ಚಂದ್ರವಳ್ಳಿ ನ್ಯೂಸ್ ಬೆಂಗಳೂರು:
ಯುವಜನತೆ ಮತ್ತು ವಿದ್ಯಾರ್ಥಿಗಳ ಹಿತರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕೃಷಿ ಅಧಿಕಾರಿಗಳ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 4 ರಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ತಮ್ಮ ಅಳಲನ್ನು ತೋಡಿಕೊಂಡಿದ್ದರು. ವಿದ್ಯಾರ್ಥಿಗಳ ಆತಂಕ ಮತ್ತು ನೋವಿಗೆ ತಕ್ಷಣವೇ ಸ್ಪಂದಿಸಿದ ಸರ್ಕಾರ, ಕೃಷಿ ಪದವೀಧರರಿಗೆ ಅನ್ಯಾಯವಾಗದಂತೆ ಈ ಮುಖ್ಯ ನಿರ್ಧಾರವನ್ನು ತೆಗೆದುಕೊಂಡಿದೆ.
ಹಿಂದಿನ ಸರ್ಕಾರದ ತಪ್ಪಿನಿಂದ ಅತಂತ್ರ:
ಹಿಂದಿನ ಬಿಜೆಪಿ ಸರ್ಕಾರದ ಅವೈಜ್ಞಾನಿಕ ತೀರ್ಮಾನಗಳು ಹಾಗೂ ದೋಷಪೂರಿತ ನಿಯಮಗಳ ತಿದ್ದುಪಡಿಯಿಂದಾಗಿ ರಾಜ್ಯದ ಕೃಷಿ ಪದವೀಧರರ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಈ ಹಿಂದೆ ನಡೆದ ತಪ್ಪನ್ನು ಶೀಘ್ರವೇ ಸರಿಪಡಿಸಲು ಸೂಕ್ತ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ಅಭಯ:
"ನಮ್ಮದು ಯುವಜನರ ಧ್ವನಿಗೆ ಮಿಡಿಯುವ ಸರ್ಕಾರ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗಲಿದೆ. ಅವರ ಕನಸುಗಳನ್ನು ನನಸಾಗಿಸುವುದು ಹಾಗೂ ಉಜ್ವಲ ಭವಿಷ್ಯವನ್ನು ಕಟ್ಟುವುದು ನಮ್ಮ ಸರ್ಕಾರದ ಜವಾಬ್ದಾರಿ. ಕೃಷಿ ಪದವೀಧರರಿಗೆ ಯಾವುದೇ ಕಾರಣಕ್ಕೂ ಕಿಂಚಿತ್ತೂ ಅನ್ಯಾಯವಾಗದಂತೆ ಪರೀಕ್ಷೆ ನಡೆಸಲು ದೃಢಸಂಕಲ್ಪ ಮಾಡಿದ್ದೇವೆ" ಎಂದು ಅವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.



