ಜಾತಿ, ಧರ್ಮಾಧರಿತ ಆಡಳಿತ ಬೇಕಿಲ್ಲ. ಇಂದು ರೈತರು ಅತ್ಯಂತ ಸಂಕಷ್ಟ ಎದುರಿಸುತ್ತಿದ್ದಾರೆ. ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅರಿತು ಬಗೆಹರಿಸುವ ಪ್ರಯತ್ನ ಮಾಡಲಾಗುವುದು. ಅಭ್ಯರ್ಥಿ ಎಂ.ತಿಪ್ಪೇಸ್ವಾಮಿ ಅವರಿಗೆ ತಾಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಸಾಥ್ ನೀಡಲಿದ್ದೇವೆ. ಈ ಬಾರಿ ಹೊಸದುರ್ಗದಲ್ಲಿ ಜೆಡಿಎಸ್ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿದರು. ಬಾ. ಮೈಲಾರಪ್ಪ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.