Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ- ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ  ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಯಾವುದೇ ಗ್ರಾಮ ಅಥವಾ ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ, ಪತ್ರಿಕೆ, ಮಾಧ್ಯಮಗಳಲ್ಲಿ ವರದಿ ಬರುವವರೆಗೂ ಕಾಯದೆ ತಕ್ಷಣವೇ ಸ್ಪಂದಿಸಬೇಕು. ಖಾಸಗಿ ಬೋರ್‍ವೆಲ್‍ಗಳಿಂದ ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸುವಾಗ ಕಡ್ಡಾಯವಾಗಿ ನೀರಿನ ಗುಣಮಟ್ಟದ ವರದಿ ಪಡೆದುಕೊಳ್ಳಬೇಕು. ನೀರಿನ ಮೂಲ ಮತ್ತು ವಿತರಣಾ ಕೇಂದ್ರಗಳೆರಡರಲ್ಲೂ ನೀರಿನ ಮಾದರಿಯ ಪರೀಕ್ಷೆ ನಡೆಸಬೇಕು.  ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ನೀರಿನ ಟ್ಯಾಂಕರ್‍ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಶುದ್ಧ ನೀರು ಪೂರೈಸಬೇಕು. ಬೇಸಿಗೆಯಲ್ಲಿ ಹಾಸ್ಟೆಲ್ ಮತ್ತು ಕಾಲೇಜುಗಳಲ್ಲಿ ನೀರಿನ ಅಭಾವ ಉಂಟಾಗದಂತೆ ವಿಶೇಷ ನಿಗಾ ವಹಿಸಬೇಕು. ಹದಿನೈದು ದಿನಗಳ ಅವಧಿಗೆ ಒಂದು ಸುತ್ತಿನಂತೆ ಮುಂಬರುವ ಬೇಸಿಗೆ ತಿಂಗಳುಗಳಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾಗಬಹುದಾದ ಹಳ್ಳಿ ಹಾಗೂ ಪ್ರದೇಶಗಳನ್ನು ಗುರುತಿಸಿ, ನಿಗದಿತ ನಮೂನೆಯಲ್ಲಿ ಪ್ರತಿ ವಾರವೂ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಮುಲಾಜು ಇಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟ.ವೆಂಕಟೇಶ್ ಎಚ್ಚರಿಸಿದರು.

ಚರಂಡಿ ಸ್ವಚ್ಛತೆಗೆ ಸೂಚನೆ:
ನಗರ
, ಪಟ್ಟಣ ಪ್ರದೇಶಗಳಲ್ಲಿ ಚರಂಡಿಗಳು ಬ್ಲಾಕ್ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿವೆ. ತಕ್ಷಣವೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿ ವಾರ ಇದರ ಮೇಲ್ವಿಚಾರಣೆ ನಡೆಸಬೇಕು. ಮುಂಬರುವ ನಾಯಕನಹಟ್ಟಿ ಜಾತ್ರೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ, ಕುಡಿಯುವ ನೀರಿನ ಪೂರೈಕೆಗೆ ಯಾವುದೇ ವ್ಯತ್ಯಯವಾಗದಂತೆ ಹೆಚ್ಚುವರಿ ಬೋರ್‍ವೆಲ್‍ಗಳು ಮತ್ತು ನೀರಿನ ಸರಬರಾಜು ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಈ ಸಂದರ್ಭದಲ್ಲಿ ಸೂಚಿಸಿದರು.

ವೈಜ್ಞಾನಿಕ ಕ್ರಿಯಾ ಯೋಜನೆ ತಯಾರಿಕೆಗೆ ನಿರ್ದೇಶನ:
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ತಹಶೀಲ್ದಾರ್
, ತಾ.ಪಂ. ಇಒ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರ್‍ಗಳು ಜಂಟಿಯಾಗಿ ಸಮೀಕ್ಷೆ ನಡೆಸಿ, ವೈಜ್ಞಾನಿಕ ವರದಿ ಸಲ್ಲಿಸುವಂತೆ ಜಿ.ಪಂ. ಸಿಇಓ ಡಾ.ಆಕಾಶ್ ಸಭೆಯಲ್ಲಿ ನಿರ್ದೇಶನ ನೀಡಿದರು.

ಮುಂದಿನ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಗ್ರಾಮಗಳಲ್ಲಿ ಉಂಟಾಗಬಹುದಾದ ನೀರಿನ ಅಭಾವವನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಅತಿ ಹೆಚ್ಚು ನೀರಿನ ಸಮಸ್ಯೆ ಎದುರಿಸಬಹುದಾದ ಗ್ರಾಮಗಳನ್ನು ಗುರುತಿಸಿ, ಅಲ್ಲಿನ ಜನಸಂಖ್ಯೆ ಮತ್ತು ಲಭ್ಯವಿರುವ ಬೋರ್‍ವೆಲ್‍ಗಳ ಸ್ಥಿತಿಗತಿ ಬಗ್ಗೆ ತಕ್ಷಣವೇ ವರದಿ ನೀಡಬೇಕು.

 ನೀರಿನ ಕೊರತೆಯಿರುವ ಕಡೆ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆಗೆ ಪಡೆಯುವುದು, ಹೊಸ ಬೋರ್‍ವೆಲ್ ಕೊರೆಯುವುದು ಅಥವಾ ನೆರೆಯ ಗ್ರಾಮಗಳಿಂದ ಪೈಪ್‍ಲೈನ್ ಮೂಲಕ ನೀರು ಪೂರೈಸುವ

ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು. 2023, 2024 ಮತ್ತು 2025ನೇ ಸಾಲಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾದ ಗ್ರಾಮಗಳ ಮಾಹಿತಿ, ಹೊಸ ಬೋರ್‍ವೆಲ್‍ಗಳ ಸಂಖ್ಯೆ ಮತ್ತು ಖಾಸಗಿ ಬೋರ್‍ವೆಲ್ ಬಾಡಿಗೆಗೆ ಪಡೆದ ವಿವರಗಳನ್ನು ಹೋಲಿಕೆ ಮಾಡಿ ಅಧಿಕಾರಿಗಳು ವರದಿ ಸಿದ್ಧಪಡಿಸಿ, ಶುಕ್ರವಾರದ ಒಳಗೆ ವರದಿ ನೀಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳಲ್ಲೇ ಅತ್ಯಂತ ಜಾಗರೂಕತೆಯಿಂದ ಮತ್ತು ವೈಜ್ಞಾನಿಕವಾಗಿ ಕುಡಿಯುವ ನೀರಿನ ನಿರ್ವಹಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಸಿಇಓ ಡಾ.ಆಕಾಶ್ ಹೇಳಿದರು. 

ಹೆಚ್ಚುವರಿ ಕಡಲೆ ಖರೀದಿ ಕೇಂದ್ರಗಳ ಸ್ಥಾಪನೆ:
ಜಿಲ್ಲೆಯಲ್ಲಿ ಈ ಬಾರಿ ಕಡಲೆ ಬೆಳೆ ಇಳುವರಿ ಉತ್ತಮವಾಗಿದ್ದು
, ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ಅನುಕೂಲವಾಗುವಂತೆ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 37,000 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದೆ. ಸುಮಾರು 40 ಸಾವಿರ ಟನ್ ಕಡಲೆ ಇಳುವರಿ ನಿರೀಕ್ಷಿಸಲಾಗಿದೆ. ರಾಜ್ಯಾದ್ಯಂತ ಬೆಂಬಲ ಯೋಜನೆಯಡಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅನುಮತಿ ನೀಡಲಾಗಿದೆ. ಕಡಲೆ ಖರೀದಿಗೆ ಜಿಲ್ಲೆಗೆ ಯಾವುದೇ ಗುರಿ ನಿಗದಿ ಮಾಡಿಲ್ಲ. ಆದಾಗ್ಯೂ ಹೆಚ್ಚುವರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ವಹಿಸುವುದಾಗಿ ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾಂತರಾಜ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!