ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಅಲ್ಲದೆ, ಮುಂದಿನ 7 ದಿನಗಳ ಒಳಗಾಗಿ ಅವರನ್ನು KPSC ಅಧ್ಯಕ್ಷರನ್ನಾಗಿ ಮರುನೇಮಕಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಜುಲೈ 10ರಂದು ರಾಜ್ಯಪಾಲರು ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಸಾಹುಕಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ.
ಕೋರ್ಟ್ನ ಪ್ರಮುಖ ವೀಕ್ಷಣೆಗಳು: ಸಚಿವ ಸಂಪುಟದ ಸಲಹೆ ಕಡ್ಡಾಯ: ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸಲು ರಾಜ್ಯ ಸಚಿವ ಸಂಪುಟದಿಂದ ಯಾವುದೇ ಅಧಿಕೃತ ಶಿಫಾರಸು ಅಥವಾ ಸಲಹೆ ಇರಲಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನಕ್ಕನುಗುಣವಾಗಿ ನಡೆಯಬೇಕು ಎಂಬ ಸಂವಿಧಾನಾತ್ಮಕ ನಿಯಮವನ್ನು ಇಲ್ಲಿ ಅನುಸರಿಸಲಾಗಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಆರೋಪಗಳ ವಿಚಾರಣೆ ಪ್ರತ್ಯೇಕ: ಶಿವಶಂಕರಪ್ಪ ಸಾಹುಕಾರ್ ಅವರ ಮೇಲಿರುವ ಆರೋಪಗಳ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಹೀಗಾಗಿ ಅವರ ವಿರುದ್ಧದ ತನಿಖೆ ಹಾಗೂ ಇತರ ಕಾನೂನು ಪ್ರಕ್ರಿಯೆಗಳು ಯಥಾರೀತಿ ಮುಂದುವರಿಯಲಿವೆ.
ಷರತ್ತು ವಿಧಿಸಿದ ಪೀಠ: ಮರುನೇಮಕದ ಬಳಿಕ, ತಮ್ಮ ಪುತ್ರಿಯ ನೇಮಕಾತಿಗೆ ಸಂಬಂಧಿಸಿದ ಯಾವುದೇ ನಿರ್ಧಾರ ಅಥವಾ ಪ್ರಕ್ರಿಯೆಗಳಲ್ಲಿ ಶಿವಶಂಕರಪ್ಪ ಸಾಹುಕಾರ್ ಭಾಗಿಯಾಗಬಾರದು ಮತ್ತು ವಿಚಾರಣೆಯ ಮೇಲೆ ಪ್ರಭಾವ ಬೀರಬಾರದು ಎಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ.



