ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರವು 3 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಬುಧವಾರ (ಆಗಸ್ಟ್ 12) ಮಹತ್ವದ ಆದೇಶ ಹೊರಡಿಸಿದೆ. ಪ್ರಮುಖವಾಗಿ ಇತ್ತೀಚೆಗೆ ವಿವಾದಗಳ ಸುಳಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಗುರುತರ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ವಹಿಸಲಾಗಿದ್ದು, ಇದು ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದಂತೆ KPSC, KEA ಹಾಗೂ ಪಂಚಾಯತ್ ರಾಜ್ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳ ಬದಲಾವಣೆ ಮಾಡಲಾಗಿದೆ.
ಎಚ್. ಪ್ರಸನ್ನ ಅವರಿಗೆ KPSC ಪ್ರಭಾರ: KEA ಮೂಲಕ ಯಶಸ್ವಿಯಾಗಿ ಪರೀಕ್ಷೆಗಳನ್ನು ನಡೆಸಿ ಸೈ ಎನಿಸಿಕೊಂಡಿರುವ ಎಚ್. ಪ್ರಸನ್ನ ಅವರಿಗೆ KPSC ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ ನೀಡಲಾಗಿದೆ.
ಲವಿಶ್ ಓರ್ಡಿಯಾ ವರ್ಗಾವಣೆ: ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಲವಿಶ್ ಓರ್ಡಿಯಾ ಅವರನ್ನು KPSCಯ ಜಂಟಿ ಪರೀಕ್ಷಾ ನಿಯಂತ್ರಕರನ್ನಾಗಿ ವರ್ಗಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಡಾ. ಅರುಂಧತಿ ಚಂದ್ರಶೇಖರ್ಗೆ ಹೆಚ್ಚುವರಿ ಜವಾಬ್ದಾರಿ: ಪ್ರಸ್ತುತ ಪಂಚಾಯತ್ ರಾಜ್ ಆಯುಕ್ತರಾಗಿರುವ ಡಾ. ಅರುಂಧತಿ ಚಂದ್ರಶೇಖರ್ ಅವರಿಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಉದ್ಯೋಗಾಕಾಂಕ್ಷಿಗಳಿಗೆ ಸಮಾಧಾನ:
ಕೆಪಿಎಸ್ಸಿಯಲ್ಲಿ ಇತ್ತೀಚೆಗೆ ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ಸರಣಿ ಅಕ್ರಮ ಆರೋಪಗಳು ಕೇಳಿಬಂದಿದ್ದವು. ಆಯೋಗದ ಅಧ್ಯಕ್ಷರ ಮಗಳಿಗೆ ಹುದ್ದೆ ನೀಡಿದ ಪ್ರಕರಣ ಸೇರಿದಂತೆ ಹಲವು ವಿವಾದಗಳ ಕುರಿತು ಸರ್ಕಾರದ ಮಟ್ಟದಲ್ಲಿ ತನಿಖೆಯೂ ನಡೆಯುತ್ತಿದೆ. ಇದರಿಂದ ಅಭ್ಯರ್ಥಿಗಳು ಕೆಪಿಎಸ್ಸಿ ಮೇಲಿನ ನಂಬಿಕೆ ಕಳೆದುಕೊಂಡಿದ್ದರು. ಆದರೆ, ಕೆಇಎನಲ್ಲಿ ಪಾರದರ್ಶಕ ಪರೀಕ್ಷಾ ಪದ್ಧತಿ ಜಾರಿಗೆ ತಂದ ಹೆಗ್ಗಳಿಕೆ ಹೊಂದಿರುವ ಎಚ್. ಪ್ರಸನ್ನ ಅವರಿಗೆ ಕೆಪಿಎಸ್ಸಿ ಪರೀಕ್ಷಾ ಜವಾಬ್ದಾರಿ ನೀಡಿದ್ದು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮರಳಬಹುದು ಎಂಬ ಸಮಾಧಾನ ಸ್ಪರ್ಧಾಕಾಂಕ್ಷಿಗಳಲ್ಲಿ ವ್ಯಕ್ತವಾಗಿದೆ.



