ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಅರಣ್ಯ ಇಲಾಖೆಯ ಹೆಚ್ಚಿನ ಸಿಬ್ಬಂದಿ ಪರವಾನಗಿ ಇಲ್ಲದ ಬಂದೂಕುಗಳಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ 'ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ'ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಕಾನೂನು ಪ್ರಕರಣ ದಾಖಲಿಸುವುದಿಲ್ಲ ಎಂದರು. ತಮ್ಮ ಹಾಗೂ ಪ್ರಾಣಿಗಳ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳುವವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು ಎಂದು ಸಲಹೆ ನೀಡಿದರು.
ಅರಣ್ಯ ಸಿಬ್ಬಂದಿ ಭತ್ಯೆ ಹಾಗೂ ವನ್ಯಜೀವಿ ಸಂಘರ್ಷ:
ದೇಶದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ಕಾಪಾಡುವ ಅರಣ್ಯ ಇಲಾಖೆ ಸಿಬ್ಬಂದಿಗಳು ಹಲವು ಸವಾಲುಗಳನ್ನು ಎದುರಿಸುತ್ತಿದ್ದಾರೆ. ವನ್ಯಜೀವಿಗಳ ಜತೆಗಿನ ಸಂಘರ್ಷದಲ್ಲಿ ಅನೇಕ ಸಿಬ್ಬಂದಿ ಪ್ರಾಣತ್ಯಾಗ ಮಾಡಿದ್ದಾರೆ. ಸಿಬ್ಬಂದಿಗಳ ಭತ್ಯೆ ಹೆಚ್ಚಿಸುವ ಕುರಿತು ಸಚಿವರ ಮನವಿಯನ್ನು ಪರಿಶೀಲಿಸಲಾಗಿದ್ದು, ಆರ್ಥಿಕ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅರಣ್ಯದಂಚಿನ ಜನರೊಂದಿಗೆ ಇಲಾಖೆ ಸಿಬ್ಬಂದಿ ಸ್ನೇಹದ ವಾತಾವರಣ ನಿರ್ಮಿಸಿಕೊಳ್ಳಬೇಕು. ಅರಣ್ಯ ಒತ್ತುವರಿ ಸಮಸ್ಯೆ ಇಂದು ನಿನ್ನೆಯದಲ್ಲವಾದ್ದರಿಂದ ಅದನ್ನು ಕಾನೂನು ಪ್ರಕಾರ ಬಗೆಹರಿಸೋಣ, ಸಾರ್ವಜನಿಕರ ಮೇಲೆ ಅತಿಯಾದ ಒತ್ತಡ ಹೇರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತೇಗದ ಸಿರಿ ಯೋಜನೆ: ರೈತರಿಗೆ ಹೆಚ್ಚಿನ ಲಾಭ ತಂದುಕೊಡುವ ಹಾಗೂ ಅರಣ್ಯ ಇಲಾಖೆಯ ಆದಾಯವನ್ನು ಹೆಚ್ಚಿಸುವ 'ತೇಗದ ಸಿರಿ' ಯೋಜನೆಯ ಯಶಸ್ಸಿಗಾಗಿ ಅಧಿಕಾರಿಗಳು ಶ್ರಮಿಸಬೇಕು.
ಕಸ್ತೂರಿ ರಂಗನ್ ವರದಿ: ಕಸ್ತೂರಿ ರಂಗನ್ ವರದಿಯನ್ನು ಈಗಾಗಲೇ ಮೂರ್ನಾಲ್ಕು ಬಾರಿ ವಾಪಸ್ ಕಳುಹಿಸಲಾಗಿದೆ. ನಮಗೊಂದು ನ್ಯಾಯ, ಕೇರಳಕ್ಕೆ ಮತ್ತೊಂದು ನ್ಯಾಯ ನೀಡಲಾಗಿದೆ. ಇದರ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗುವುದು.
ಟ್ರೀ ಪಾರ್ಕ್ ನಿರ್ಮಾಣ: ನಗರ ಪ್ರದೇಶಗಳಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಜಾಗಗಳಲ್ಲಿ 'ಟ್ರೀ ಪಾರ್ಕ್'ಗಳನ್ನು ನಿರ್ಮಾಣ ಮಾಡುವ ಮೂಲಕ ನಗರದ ಶ್ವಾಸಕೋಶವನ್ನು ಹಿಗ್ಗಿಸುವ ಕೆಲಸ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.




