ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸಂಯುಕ್ತ ಜನತಾದಳದ ರಾಜ್ಯಾಧ್ಯಕ್ಷ ಮಹಿಮ ಪಟೇಲ್ರವರ ಸೂಚನೆಯಂತೆ ಪಕ್ಷವನ್ನು ಸಂಘಟಿಸಿ ನೊಂದಣಿ ಮಾಡುವುದು ನಮ್ಮ ಮುಂದಿರುವ ಸವಾಲು ಎಂದು ಜೆಡಿಯು. ಪ್ರಧಾನ ಕಾರ್ಯದರ್ಶಿ ಕೆ.ಆರ್.ರಂಗನಾಥ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭೆಗೆ ನಡೆಯುವ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಚರ್ಚೆಯಾಗಿದೆ. ರೈತರ ಫಲವತ್ತಾದ ಭೂಮಿಯನ್ನು ರಾಜ್ಯ ಸರ್ಕಾರ ವಶಪಡಿಸಿಕೊಂಡು ಕೈಗಾರಿಕೆಗೆ ನೀಡುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ನಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.
ಕೆ.ವಿ.ಶಿವರಾಂ ಮಾತನಾಡಿ ಜೆಡಿಯು.ಗೆ ಅಧಿಕಾರ ವಿಕೇಂದ್ರಿಕರಣ ಮುಖ್ಯ. ಪ್ರಾಮಾಣಿಕವಾಗಿ ರಾಜಕಾರಣ ಮಾಡುವುದಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದೇವೆ. ಜೂನ್ ತಿಂಗಳ ಒಳಗೆ ಪದಾಧಿಕಾರಿಗಳನ್ನು ನೇಮಿಸಿ ವಿವಿಧ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.
ಹಿರಿಯೂರು ವಿಧಾನಸಭೆ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು. ನವೆಂಬರ್ನಲ್ಲಿ ನಡೆಯುವ ಆಗ್ನೇಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿಯೂ ಡಾ.ನಾಗರಾಜ್ ಇವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಹಣಬಲ, ತೋಳ್ಬಲ, ಜಾತಿ ಬಲಕ್ಕೆ ಮತದಾರರು ಮನ್ನಣೆ ಕೊಡಬಾರದೆಂದು ಮನವಿ ಮಾಡಿದರು.
ಶಿವರುದ್ರಸ್ವಾಮಿ ಮಾತನಾಡುತ್ತ ಲೋಕಸಭೆ ಚುನಾವಣೆಯಲ್ಲಿ ನಾನು ಶಿವಮೊಗ್ಗದಿಂದ ಸ್ಪರ್ಧಿಸಿದ್ದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ಜಾತಿಗಳಿಗೆ ರಾಜಕೀಯದಲ್ಲಿ ಮೀಸಲಾತಿ ಬೇಕು. ಕೇಂದ್ರ ಚುನಾವಣಾ ಆಯೋಗ ನಡೆಸುವ ಮತದಾರರ ಮತಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗುತ್ತಿದೆ. ಇದರ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆ. ರಿಯಲ್ ಎಸ್ಟೇಟ್ಗಾಗಿ ರಾಜ್ಯದಲ್ಲಿ ಭೂಕಬಳಿಕೆಯಾಗುತ್ತಿದೆ. ರೈತರು
ಮಧ್ಯಮ ವರ್ಗದವರು, ಬಡವರ ಸಮಸ್ಯೆಗಳಿಗೆ ನಾವುಗಳು ಸದಾ ಸ್ಪಂದಿಸುತ್ತೇವೆಂದರು.



