ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಡಾ. ಗೊರೂರು ಸಾಹಿತ್ಯ ಪ್ರತಿಷ್ಠಾನ, ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ‘ಡಾ. ಗೊರೂರು ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ'ವನ್ನು ಜುಲೈ 11 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಗಾಂಧಿ ಭವನದ ಮಹದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡೋಜ ಡಾ. ವೂಡೇ ಪಿ. ಕೃಷ್ಣ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಹೆಸರಿನ ಪ್ರತಿಷ್ಠಿತ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ. ಬಿ. ಜಯಚಂದ್ರ ಅವರು ಖ್ಯಾತ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರದಾನ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮುತ್ತಗೆರೆ ಸೀತಾರಾಮ ಅಯ್ಯಂಗಾರ್ ಹಾಗೂ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪುತ್ರಿ ವಾಸಂತಿ ಮೂರ್ತಿ (ಕೆನಡಾ) ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ ಎಂ. ಸಿ. ನರೇಂದ್ರ, ಕೋಶಾಧ್ಯಕ್ಷ ಎಚ್. ಬಿ. ದಿನೇಶ್ ಹಾಗೂ ಗಾಂಧಿ ಭವನದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಡಾ. ರಶ್ಮಿ ಪಿ. ಅವರು ‘ಡಾ. ಗೊರೂರು ಅವರ ಬದುಕು–ಬರಹ' ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮದ ನಿರೂಪಣೆಯನ್ನು ಡಾ. ಪಿ. ಚಂದ್ರಿಕಾ ನಿರ್ವಹಿಸಲಿದ್ದಾರೆ. ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಪ್ರಕಟಣೆಯಲ್ಲಿ ತಿಳಿಸಿದೆ.



