i
ಲಿಂಗಾಯತರಿಗೆ ಅವಹೇಳನ ಮಾಡಿರುವ ರಘು ಆಚಾರ್ ಕ್ಷಮೆ ಕೋರಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆಡಿಯೋ ಒಂದರಲ್ಲಿ ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಕೂಡಲೇ ಬಹಿರಂಗ ಕ್ಷಮೆ ಕೋರಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಮಹೇಶ್ ಆಗ್ರಹಿಸಿದರು.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಒಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರಘು ಆಚಾರ್ ಅವರನ್ನು ಕೂಡಲೇ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಒತ್ತಾಯಿಸಿದರು.
ರಘು ಆಚಾರ್ ಉನ್ನತ ಸ್ಥಾನದಲ್ಲಿದ್ದು ಒಂದು ಸಮಾಜದ ಬಗ್ಗೆ ಹೀನಾಯವಾಗಿ ಮಾತನಾಡಿರುವುದು ಸರಿಯಲ್ಲ, ಈ ಹಿಂದೆ ಕೂಡಾ ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದರು. ಆದರೆ ಎರಡು ಚುನಾವಣೆಯಲ್ಲಿ ಧರ್ಮ, ಜಾತಿ ನೋಡದೇ ನಾವೆಲ್ಲ ಮತ ನೀಡಿ ಗೆಲ್ಲಿಸಿದ್ದೇವೆ ಎಂದು ತಿಳಿಸಿದರು. ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ ಮಾತನಾಡಿ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್ ಲಿಂಗಾಯಿತ ಸಮಾಜದ ಬಹಿರಂಗ ಕ್ಷಮೆ ಕೋರದಿದ್ದರೆ ರಾಜ್ಯಾಧ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಅವರ ಮಾತಿನಿಂದ ಸಮಾಜ ತಲೆ ತಗ್ಗಿಸುವಂತಾಗಿದೆ. ಅಷ್ಟೇ ಅಲ್ಲ ಸಮಾಜಕ್ಕೆ ಧಕ್ಕೆಯಾಗಿದೆ. ಬೇರೆ ಬೇರೆ ಸಮಾಜದ ಬಗ್ಗೆ ಉಡಾಫೆ ಮಾತುಗಳನ್ನಾಡುತ್ತಿರುವ ರಘು ಆಚಾರ್ ವರ್ತನೆ ಅತ್ಯಂತ ಖಂಡನೀಯ ಎಂದು ಬೇಸರ ವ್ಯಕ್ತ ಪಡಿಸಿದರು.
ರಘು ಆಚಾರ್ ಮಾತನಾಡಿರುವ ಆಡಿಯೋ ಕುರಿತು ಸಮಗ್ರ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದರು.
ಸಮಾಜದ ಮುಖಂಡರಾದ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಕಾರ್ತಿಕ್, ಬಸವರಾಜಯ್ಯ, ರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.