ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ತಾಲೂಕಿನ ನೇರಳಘಟ್ಟದಲ್ಲಿ ನಗರದ ಸುಭಾಷ್ ನಗರದ ಪತಂಜಲಿ ಯೋಗ ಶಿಕ್ಷಣ ಶಾಲೆಯ ವತಿಯಿಂದ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಹಿರಿಯ ನಾಗರಿಕರು ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯೋಗಗುರು ಮಂಜುನಾಥ್, ಯೋಗವು ಕೇವಲ ದೈಹಿಕ ಆರೋಗ್ಯಕ್ಕಷ್ಟೇ ಸೀಮಿತವಾಗಿಲ್ಲ. ಮಾನಸಿಕ ನೆಮ್ಮದಿ, ಏಕಾಗ್ರತೆ ಹಾಗೂ ದೇಹದ ಸದೃಢತೆಯನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದೆ ಎಂದು ತಿಳಿಸಿದರು. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಪ್ರತಿಯೊಬ್ಬರೂ ಯೋಗವನ್ನು ತಮ್ಮ ದಿನನಿತ್ಯದ ಬದುಕಿನ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.ದಿನ ನಿತ್ಯ 24 ನಿಮಿಷ ಯೋಗ ಮಾಡಿದರೆ 24 ಗಂಟೆಗಳ ಕಾಲವು ಮನುಷ್ಯ ಚಟುವಟಿಕೆಯಿಂದ ಇರುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಯೋಗಾಭ್ಯಾಸದ ಮಹತ್ವದ ಕುರಿತು ಅರಿವು ಮೂಡಿಸಲಾಗಿದ್ದು, ಆರೋಗ್ಯಕರ ಜೀವನಶೈಲಿಗಾಗಿ ಯೋಗದ ಅಗತ್ಯತೆಯನ್ನು ಪ್ರತಿಪಾದಿಸಲಾಯಿತು. ಯೋಗ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.ಕಾರ್ಯಕ್ರಮದಲ್ಲಿ ಯೋಗ ಗುರುಗಳಾದ ಮಂಜುನಾಥ್,ಲಕ್ಷ್ಮೀ ,ವೆಂಕಟೇಶ್ ಬಾಬು,ರವಿ. ನೈಬರ್ ವುಡ್ ಸಂಸ್ಥೆಯ ಅಧ್ಯಕ್ಷರಾದ ಪವನ್ ಕಾರ್ಯದರ್ಶಿ ಶ್ರೀ ರಾಮ್ ಸೇರಿದಂತೆ ಹಲವರು ಭಾಗವಹಿಸಿದ್ದರು ಭಾಗವಹಿಸಿದ್ದರು.



