ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸುಮಾರು 300ಕ್ಕೂ ಹೆಚ್ಚು ವಿಶೇಷಚೇತನ ಫಲಾನುಭವಿಗಳಿಗೆ ಒಟ್ಟು 50 ಲಕ್ಷ ರೂಪಾಯಿ ಮೌಲ್ಯದ ಸಹಾಯಕ ಸಲಕರಣೆಗಳನ್ನು ವಿತರಿಸಿದರು.
ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಭಾರತದ ಕೃತಕ ಅಂಗಗಳ ಉತ್ಪಾದನಾ ನಿಗಮ ಜಂಟಿಯಾಗಿ ತಮ್ಮ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಈ ಉಚಿತ ಉಪಕರಣ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದವು.
ಸಾಧನಗಳನ್ನು ವಿತರಿಸಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, "ನಮ್ಮ ವಿಶೇಷಚೇತನ ಸಹೋದರ-ಸಹೋದರಿಯರಿಗೆ ನೆರವಾಗುವ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಲಕರಣೆಗಳನ್ನು ವಿತರಿಸಿರುವುದು ನನಗೆ ಲಭಿಸಿದ ಮಹಾಭಾಗ್ಯ. ಇಂತಹ ಸಾರ್ಥಕ ಹಾಗೂ ಸೇವಾ ಮನೋಭಾವದ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು" ಎಂದು ಹೇಳಿದರು.
ವಿಶೇಷಚೇತನರ ಸಬಲೀಕರಣ ಹಾಗೂ ದಿನನಿತ್ಯದ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮಗಳು ಕೇವಲ ಉದ್ದಿಮೆಗೆ ಸೀಮಿತವಾಗದೆ, ಇಂತಹ ಸಾಮಾಜಿಕ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.




