ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವೇದಾವತಿ ನದಿಯು ಸಂಪೂರ್ಣವಾಗಿ ಒಣಗಿಹೋಗಿದ್ದು, ಅಕ್ಕಪಕ್ಕದ ಗ್ರಾಮಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಆದ್ದರಿಂದ, ಭದ್ರಾ ಜಲಾಶಯದಿಂದ ಕನಿಷ್ಠ ಒಂದು ವಾರಗಳ ಕಾಲ ವೇದಾವತಿ ನದಿಗೆ ನೀರು ಹರಿಸಬೇಕು ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಚಿತ್ರದುರ್ಗ ನಗರದ ಮರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೆಂಗಳೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ವೇದಾವತಿ ನದಿಗೆ ನೀರು ಹರಿಸವುದರಿಂದ ನದಿ ತೀರದ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವುದಲ್ಲದೇ ಅಂತರ್ಜಲ ಮಟ್ಟವೂ ವೃದ್ಧಿಸಲಿದೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಮನವಿ ಮಾಡಿದರು.
ಸದ್ಯಕ್ಕೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ತೀವ್ರ ಅಭಾವವಿಲ್ಲದಿದ್ದರೂ, ಮುಂದಿನ ದಿನಗಳಲ್ಲಿ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ವೇದಾವತಿ ನದಿಗೆ ನೀರು ಹರಿಸುವುದು ಅತ್ಯಗತ್ಯಎಂದು ಬಿ.ಜಿ.ಗೋವಿಂದಪ್ಪ ಹೇಳಿದರು.
ಹೊಸದುರ್ಗ ತಾಲ್ಲೂಕಿನ ರೈತರು ಹಾಗೂ ಜನ-ಜಾನುವಾರುಗಳು ಎದುರಿಸುತ್ತಿರುವ ನೀರಿನ ಅಭಾವದ ಕುರಿತು ಮುಖ್ಯಮಂತ್ರಿಗಳು ಹಾಗೂ ಉನ್ನತ ಅಧಿಕಾರಿಗಳ ಗಮನ ಸೆಳೆದಿದ್ದಾರೆ.
ಹೊಸದುರ್ಗ ಭಾಗದಲ್ಲಿ ರಾಗಿ ಹಾಗೂ ಸಾಮೆ ಹೆಚ್ಚಾಗಿ ಬೆಳೆಯುವ ಪ್ರದೇಶವಾಗಿದ್ದು, ಈ ಬಾರಿ ಸೂಕ್ತ ಮಳೆಯಾಗದ ಹಿನ್ನೆಲೆಯಲ್ಲಿ ಎರಡು ಬೆಳೆಗಳನ್ನು ಬೆಳೆಯಲು ಸಾಧ್ಯವಾಗಿಲ್ಲ. ಕೃಷಿ ಇಲಾಖೆ ಬಿತ್ತನೆ ಬೀಜ ಮತ್ತು ಗೊಬ್ಬರದ ಸಿದ್ಧತೆ ಮಾಡಿಕೊಂಡಿದ್ದರೂ, ಮಳೆ ಕೊರತೆಯಿಂದಾಗಿ ರೈತರು ಬಿತ್ತನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಕೆರೆಗಳನ್ನು ತುಂಬಿಸುವ ಯೋಜನೆಗೆ ಒತ್ತಾಯ: ಜಲಾಶಯದಲ್ಲಿ ನೀರಿನ ಲಭ್ಯತೆ ಇದ್ದರೂ ಹಿನ್ನೀರು ಪ್ರದೇಶದಿಂದ ನೀರು ಎತ್ತುವ ಕೆಲಸ ಸಮರ್ಪಕವಾಗಿ ನಡೆದಿಲ್ಲ. ವಿಶೇಷ ಸಣ್ಣ ನೀರಾವರಿ ವಿಭಾಗದಿಂದ ಸಿದ್ಧಪಡಿಸಲಾಗಿರುವ 24 ಕೆರೆಗಳಿಗೆ ನೀರು ತುಂಬಿಸುವ ಅಂದಾಜು ಪಟ್ಟಿಗೆ (ಇsಣimಚಿಣe) ತಕ್ಷಣವೇ ಒಪ್ಪಿಗೆ ನೀಡಿ, ಕಾಮಗಾರಿಯನ್ನು ಜಾರಿಗೆ ತರಬೇಕು ಎಂದು ಬಿ.ಜಿ.ಗೋವಿಂದಪ್ಪ ಒತ್ತಾಯಿಸಿದರು.



