i
ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್.ವೈ. ಗೋಪಾಲಕೃಷ್ಣ ಅವರು ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಗೋಪಾಲಕೃಷ್ಣ ಅವರನ್ನು ಸ್ವಾಗತಿಸಿದರು. ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈಗಾಗಲೇ ಬಿಜೆಪಿ ಪಕ್ಷದ ಹಾಲಿ ಶಾಸಕರುಗಳು, ಮಾಜಿ ಶಾಸಕರುಗಳು ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈಗಾಗಲೇ ಪುಟ್ಟಣ್ಣ, ಬಾಬುರಾವ್ ಚಿಂಚನಸೂರು, ಎನ್.ವೈ. ಗೋಪಾಲಕೃಷ್ಣ ಅವರು ತಮ್ಮ ಅಧಿಕಾರ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಸದ್ಯದಲ್ಲೇ ಶಿವಲಿಂಗೇಗೌಡ ಅವರು ಸೇರ್ಪಡೆಯಾಗಲಿದ್ದಾರೆ. ಬೀದರ್ನಿಂದ ಚಾಮರಾಜನಗರದವರೆಗೂ ಅನೇಕ ಮಾಜಿ ಹಾಗೂ ಹಾಲಿ ಶಾಸಕರು ಪಕ್ಷ ಸೇರುತ್ತಿದ್ದಾರೆ. ಈ ಬಗ್ಗೆ ನಾನು ಹಾಗೂ ಸಿದ್ದರಾಮಯ್ಯ ಅವರು ಚರ್ಚೆ ಮಾಡಿ ಸೂಕ್ಷ್ಮವಾಗಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಕಾಂಗ್ರೆಸ್ ಗೆಲುವಿನತ್ತ ದಾಪುಗಾಲು ಇಟ್ಟಿದೆ ಎಂದು ಹೇಳಿದರು.
ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದಾಗ ನೀವು ಈಗಾಗಲೇ ಶಾಸಕರಾಗಿದ್ದು ಕಾಂಗ್ರೆಸ್ ಸೇರುತ್ತಿರುವುದೇಕೆ? ಎಂದು ನಾನು ಕೇಳಿದೆ. ಅದಕ್ಕೆ ಅವರು ನಾನು ಬಿಜೆಪಿಯನ್ನು ನೋಡಿದ್ದೇನೆ. ನಾನು ಸಾಯುವ ಮುನ್ನ ಕಾಂಗ್ರೆಸ್ಸಿಗನಾಗಿ ಸಾಯಬೇಕು. ಅದಕ್ಕಾಗಿ ನಾನು ಕಾಂಗ್ರೆಸ್ ಸೇರಲು ಬಯಸುತ್ತೇನೆ ಎಂದರು.
ನಂತರ ಮಾತನಾಡಿದ ಎನ್.ವೈ. ಗೋಪಾಲಕೃಷ್ಣ, ನಾನು ಬಿಜೆಪಿಗೆ ಹೋಗಿದ್ದ ಸಂದರ್ಭ ಪರಿಸ್ಥಿತಿ ಬೇರೆ ಇತ್ತು. ನಾನು ಹುಡುಗಾಟಕ್ಕೆ ಅಂತಹ ನಿರ್ಧಾರ ಕೈಗೊಂಡಿದ್ದೆ. ಇದೀಗ ಕಾಂಗ್ರೆಸ್ಗೆ ವಾಪಸಾಗಿ ಗೌರವ ಪಡೆದಿದ್ದೇನೆ. ನನಗೆ ಆಶೀರ್ವಾದ ಮಾಡಿದರೆ ಚಿತ್ರದುರ್ಗ ಜಿಲ್ಲೆ ಜತೆ ಬಳ್ಳಾರಿ ಜಿಲ್ಲೆಯಲ್ಲೂ ಓಡಾಡಿ ಕೆಲಸ ಮಾಡುತ್ತೇನೆ. ಕೂಡ್ಲಿಗಿ ಕ್ಷೇತ್ರದ ಕಾರ್ಯಕರ್ತರಿಗೂ ಕಾಂಗ್ರೆಸ್ ಗೆಲ್ಲಿಸುವಂತೆ ಕರೆ ನೀಡುತ್ತೇನೆ ಎಂದು ಹೇಳಿದರು. ಈ ವೇಳೆ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಹಾಜರಿದ್ದರು.