ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸಚಿವ ಡಿ.ಸುಧಾಕರ್ ಅವರು ಒಬ್ಬ ಅತ್ಯುತ್ತಮ ರಾಜಕಾರಣಿಯಾಗಿದ್ದರು. ಅವರು ಜನಾನುರಾಗಿಯಾಗಿ ಕೆಲಸ ಮಾಡಿದ ರೀತಿ ಇಂದಿನ ಎಲ್ಲ ರಾಜಕಾರಣಿಗಳಿಗೆ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ (ಡಿ. ಸುಧಾಕರ್ ಸ್ಟೇಡಿಯಂ) ಡಿ.ಸುಧಾಕರ್ ಅವರ ಅಂತಿಮ ದರ್ಶನ ಪಡೆದು,ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಡಿ.ಸುಧಾಕರ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಸಮಾಜದಲ್ಲಿ ಉತ್ತಮ ಹೆಸರನ್ನು ಗಳಿಸಿದ್ದಾರೆ. ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಅವರ ಕೆಲಸಗಳ ಬಗ್ಗೆ ಕೇಳಿದಾಗ ಅವರು ಜನರಿಗಾಗಿ ಎಷ್ಟು ಶ್ರಮಿಸಿದ್ದಾರೆ ಎಂಬುದು ತಿಳಿಯುತ್ತದೆ.
ಚಿತ್ರದುರ್ಗ ಮತ್ತು ಹಿರಿಯೂರು ಕ್ಷೇತ್ರದಲ್ಲಿ ಮುಂದಿನ 10 ವರ್ಷಗಳಲ್ಲಿ ಆಗಬೇಕಾದ ಅಭಿವೃದ್ಧಿ ಕೆಲಸಗಳನ್ನು ಅವರು ಈಗಾಗಲೇ ಮಾಡಿ ಮುಗಿಸಿದ್ದಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಅವರ ದೂರದೃಷ್ಟಿ ಅಷ್ಟೊಂದು ಪ್ರಬಲವಾಗಿತ್ತು. ಸ್ತ್ರೀಶಕ್ತಿ ಸಂಘಗಳ ಕಾರ್ಯಕ್ರಮಗಳಲ್ಲಿ ಅವರನ್ನು ಭೇಟಿಯಾದಾಗ, ಅವರಿಗೆ ಸಂಘಟನೆಯ ಮೇಲೆ ಇದ್ದ ನಂಬಿಕೆ ಮತ್ತು ತಳಮಟ್ಟದ ಜನರೊಂದಿಗೆ ಅವರಿಗಿದ್ದ ಸಂಪರ್ಕ ಎಂತಹದ್ದು ಎಂಬುದು ನನಗೆ ಅರಿವಾಯಿತು. ಸಹಕಾರಿ ಕ್ಷೇತ್ರದಲ್ಲಿ ಅವರ ಸೇವ ಅಗಾಧವಾದದು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮತ್ತು ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆ ಸ್ಮರಣೀಯವಾದುದು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಅವರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ನೂತನ ಶಾಸಕ ಸಮರ್ಥ ಶಾಮನೂರು ಇದ್ದರು.


