ಚಂದ್ರವಳ್ಳಿ ನ್ಯೂಸ್, ವಿಜಯನಗರ
ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಕನಕದಾಸ ವೃತ್ತದ ಸಮೀಪ ಬೋಡಾ ರಂಗಪ್ಪ ಅವರ ಮನೆಯ ಬಳಿಯಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ತಡರಾತ್ರಿ ನಡೆದಿದೆ.
ನಾಲ್ವರು ದುಷ್ಕರ್ಮಿಗಳ ತಂಡ ಎಟಿಎಂ ಕೇಂದ್ರಕ್ಕೆ ನುಗ್ಗಿ ಮೊದಲು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ಮೇಲೆ ಸ್ಪ್ರೇ ಸಿಂಪಡಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದೆ. ಬಳಿಕ ಎಟಿಎಂ ಯಂತ್ರವನ್ನು ಒಡೆದು ಹಣ ದೋಚಲು ಪ್ರಯತ್ನಿಸಿದ ವೇಳೆ ಭದ್ರತಾ ವ್ಯವಸ್ಥೆಯ ಸೈರನ್ ಅಲರ್ಟ್ ಸಕ್ರಿಯಗೊಂಡಿದೆ.
ಸೈರನ್ ಮೊಳಗುತ್ತಿದ್ದಂತೆ ಮಾಹಿತಿ ವಿಜಯನಗರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ರವಾನೆಯಾಗಿದೆ. ತಕ್ಷಣವೇ ಕಂಟ್ರೋಲ್ ರೂಂ ಸಿಬ್ಬಂದಿ ನೈಟ್ ಬೀಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಇತರ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಈ ಸಂಬಂಧ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.



