ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅರ್ಹ ರೈತ, ರೈತ ಮಹಿಳೆ ಮತ್ತು ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಅಕ್ಟೋಬರ್ 15 ರಿಂದ 18 ರವರೆಗೆ ಜಿಕೆವಿಕೆ ಆವರಣದಲ್ಲಿ “ವೈವಿಧ್ಯಮಯ ಕೃಷಿ: ಮುಂದಿನ ಪೀಳಿಗೆಗೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 'ಕೃಷಿಮೇಳ-2026' ರ ಸಂದರ್ಭದಲ್ಲಿ ಈ ಗೌರವಾನ್ವಿತ ಪ್ರಶಸ್ತಿಗಳನ್ನು ವಿತರಿಸಲಾಗುವುದು.
ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ):
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ.
ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃಷಿ ವಿಶ್ವವಿದ್ಯಾಲಯ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 06 ಜಿಲ್ಲೆಗಳು):
ಕೆನರಾ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳು, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ.
ಜಿಲ್ಲಾ ಮಟ್ಟದ ಪ್ರಶಸ್ತಿಗಳು (06 ಜಿಲ್ಲೆಗಳು): ಜಿಲ್ಲಾ ಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳು.
ತಾಲ್ಲೂಕು ಮಟ್ಟದ ಪ್ರಶಸ್ತಿಗಳು (35 ತಾಲ್ಲೂಕುಗಳು): ತಾಲ್ಲೂಕು ಮಟ್ಟದ ಯುವ ರೈತ ಮತ್ತು ಯುವ ರೈತ ಮಹಿಳೆ ಪ್ರಶಸ್ತಿಗಳನ್ನು ನೀಡಲಾಗುವುದು.
ನಿಗದಿತ ಅರ್ಜಿ ನಮೂನೆಗಳು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಬೆಂಗಳೂರಿನ ಜಿಕೆವಿಕೆ ವಿಸ್ತರಣಾ ನಿರ್ದೇಶಕರ ಕಚೇರಿ ಹಾಗೂ ಹದೋನಹಳ್ಳಿ (ದೊಡ್ಡಬಳ್ಳಾಪುರ), ಚಂದೂರಾಯನಹಳ್ಳಿ (ಮಾಗಡಿ), ಕೋನೇಹಳ್ಳಿ (ತಿಪಟೂರು) ಮತ್ತು ಕುರುಬೂರು ಫಾರಂ (ಚಿಂತಾಮಣಿ) ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಲಭ್ಯವಿರುತ್ತವೆ ಹಾಗೂ ವಿಶ್ವವಿದ್ಯಾಲಯದ ವೆಬ್ಸೈಟ್ www.uasbangalore.edu.in ನಲ್ಲೂ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 2026 ರ ಜುಲೈ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳಿಗಾಗಿ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065 ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 080-23330153 (ವಿಸ್ತರಣೆ: 401) ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



