ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ದೇವರಕೊಟ್ಟದ ಏಕಲವ್ಯ ಮಾದರಿ ವಸತಿ ಶಾಲೆಗೆ ಶುಕ್ರವಾರ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲಸೌಕರ್ಯ ಪರಿಶೀಲಿಸಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸುವ ಮೂಲಕ ಉತ್ತಮ ಫಲಿತಾಂಶ ದಾಖಲಿಸಲು ವಿಶೇಷ ಗಮನ ಹರಿಸಬೇಕು. ಶಾಲಾ ಆವರಣದಲ್ಲಿ ಸ್ವಚ್ಛತೆ ಹಾಗೂ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಡ್ಡಾಯವಾಗಿ ಶಾಲಾ ವಸತಿ ಗೃಹಗಳಲ್ಲಿಯೇ ವಾಸ್ತವ್ಯ ಹೂಡಬೇಕು. ಶಾಲೆಯ ಆವರಣದಲ್ಲಿ ಏನಾದರೂ ಸಣ್ಣಪುಟ್ಟ ದುರಸ್ತಿ ಕಾಮಗಾರಿಗಳಿದ್ದರೆ, ಗಮನಕ್ಕೆ ತಂದು ಪೂರ್ವಾನುಮತಿ ಪಡೆದು ತಕ್ಷಣವೇ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಮೆನು ಚಾರ್ಟ್ ಪ್ರಕಾರವೇ ಗುಣಮಟ್ಟದ ಊಟ ಹಾಗೂ ತಿಂಡಿ ನೀಡಬೇಕು. ಕಡ್ಡಾಯವಾಗಿ ಶುದ್ಧೀಕರಿಸಿದ ಕುಡಿಯುವ ನೀರನ್ನೇ ಮಕ್ಕಳಿಗೆ ಪೂರೈಸಬೇಕು. ಎಲ್ಲ ವಿದ್ಯಾರ್ಥಿಗಳಿಗೂ ನಿಯಮಿತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ಮಕ್ಕಳ ಆರೋಗ್ಯದ ವೈಯಕ್ತಿಕ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆ ಇರುವ ಮಕ್ಕಳ ಮೇಲೆ ನಿರಂತರ ನಿಗಾ ವಹಿಸಬೇಕು ಮತ್ತು ಶಾಲಾ ನರ್ಸ್ ಈ ಬಗ್ಗೆ ನಿಯಮಿತವಾಗಿ ಫಾಲೋ-ಅಪ್ ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಪ್ರತಿ ತಿಂಗಳು ಪೋಷಕರು ಮತ್ತು ಶಿಕ್ಷಕರ ಸಭೆಯನ್ನು ಕಡ್ಡಾಯವಾಗಿ ಆಯೋಜಿಸಬೇಕು. ಸಭೆಯಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಶಾಲೆಯು ವಿಶಾಲವಾದ 36 ಎಕರೆ ಪ್ರದೇಶದಲ್ಲಿದ್ದು, ಆವರಣದಲ್ಲಿ ಬೆಳೆದಿರುವ ಅನಗತ್ಯ ಗಿಡಗಂಟಿಗಳು ಹಾಗೂ ಹುಲ್ಲನ್ನು ತಕ್ಷಣವೇ ತೆರವುಗೊಳಿಸಿ ಆಟದ ಮೈದಾನ ಹಾಗೂ ಶಾಲಾ ಆವರಣವನ್ನು ಸದಾ ಸುಸ್ಥಿತಿಯಲ್ಲಿಡಬೇಕು ಎಂದು ನಿರ್ದೇಶನ ನೀಡಿದರು.
ದೇವರಕೊಟ್ಟದ ಏಕಲವ್ಯ ಮಾದರಿ ವಸತಿ ಶಾಲೆಯು ಸಿಬಿಎಸ್ಇ ಪಠ್ಯಕ್ರಮ ಹೊಂದಿದ್ದು, 6 ನೇ ತರಗತಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣದ ಹಿನ್ನೆಲೆಯಲ್ಲಿ ಈ ಶಾಲೆಗೆ ಭಾರಿ ಬೇಡಿಕೆಯಿದ್ದು, ಮೊದಲ ಸುತ್ತಿನಲ್ಲೇ 6 ನೇ ತರಗತಿಯ ಎಲ್ಲ ಸೀಟುಗಳು ಭರ್ತಿಯಾಗಿವೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ಧನರಾಮ್ ಚೌಧರಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಹರೀಶ್ ಸೇರಿದಂತೆ ಮತ್ತಿತರರು ಇದ್ದರು.
ಎಸ್ಐಆರ್ ಪ್ರಗತಿ ಪರಿಶೀಲನೆ: ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ-2026ರ (ಎಸ್ಐಆರ್) ಸಂಬಂಧ ಜಿಲ್ಲೆಯ ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕು ಕಚೇರಿ ಹಾಗೂ ವಿವಿಧೆಡೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ತಹಶೀಲ್ದಾರ್ ವಿಜಯಕುಮಾರ್, ಹೊಸದುರ್ಗ ತಹಶೀಲ್ದಾರ್ ತಿರುಪತಿ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.



