Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸತ್ಯ ಗೆದ್ದಿದೆ, ವಿರೋಧ ಪಕ್ಷಗಳ ಅಪಪ್ರಚಾರ, ಸುಳ್ಳು ಆರೋಪಗಳು ಸೋತಿದೆ- ಸಿಎಂ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ
, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸೀರ್‌ಅಹ್ಮದ್‌ಖಾನ್‌ಪಠಾಣ್‌, ಅನ್ನಪೂರ್ಣ ತುಕಾರಾಮ್‌ಹಾಗೂ ಸಿ.ಪಿ. ಯೋಗೇಶ್ವರ್‌ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಿಎಂ ತಿಳಿಸಿದ್ದಾರೆ.

ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.

ಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ  ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವೆಲ್ಲಕ್ಕಿಂತಲೂ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ.

        ಈ ಎರಡೂ ಪಕ್ಷಗಳು ಕೂಡಿ ಕೊಂಡು ರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು.  ರಾಜಕೀಯ ದ್ವೇಷ ಸಾಧನೆಗಾಗಿ ನನ್ನ ಕುಟುಂಬದ ವಿರುದ್ದವೂ ಸುಳ್ಳು ಆರೋಪ ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.

ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ  ನನ್ನ ರಾಜಕಾರಣವನ್ನು  ಕಂಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದು ಅವರು ತಿಳಿಸಿದರು.     

ಎರಡನೆಯದಾಗಿ ಬಿಜೆಪಿ ಮತ್ತು ಜೆಡಿಎಸ್ ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ.    

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮತದಾರರ ೧೩೬ ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ  ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರು‌ಮಾಡಿದ್ದರು. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ‌ಮಾಡಿದ್ದರು. ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ ಎಂದು ತಿಳಿಸಿದರು.

        ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಮ್ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂದು ಭಾವಿಸಿರುವುದಾಗಿ ಅವರು ತಿಳಿಸಿದರು.

 ಕೊನೆಯದಾಗಿ ಉಪಚುನಾವಣೆಗಳಲ್ಲಿ ಸೋಲು ಬಿಜೆಪಿ ನಾಯಕರ ಆತ್ಮಾವಲೋಕನಕ್ಕೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆ. ಇನ್ನಾದರೂ ಅವರು ರಾಜಕೀಯ ದ್ವೇಷದ ರಾಜಕಾರಣ ಕೈಬಿಟ್ಟು ರಚನಾತ್ಮಕ ವಿರೋಧಪಕ್ಷವಾಗಿ ಕೆಲಸ ಮಾಡಲಿ. ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು ? ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು  ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಗ್ಯಾರಂಟಿಗಳೇ ಜಾರಿ ಆಗಿಲ್ಲ ಎಂದು ಸುಳ್ಳು ಜಾಹಿರಾತನ್ನೇ ನೀಡಿತು. ನಿರಂತರ ಸುಳ್ಳು, ಅಪಪ್ರಚಾರದಲ್ಲೇ ಈ ಉಪಚುನಾವಣೆ ನಡೆಸಿದ್ದರು ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಎಲ್ಲಾ ಸುಳ್ಳು, ಅಪಪ್ರಚಾರಗಳಿಗೂ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಮಾಡಿದ ಆರೋಪ ನನಗೆ ಬಹಳ ಬೇಸರ ಆಗಿದೆ. ನಾನು ಬಹಳ ವರ್ಷ ಅವರ ಜೊತೆಗೆ ಇದ್ದವನು. ಆದ್ರೂ  ಕೂಡ, ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವುದೇ ನನ್ನ ಗುರಿ, ಸಿದ್ದರಾಮಯ್ಯ ಅಹಂಕಾರ, ಸೊಕ್ಕು ಮುರಿತೀನಿ ಅಂತೆಲ್ಲಾ ಮಾತಾಡಿದರು.

ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ‌ಅವಕಾಶ  ಕೊಟ್ಟಾಗ ಅಧಿಕಾರ ನಡೆಸಿದ್ದೇವೆ. ಸೋತಾಗ ಹೋರಾಟ ಮಾಡಿದ್ದೇವೆ. ಸಾಲದ್ದಕ್ಕೆ ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ ಎಂದು ಜೆಡಿಎಸ್ ನಾಯಕರ ವಿರುದ್ಧ ದೂರಿದರು.

ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಪ್ರತೀ ಬಾರಿ ಮತದಾರರನ್ನು ಬಕ್ರಾ ಮಾಡಿ ಗೆಲ್ತೀವಿ ಎನ್ನುವ ಬುದ್ದಿಯನ್ನು  ಬಿಜೆಪಿಯವರು ಬಿಡಬೇಕು. ಪಕ್ಷದ ಅಧ್ಯಕ್ಷರು, ಮಂತ್ರಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಎಲ್ಲರ ಶ್ರಮಕ್ಕೆ ಸಾರ್ಥಕತೆ ಸಿಕ್ಕಿದೆ.
ವಯನಾಡ್ ನಲ್ಲಿ 4 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಪ್ರಿಯಾಂಕ ಗಾಂಧಿಯವರಿಗೆ ಮತ್ತು ಕೇರಳ ಜನತೆಗೆ ಅಭಿನಂದನೆಗಳನ್ನು ಸಿಎಂ ತಿಳಿಸಿದ್ದಾರೆ.


ಜಾರ್ಖಂಡ್ ನಲ್ಲಿ ಮುಖ್ಯಮಂತ್ರಿ ಸುರೇನ್ ಅವರನ್ನು ED ಯವರು ಜೈಲಿಗೆ ಕಳುಹಿಸಿದ್ದರು. ಬಿಜೆಪಿಯವರು ಸುಳ್ಳು ಕೇಸಲ್ಲಿ ಮುಖ್ಯಮಂತ್ರಿಯವರನ್ನು ಜೈಲಿಗೆ ಕಳುಹಿಸಿದರೂ ಜನತಾ ನ್ಯಾಯಾಲಯದಲ್ಲಿ ಜನ ಅವರ ಪರವಾಗಿ ಜನಾದೇಶ ಕೊಟ್ಟಿದ್ದಾರೆ. ಜಾರ್ಖಂಡ್ ಜನರನ್ನು ಅಭಿನಂಧಿಸುತ್ತೇನೆ ಎಂದು ಇದೇ ವೇಳೆ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!