ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಶ್ರೀ ಕೊಂಗಾಡಿಯಪ್ಪ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಎಂ ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು ಅವರ ಜೀವನವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪುತ್ತಿದ್ದಾರೆ ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ತಾವು ಓದಿದ ಶಾಲೆಗೆ ಹಾಗೂ ತಂದೆ ತಾಯಿಗೆ ಒಳ್ಳೆಯ ಹೆಸರು ತರಬೇಕು ಎಂದರು.
ಪ್ರಸ್ತಾವಿಕ ನುಡಿಗಳನ್ನು ಜಿಲ್ಲಾ ನಿರ್ದೇಶಕರಾದ ಉಮರಬ್ಬ ಮಾತನಾಡಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಜನಜಾಗೃತಿಯ ಕಾರ್ಯಕ್ರಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಡಾ.ನವೀನ್ ಕುಮಾರ್ ಮಾತನಾಡಿ ದೊಡ್ಡಬಳ್ಳಾಪುರ ತಾಲೂಕಿನ ಹಲವು ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ,ತಂಬಾಕು. ಧೂಮಪಾನ , ಕೊಕೇನ್ ನಂತಹ ಅಮಲು ಪದಾರ್ಥ ಮಾದಕ ವಸ್ತುಗಳು ಮಾರಾಟವಾಗುತ್ತಿದ್ದು ಮಕ್ಕಳು ಹೆಚ್ಚಾಗಿ ವ್ಯಸನ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿವೆ ಇಂತಹ ಕೃತ್ಯಗಳ ಮೇಲೆ ಪೊಲೀಸ್ ಸದಾ ನಿಗಾವಹಿಸುತ್ತದೆ.
ಮಕ್ಕಳಿಗೆ ಕಾನೂನಿನ ತೊಡಕುಗಳ ಬಗ್ಗೆ ತಾಲೂಕಿನಲ್ಲಿ ಬಾಲ್ಯ ವಿವಾಹ ಅನೇಕ ಪ್ರಕರಣಗಳು ದಾಖಲಾಗುತ್ತಿದ್ದು ಇದರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯ ಹಾಳಾಗುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ನಾಗೇಶ್ ಮಾತನಾಡಿ ದುಶ್ಚಟಗಳ ಮುಕ್ತ ಅಭಿಯಾನ ಮುಂತಾದ ಕಾರ್ಯಕ್ರಮಗಳನ್ನು ಹಲವಾರು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದು ಇದರಿಂದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ತ. ನ. ಪ್ರಭುದೇವ್,ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್ ಗೋವಿಂದರಾಜ್, ತಾಲೂಕು ಯೋಜನಾಧಿಕಾರಿ ದಿನೇಶ್ ಎನ್. ಆರ್ ,ಕೊಂಗಾಡಿಯಪ್ಪ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಶ್ರೀನಿವಾಸ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ರಮೇಶ್ ,ವಾಣಿ ,ಪುಷ್ಪಲತಾ, ಮೇಲ್ವಿಚಾರಕರಾದ ಸವಿತಾ ಉಪಸ್ಥಿತರಿದ್ದರು.



